Home / ಕವನ / ಕವಿತೆ / ನಿರೀಕ್ಷೆ

ನಿರೀಕ್ಷೆ

ಮೋಹನ


ಮೂರು ದಿನಗಳು ಜಾರಿದುವು, ಬರಿ-
ದಾರಿ ಕಾಯುತಲಿರುವೆನು.
ಹಾರಯಿಕೆಯಂತಹದು ! ನನ್ನವ
ಬಾರನೇಕೆನುತಿರುವೆನು.
ಬರುವೆನೆನ್ನುವ ಓಲೆಯಿಲ್ಲವ-
ನರುಹಿದೊಸಗೆಗಳಿಲ್ಲ,
ಬರುವನೆನ್ನುತ ಬಗೆಯಿದೇನೋ
ಮೊರೆಯುತಿದೆ ಸುಳ್ಳಲ್ಲ.
ಎಂತಲೇ ದಿನವೆಲ್ಲಾ….
ಎಂತಲೇ ದಿನವೆಲ್ಲ ಹೀಗೆಯೆ
ನಿಂತು ನಿರುಕಿಪೆನಲ್ಲಾ !


ಸದ್ದನಾವುದ ಕೇಳಿದರೆ ಜು-
ಮ್ಮೆದ್ದ ಮೈಮನದಿಂದ
ಎದ್ದು ನೋಡುವೆ ಇನಿಯನೆಂದೇ
ಹೊದ್ದಿದಾತುರದಿಂದ.
ಆತನಲ್ಲದೆ ಇರಲು ಬಯಕೆಯು
ಬೀತು ಬಳಲಿಕೆಯಾಂತು,
ಕಾತರದಿ ಬಂದೊಳಗೆ ಬೀಳುವೆ-
ಕಾಯ್ದ ಸುಯ್ಲಲಿ-ಸೋತು.
ಮತ್ತೆ ಆಶೆಯು ಕೂಗಿ ….
ಮತ್ತೆ ಆಶಯು ಕೂಗಿ ಕರೆಯಲು
ಒತ್ತಿ ಏಳುವೆ ಬೀಗಿ.


ದೂರ ಬರುತಿರಬಹುದು ನನ್ನಾ
ನೀರನೆಂಬ ವಿಚಾರದಿ,
ಏರಿ ನೆಲೆಮನೆ ಹುಬ್ಬಿನೊಳು ಕೈ-
ಯೂರಿ ನಿರುಕಿಪೆ ದೂರದಿ;
‘ಏನಿದಿವಳಾರನ್ನು ನೋಡುವ-
ಳೇನಿದಾತುರ?’ ಎನ್ನುತ
ಆಡುವುದೆ ಜನ ?-ಎಂದು ಸುತ್ತಲು
ನೋಡುವೆನು ನಾನಂಜುತ
ಬರಲಿರುವನವನೆಂದು….
ಬರಲಿರುವನೆಂಬೀ ಬಗೆಯ ಬರಿ-
ಮೊರೆತಕೇನೆನಲಿಂದು ?
* * *

ಮೂರು ದಿನಗಳು ಜಾರಿದುವು ಬರಿ-
ದಾರಿ ಕಾಯುತಲಿರುವೆನು.
ಹಾರಯಿಕೆಯಂತಹದು ? ನಲ್ಲನು
ಬಾರನೇಕೆನುತಿರುವೆನು.
ಮನವನ್ನೇತರೊಳೊ
ಹೆಣೆದವನ ಮರೆಯಲಿಕೆ
ಹಣುಗಿಯೇ ಹಣುಗುವೆನು, ಆದರೇನು !


ಕಿಡಗೇಡಿ ತಂಗಾಳಿ-
ಯೊಡನೆ ಬಂದಾ ನೆನಹು
ಒಡಲ ಜುಽಮ್ಮೆನಿಸಿ ನವಿರೇರಿಸುವುದು.
ಬೆಳುದಿಂಗಳೊಡಗೊಂಡು
ತಿಳಿಯದಂತೈತಂದು
ಕಳವಳವ ಕರುಳಿನೊಳಗೂರಿಸುವುದು.


ತನ್ನವಳ ಜೊತೆಗೂಡಿ
ಹಾಡುತಿಹ ಹಕ್ಕಿಯುಲಿ
ತನ್ನ ಮಟ್ಟಕೆ ಸುಮ್ಮನಿರಬಾರದೆ?
ನನ್ನ ದೇನಿರಲು ಬಹು-
ದನ್ನೆಯವು ! ಅವನ ನೆನ-
ಪನ್ನು ಕಿವಿಗೊತ್ತಿ ಕಾಡುವುದು ಬರಿದೆ.


ಸುಡಲಿ, ಬಂದಿತಿದೇಕೊ
ಜಡಿಯ ಮೋಡದ ಜಿನುಗು !
ಹಿಡಿದು ಬೆಸೆವುದು ಆತನಾಶೆಯೊಡನೆ,
ಇಡಿದ ಕತ್ತಲೆಯಿರುಳು
ಮಿಡುಕುತೊಬ್ಬಳೆ ಮಲಗಿ-
ದೆಡೆಗೆ ಕಳುಹುವುದವನ ಬಯಕೆಯನ್ನೇ.


ಮುಳಿಸು ಹೆಮ್ಮೆಗಳಲ್ಲಿ
ಮಾಡಿದಾ ನಿರ್ಣಯವು
ಗಳಿಗೆಯರೆಗಳಿಗೆಯೂ ನಿಲ್ಲದಿಹುದು.
ನನಗಿರುವ ಆತುರವು
ಇನಿಯಗೇಕಿರದೆಂದು
ಜಿನುಗಿ ನನ್ನೆದೆಯುಸಿರ ಚೆಲ್ಲುತಿಹುದು.


‘ಇನಿತೊಂದು ಹಲುಬಿ ಕಂ-
ಬನಿಯಿಡುವೆನವಗಾಗಿ
‘ನೆನಪಾದರೂ ಇಹುದೆ ನನ್ನದವಗೆ?’
ಎನುವ ಯೋಚನೆ ಬರಲು
ಮುನಿಸು ಮೊಗದೋರಿ ನಾ-
ನೆನುವೆ ‘ಇನಿತೇಕೆ ಮನದಳಲು ನನಗೆ ?’
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...