Home / ಕವನ / ಕವಿತೆ / ಮಹಾ ಪರಿನಿರ್ವಾಣ

ಮಹಾ ಪರಿನಿರ್ವಾಣ


ಕಾಂಡವೇ ಶಿಲೀಕೃತಗೊಂಡು
ಕಲ್ಲಾದ ಪಳೆಯುಳಿಕೆ, ಮರಗಲ್ಲಿನಲಿ
ಕೆತ್ತಿದ ಬುದ್ಧನಿಗೆ
ಅವಳಡುಗೆ ಮನೆಯೀಗ ತಪೋವನ.
ನೀಳ ಕಣ್ಣು ಮುಚ್ಚಿ
ಧ್ಯಾನಕ್ಕೆ ಕೂತ ಅವನೊಂದಿಗೆ
ಅವಳ ನಿತ್ಯ ಕಸುಬಿನಲ್ಲೇ
ಮೌನ ಜುಗಲ್‌ಬಂದಿ.


ಸೊಪ್ಪು ಸೋಸುತ್ತಾ
ಕಾಳು ಬಿಡಿಸುತ್ತಾ
ಪಾತ್ರೆ ತೊಳೆಯುತ್ತಾ
ಮಗುವಿಗೆ ಹಾಲೂಡಿ
ಲಾಲಿ ಹೇಳುತ್ತಾ
ಮರಗಲ್ಲ ಬುದ್ಧನನ್ನು ನೆಟ್ಟಿದ್ದಾಳೆ
ಹೆಣ್ಣ ಪ್ರತಿರೂಪದ ಮೃತ್ತಿಕೆಯಲಿ.


ಗಡಿಬಿಡಿಯಲಿ ಕೈಸುಟ್ಟು
ಬೆರಳು ಕೊಯ್ದು
ಜಾರಿ ಬಿದ್ದು
ನೋವು ಉಮ್ಮಳಿಸಿ
ಬಿಕ್ಕಳಿಸಿದ ಸದ್ದು.
ಒಂದಿಷ್ಟೇ ಕಣ್ತೆರೆದು ನೋಡಿ
ಥಟ್ಟನೆ ಮುಚ್ಚುವ ತಥಾಗತ!
ಅವಳ ನೋವಿಗೆ ಮಿಡುಕುವನೇ?
ತನ್ನ ಸಂಘಕ್ಕೇ ಹೆಣ್ಣ ನಿರಾಕರಿಸಿ
ಅವಳೊಡಲನೇ ಅಪಮಾನಿಸಿ
ಈ ಹಸಿಮಣ್ಣನೊದ್ದು ಮೇಲೇರಿದವನು?


ಆದರೀಗ…
ಈರುಳ್ಳಿ ಹೆಚ್ಚುವ ನೆವದಲಿ
ಒಳಗಿನ ಸಂಕಟಕ್ಕೇ ಬಾಯ್ಬಂದು
ದಳ ದಳ ಉದುರುವ ಅವಳ ಕಣ್ಣೀರಿಗೆ
ಈಗೀಗ ಅವನ ಕಣ್ಣಂಚಿನಲ್ಲೂ
ಕಂಡೂ ಕಾಣದಂತೆ ನೀರ ಪಸೆಯೇ?


ಒಲೆಯ ಕಾವಿಗೆ ಬಿಸಿಯಾಗಿ
ಕುಳಿರ್ಗಾಳಿಗೆ ತಂಪಾಗಿ
ಜೋಗುಳಕ್ಕೆ ನಿದ್ದೆಯಾಗಿ
ಪಾತ್ರೆ ಸಪ್ಪಳಕ್ಕೆ ಕಿವಿಯಾಗಿ
ಅಡುಗೆ ಘಮಕ್ಕೆ ವಾಸನೆಯಾಗಿ
ಅವಳ ತುಡುಮುಡಿಕೆಗೆ ಕಣ್ಣಾಗಿ
ಅರಳುತ್ತಿವೆ ಅವನೊಳಹೊರಗು
ಬುದ್ಧನೆನಿಸಿಕೊಂಡೂ ಮುಕ್ಕಾಗಿ
ಮಿಕ್ಕುಳಿದ ಸಾಕ್ಷಿಗಾಗಿ.


ಹೆಣ್ಣ ಮಿಡಿತದ ಮೃತ್ತಿಕೆಯಲಿ ನೆಟ್ಟ
ಮರಗಲ್ಲ ಬುದ್ಧನಿಗೀಗ
ನೆಲದಾಳದಲ್ಲೆಲ್ಲಾ ಬೇರು
ಕೈಕಾಲು ಎದೆ ತಲೆಗಳೆಲ್ಲ ಚಿಗುರು
ಕಣಕಣದ ಚಲನೆಗೂ ಮಿಡಿವ
ಹೆಣ್ಣ ನೋವಿಗೂ ತುಡಿವ
ಅವನೀಗ ಮರ್ತ್ಯಲೋಕದ ಕೂಸು!

[ಮರದ ಕಾಂಡ ಒಣಗಿ ಅನೇಕ ವರ್ಷಗಳ ಕಾಲ ಮಣ್ಣಿನೊಂದಿಗಿನ ಸಂಪರ್ಕ ದಿಂದ, ರಾಸಾಯನಿಕ ಕ್ರಿಯೆ ನಡೆದು ಖನಿಜವನ್ನು ಹೀರಿ ಮರದ ಕಾಂಡವೇ ಕಲ್ಲಾಗಿ ಪರಿವರ್ತನೆಯಾಗುವ ಸೃಷ್ಟಿ ವಿಶೇಷಕ್ಕೆ ಇಂಗ್ಲಿಷಿನಲ್ಲಿ petrified wood ಎನ್ನುತ್ತಾರೆ. ಅದಕ್ಕೆ ಸಂವಾದಿಯಾಗಿ ‘ಮರಗಲ್ಲು’ ಎಂದಿಲ್ಲಿ ಬಳಸಿದ್ದೇನೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...