Home / ಕವನ / ಕವಿತೆ / ಆ ಕನ್ನಡಿ ಬೇಕೆಂದರೆ……

ಆ ಕನ್ನಡಿ ಬೇಕೆಂದರೆ……


ನನಗಾಗಿ ನನ್ನದೇ ಒಂದು
ಕನ್ನಡಿ ಬೇಕೆಂಬ
ಗುಪ್ತ ಬಯಕೆಗೆ ಬಿದ್ದಿರುವೆ ಗುರುವೆ

ಕನ್ನಡಿಯೇ ಇಲ್ಲವೆಂದಲ್ಲ
ಊರ ತುಂಬಾ ಕನ್ನಡಿ ನೆಟ್ಟಿದ್ದಾರೆ
ಅವರಿಗಿಷ್ಟದ ಪಾದರಸ
ಇವರಿಗಿಷ್ಟದ ಮಾಪಕ
ಅವರಿಗೆ ಬೇಕೆನಿಸಿದಷ್ಟು ಹೊತ್ತು
ಕಾಯಿಸಿ ಎರಕ ಹೊಯ್ದು
ಕನ್ನಡಿ ಮಾಡಿ
ಕುಳ್ಳಿರಿಸಿದ್ದಾರೆ ಕಟ್ಟು ಹಾಕಿ.
ಬಣ್ಣ ಬಣ್ಣದ ಕನ್ನಡಿ
ಪ್ರತಿಫಲಿಸುವುದೇ ಇಲ್ಲ
ಕಟ್ಟು ಕನ್ನಡಿ!

ಆ ಬಣ್ಣದ ಕನ್ನಡಿಯಲ್ಲೇ
ನಾವೂ ನೋಡಿಕೊಳ್ಳಬೇಕೆಂದು
ಅದರಲ್ಲಿ ನೋಡಿಕೊಂಡರೆ
ಇದೇನು ಕನ್ನಡಿಯೋ
ಅವರದೇ ಭಾವಚಿತ್ರವೋ?
ಕಣ್ಕಟ್ಟೋ?

ನನ್ನದೇ ಕನ್ನಡಿಯಿದ್ದರೆ
ಇಡಿಯಾಗಿ ಬಿಡಿಯಾಗಿ
ನಾನು, ನನ್ನ ರೆಕ್ಕೆ ಪುಕ್ಕ
ಒಳಗಿನ ಸೊಕ್ಕು
ಮುರುಕು ಮುಳ್ಳು
ಅರಳು ಮುದುಡು
ಇಂಚಿಂಚೂ ನೋಡಿಕೊಳ್ಳುವ
ಹಂಬಲದಲಿ ಕಾದಿದ್ದೇನೆ
ದಾರಿ ತೋರು ಗುರುವೇ.


ನಿನ್ನ ತೋರುವ
ಸಿದ್ದ ಕನ್ನಡಿ
ಎಲ್ಲಿಯೂ ಎಂದಿಗೂ
ಬಿಕರಿಗೆ ಸಿಕ್ಕುವುದಿಲ್ಲ ಕಂದ
ಕನ್ನಡಿ ಬೇಕೇಬೇಕೆಂದರೆ
ಇರುವುದೊಂದೇ ದಾರಿ
ತಕ್ಕಡಿಯಲಿ ಪ್ರತಿಕ್ಷಣ ನಿನ್ನನಿಟ್ಟು
ತೂಗಿ ಅಳತೆ ಮಾಡುತ್ತಾ
ಕಣ ಕಣಗಳಿಗೂ
ಪಾರದರ್ಶಕವಾಗಿಸುವ ಲೇಪ ಬಳಿದು
ಆ ನೋವಿಗೆ ಕಾವಿಗೆ
ನಿನ್ನೊಳಗಿನದೆಲ್ಲ ಘನವನೂ
ಪ್ರತಿಫಲನ ಮೂಡುವವರೆಗೆ
ಕರಗಿಸಿ ಕರಗಿಸಿ ತಿಳಿಯಾಗಿಸಬೇಕು.
ಕಂದ, ನೀನೇ ಕನ್ನಡಿಯಾಗಬೇಕು!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...