Home / ಲೇಖನ / ಇತರೆ / ವಚನ ವಿಚಾರ – ದೇವರ ಹಂಗೇಕೆ

ವಚನ ವಿಚಾರ – ದೇವರ ಹಂಗೇಕೆ

ಆವ ಕಾಯಕವಾದಡೂ ಸ್ವಕಾಯಕವ ಮಾಡಿ
ಗುರು ಲಿಂಗ ಜಂಗಮದ ಮುಂದಿಟ್ಟು
ಒಕ್ಕುದ ಹಾರೈಸಿ
ಮಿಕ್ಕುದ ಕೈಕೊಂಡು
ವ್ಯಾಧಿ ಬಂದಡೆ ನರಳು
ಬೇನೆ ಬಂದಡೆ ಒರಲು
ಜೀವ ಹೋದಡೆ ಸಾಯಿ
ಇದಕ್ಕಾ ದೇವರ ಹಂಗೇಕೆ
ಭಾಪು ಲದ್ದೆಯ ಸೋಮಾ

[ಒಕ್ಕುದ-ಲದ್ದೆ-ಹುಲ್ಲಿನ ಹೊರೆ]

ಲದ್ದೆಯ ಸೋಮನ ವಚನ. ನಮ್ಮ ಪಾಲಿಗೆ ಬಂದ ಕಾಯಕ ಯಾವುದಾದರೂ ಸರಿ. ನಾವೇ ಮಾಡಬೇಕಾದ ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು. ನಮ್ಮ ಕಾಯಕದಿಂದ ಬಂದ ಫಲವನ್ನು ನಮಗಿಂತ ಹಿರಿಯರಾದವರಿಗೆ (ಗುರು), ಲೋಕಕ್ಕೆ (ಲಿಂಗ), ಪ್ರಜ್ಞಾವಂತರಾದವರಿಗೆ (ಜಂಗಮ) ಅರ್ಪಿಸಬೇಕು. ಉಳಿದದ್ದನ್ನು ನಮ್ಮದೆಂದು ಪಡೆದುಕೊಳ್ಳಬೇಕು. ಮಾಡಬೇಕಾದದ್ದು ಇಷ್ಟೇ. ಇದರಾಚೆಗೆ ರೋಗ ಬಂದರೆ ನರಳಬೇಕು, ನೋವಾದರೆ ಒರಲಬೇಕು, ಜೀವ ಹೋದರೆ ಸಾಯಬೇಕು. ಬದುಕು ಇಷ್ಟು. ಇದರಲ್ಲಿ ದೇವರ ಹಂಗು ಯಾಕೆ ಬೇಕು?

ಒಕ್ಕು ಎಂಬ ಮಾತಿಗೆ ಪ್ರಸಾದ ಮತ್ತು ಶುಭದ ಹಾರೈಕೆ ಎಂಬ ಎರಡು ಅರ್ಥಗಳಿವೆ. ನಮ್ಮ ದುಡಿಮೆಯಿಂದ ದಕ್ಕಿದ್ದೇ ಪ್ರಸಾದ. ನಮ್ಮ ದುಡಿಮೆಯಿಂದ ಹಾರೈಸಬೇಕಾದದ್ದು ಒಳಿತನ್ನೇ. ಈ ದುಡಿಮೆಯ ಗುರಿಯಾದರೋ ಸ್ವಾರ್ಥವಲ್ಲ. ಬದುಕಿಗೆ ದಾರಿ ತೋರುವ ಗುರು, ವಿಶ್ವದ ಚೈತನ್ಯ, ಪ್ರಜ್ಞಾವಂತ ಜೀವಿಗಳು ಇವರೆಲ್ಲರಿಗೆ ನಮ್ಮ ದುಡಿಮೆಯ ಫಲವನ್ನು ಅರ್ಪಿಸಿ, ಉಳಿದದ್ದನ್ನು ನಮ್ಮದು ಎಂದುಕೊಳ್ಳಬೇಕು. ಬದುಕು ಎಂದರೆ ಪಡೆಯುವುದಲ್ಲ, ಕೊಡುವುದು, ಬದುಕು ಇಷ್ಟೇ, ನಿಷ್ಠಾವಂತ ದುಡಿಮೆ, ಆ ದುಡಿಮೆಯ ಮೂಲಕ ಅಹಂಕಾರದ ತ್ಯಾಗ. ಇದರಾಚೆಗೆ ಏನೂ ಇಲ್ಲ. ಸುಮ್ಮನೆ ದೇವರನ್ನು ಯಾಕೆ ಕಟ್ಟಿಕೊಂಡು ಗೋಳಾಡುತ್ತೇವೆ? ಕಾಯಿಲೆ ಆದಾಗ ನರಳಬೇಕು, ಬೇರೆ ವಿಧಿಯಿಲ್ಲ. ನೋವಾದರೆ ಅಯ್ಯೋ ಎಂದು ಚೀರಬೇಕು, ಬೇರೆ ವಿಧಿಯಿಲ್ಲ. ಜೀವ ಹೋದಾಗ ಸಾಯಬೇಕು, ಬೇರೆ ವಿಧಿಯಿಲ್ಲ.

ರೋಗ, ಬೇನೆ, ಸಾವು ಇವೆಲ್ಲ ಅನಿವಾರ್ಯವೇ ಆಗಿರುವಾಗ ಇವೆಲ್ಲದರಿಂದ ಕಾಪಾಡು ದೇವರೇ ಎಂದು ಕೇಳುವುದೇ ಮೂರ್ಖತನವಿದ್ದಿತು. ಕೊಟ್ಟ ಕುದುರೆ ಎಂಬ ಅಲ್ಲಮನ ವಚನವನ್ನು ನೆನೆದುಕೊಂಡರೆ ನಮ್ಮ ಪಾಲಿಗೆ ಬಂದ ನಮ್ಮ ಕೆಲಸ ಮಾಡುವುದಷ್ಟೆ ನಿಜ, ಶುಭದ ಹಾರೈಕೆಯಷ್ಟೇ ನಮಗೆ ಸಾಧ್ಯ, ಈ ದುಡಿಮೆ, ಈ ಹಾರೈಕೆಗಳಷ್ಟೇ ಪ್ರಸಾದ; ದೇವರು ಗೀವರು ಎಂಬುದೆಲ್ಲ ಬರಿಯ ಮಾತು ಎಂದು ಈ ವಚನಕಾರ ಹೇಳುವಂತಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...