Home / ಕವನ / ಕವಿತೆ / ಮಹಾ ಪರಿನಿರ್ವಾಣ

ಮಹಾ ಪರಿನಿರ್ವಾಣ


ಕಾಂಡವೇ ಶಿಲೀಕೃತಗೊಂಡು
ಕಲ್ಲಾದ ಪಳೆಯುಳಿಕೆ, ಮರಗಲ್ಲಿನಲಿ
ಕೆತ್ತಿದ ಬುದ್ಧನಿಗೆ
ಅವಳಡುಗೆ ಮನೆಯೀಗ ತಪೋವನ.
ನೀಳ ಕಣ್ಣು ಮುಚ್ಚಿ
ಧ್ಯಾನಕ್ಕೆ ಕೂತ ಅವನೊಂದಿಗೆ
ಅವಳ ನಿತ್ಯ ಕಸುಬಿನಲ್ಲೇ
ಮೌನ ಜುಗಲ್‌ಬಂದಿ.


ಸೊಪ್ಪು ಸೋಸುತ್ತಾ
ಕಾಳು ಬಿಡಿಸುತ್ತಾ
ಪಾತ್ರೆ ತೊಳೆಯುತ್ತಾ
ಮಗುವಿಗೆ ಹಾಲೂಡಿ
ಲಾಲಿ ಹೇಳುತ್ತಾ
ಮರಗಲ್ಲ ಬುದ್ಧನನ್ನು ನೆಟ್ಟಿದ್ದಾಳೆ
ಹೆಣ್ಣ ಪ್ರತಿರೂಪದ ಮೃತ್ತಿಕೆಯಲಿ.


ಗಡಿಬಿಡಿಯಲಿ ಕೈಸುಟ್ಟು
ಬೆರಳು ಕೊಯ್ದು
ಜಾರಿ ಬಿದ್ದು
ನೋವು ಉಮ್ಮಳಿಸಿ
ಬಿಕ್ಕಳಿಸಿದ ಸದ್ದು.
ಒಂದಿಷ್ಟೇ ಕಣ್ತೆರೆದು ನೋಡಿ
ಥಟ್ಟನೆ ಮುಚ್ಚುವ ತಥಾಗತ!
ಅವಳ ನೋವಿಗೆ ಮಿಡುಕುವನೇ?
ತನ್ನ ಸಂಘಕ್ಕೇ ಹೆಣ್ಣ ನಿರಾಕರಿಸಿ
ಅವಳೊಡಲನೇ ಅಪಮಾನಿಸಿ
ಈ ಹಸಿಮಣ್ಣನೊದ್ದು ಮೇಲೇರಿದವನು?


ಆದರೀಗ…
ಈರುಳ್ಳಿ ಹೆಚ್ಚುವ ನೆವದಲಿ
ಒಳಗಿನ ಸಂಕಟಕ್ಕೇ ಬಾಯ್ಬಂದು
ದಳ ದಳ ಉದುರುವ ಅವಳ ಕಣ್ಣೀರಿಗೆ
ಈಗೀಗ ಅವನ ಕಣ್ಣಂಚಿನಲ್ಲೂ
ಕಂಡೂ ಕಾಣದಂತೆ ನೀರ ಪಸೆಯೇ?


ಒಲೆಯ ಕಾವಿಗೆ ಬಿಸಿಯಾಗಿ
ಕುಳಿರ್ಗಾಳಿಗೆ ತಂಪಾಗಿ
ಜೋಗುಳಕ್ಕೆ ನಿದ್ದೆಯಾಗಿ
ಪಾತ್ರೆ ಸಪ್ಪಳಕ್ಕೆ ಕಿವಿಯಾಗಿ
ಅಡುಗೆ ಘಮಕ್ಕೆ ವಾಸನೆಯಾಗಿ
ಅವಳ ತುಡುಮುಡಿಕೆಗೆ ಕಣ್ಣಾಗಿ
ಅರಳುತ್ತಿವೆ ಅವನೊಳಹೊರಗು
ಬುದ್ಧನೆನಿಸಿಕೊಂಡೂ ಮುಕ್ಕಾಗಿ
ಮಿಕ್ಕುಳಿದ ಸಾಕ್ಷಿಗಾಗಿ.


ಹೆಣ್ಣ ಮಿಡಿತದ ಮೃತ್ತಿಕೆಯಲಿ ನೆಟ್ಟ
ಮರಗಲ್ಲ ಬುದ್ಧನಿಗೀಗ
ನೆಲದಾಳದಲ್ಲೆಲ್ಲಾ ಬೇರು
ಕೈಕಾಲು ಎದೆ ತಲೆಗಳೆಲ್ಲ ಚಿಗುರು
ಕಣಕಣದ ಚಲನೆಗೂ ಮಿಡಿವ
ಹೆಣ್ಣ ನೋವಿಗೂ ತುಡಿವ
ಅವನೀಗ ಮರ್ತ್ಯಲೋಕದ ಕೂಸು!

[ಮರದ ಕಾಂಡ ಒಣಗಿ ಅನೇಕ ವರ್ಷಗಳ ಕಾಲ ಮಣ್ಣಿನೊಂದಿಗಿನ ಸಂಪರ್ಕ ದಿಂದ, ರಾಸಾಯನಿಕ ಕ್ರಿಯೆ ನಡೆದು ಖನಿಜವನ್ನು ಹೀರಿ ಮರದ ಕಾಂಡವೇ ಕಲ್ಲಾಗಿ ಪರಿವರ್ತನೆಯಾಗುವ ಸೃಷ್ಟಿ ವಿಶೇಷಕ್ಕೆ ಇಂಗ್ಲಿಷಿನಲ್ಲಿ petrified wood ಎನ್ನುತ್ತಾರೆ. ಅದಕ್ಕೆ ಸಂವಾದಿಯಾಗಿ ‘ಮರಗಲ್ಲು’ ಎಂದಿಲ್ಲಿ ಬಳಸಿದ್ದೇನೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...