Home / ಕವನ / ಕವಿತೆ / ಬೈರಾಗಿಯ ಜಡೆ

ಬೈರಾಗಿಯ ಜಡೆ


ಹೊತ್ತು ಕಂತುವ ಮೊದಲೇ
ನಿನಗೆ ಜಡೆ ಹೆಣೆದು
ಮುಗಿಸಲೇಬೇಕೆಂಬುದಿವರ
ಉಗ್ರ ಆದೇಶ.
ನೀನೋ ಅಂಡಲೆವ ಬೈರಾಗಿ!

ನಿಂತಲ್ಲಿ ನಿಲ್ಲುವವನಲ್ಲ
ಕೂತಲ್ಲಿ ಕೂರುವವನಲ್ಲ
ಕ್ಷಣಕ್ಕೊಮ್ಮೆ ಧಿಗ್ಗನೆದ್ದು
ಗರಗರ ದಿಕ್ಕು ತಪ್ಪಿ ತಿರುಗುವ
ವಾಚಾಳಿ ಪಾದದವನು!
ನನ್ನ ಯಾವ ಮಿಕ್ಕುಳಿದ ಋಣವೋ
ನನಗೆ ಮೆಟ್ಟಿದ ಪ್ರಿಯ ಪಿಶಾಚಿ ನೀನು!


ಪುಸಲಾಯಿಸಿ ಗೋಗರೆದು
‘ಬಾರಪ್ಪ ಬಾ ಜಾಣ
ಸುಮ್ಮನೆ ಕೂರೋ ನನ ದೇವಾ
ದಮ್ಮಯ್ಯ ಅತ್ತಿತ್ತ ಅಲುಗಬೇಡ’
ಕಾಡಿಬೇಡಿ ಎಳೆ ತಂದು
ಕುಕ್ಕರ ಬಡಿಸಿದರೂ
ಕತ್ತು ಆಕಾಶಕ್ಕೊಮ್ಮೆ
ಇನ್ನೊಮ್ಮೆ ಭೂಮಿಗೆ
ನನ್ನ ಸಹನೆ ಬೆಂಕಿಗೆ!

ಅದೆಷ್ಟೋ ಕಾಲದಿಂದ
ಎಣ್ಣೆ ಬಾಚಣಿಗೆ ಸೋಕದೇ ಸೊಕ್ಕಿ
ಜಡೆಗಟ್ಟಿದ ನಿನ್ನ ಕೂದಲೋ
ದಂಡಕಾರಣ್ಯ
ಎಲ್ಲಿ ಹೊಕ್ಕು ಹೇಗೆ ಬಿಡಿಸುವುದೋ
ಪರಮ ಸಿಕ್ಕು.


ಇವರದೋ ಒಂದೇ ಆಗ್ರಹ
ಹೊತ್ತು ಮುಳುಗುತ್ತಿದೆ
ಬೇಗ ಮುಗಿಸು
ಬೇಗ ಮುಗಿಸು.

ಅದೇನು ಅಂತಿಂಥಾ ಜಡೆಯೇ
ಹೆಣೆದು ಬಿಸಾಡಲು?
ಹೆಣೆಯ ಬೇಕೀಗ
ಸಹಸ್ರ ಕಾಲಿನ ಜಡೆಯೇ
ಸಹಸ್ರ ನಡೆಯ ಪಾದದೆಜಮಾನನಿಗೆ!

ತಲೆ ಅಲುಗಿಸದೇ
ಸುಮ್ಮನೆ ಕೂರೋ ಮಹಾರಾಯ
ಈಗಿನ್ನೂ ಪುಂಡ ಕೂದಲಿಗೆ
ಎಣ್ಣೆ ಮಿದಿಯುತ್ತಿದ್ದೇನೆ.
ಉಂಡೆಗಟ್ಟಿದ ಸುರುಳಿ
ಗುಂಗುರು ಕೂದಲ
ಎಳೆ ಎಳೆ ಬಿಡಿಸಿ
ಹುಡಿ ಮಾಡಿ
ನಯಗೊಳಿಸಬೇಕಿದೆ.
ಇನ್ನಾಮೇಲೆ ತಾನೇ
ಜಡೆ ಹೆಣಿಗೆ?


ಛೇ! ಕೊಂಚ ತಾಳಿಕೊಳ್ಳಿ
ಬೈರಾಗಿಯೇನೋ ಸರಿಯೇ ಸರಿ
ನಿಮ್ಮದೂ ವರಾತವೇ?
ಕಾಣುತ್ತಿಲ್ಲವೇ ನನ್ನ
ಸಮರ ತಯಾರಿ!
ಕೈ ಕಾಲು ಹರಿಯುತ್ತಲೇ ಇಲ್ಲ.
ಅಯ್ಯೋ ಹೊತ್ತು ಮೀರುತ್ತಿದೆಯಲ್ಲಾ.


ಅದೇನು ಶುಭಲಗ್ನವೋ
ಈಗ ನೀನೂ ಸುಮ್ಮನೆ ಕುಳಿತಿದ್ದೀಯ
ಹಠಮಾರಿ ಕೂದಲೂ ನೋಡು
ಮೆತ್ತಗಾಗಿ ಹೇಳಿದಂತೆ ಬಾಗಿ ಬಳುಕುತ್ತಿದೆ.
ಕೂದಲ ಜೊಂಪೆ ಇಷ್ಟಿಷ್ಟೇ ವಿಂಗಡಿಸಿ
ಒಂದು ಪಾದ, ಎರಡು ಪಾದ
ಮೂರು ಪಾದ, ನಾಲ್ಕನೆಯದು…….
ನೂರು ಇನ್ನೂರು
ಹ್ಹಾ.. ಸಹಸ್ರವೋ ಮತ್ತೂ ಮೇಲೆಷ್ಟೋ……..
ಜಡೆ ಹೆಣೆಯುತ್ತಾ ಹೆಣೆಯುತ್ತಾ
ಎಚ್ಚರದಲಿ ಮುಳಗಿ ಹೋಗಿದ್ದೇನೆ.
ಬೈರಾಗಿಗೇ ಮೈಮರೆವ ಜೊಂಪು!
ಯಾವ ಮಂಕುಬೂದಿಯೋ
ಇವರೋ ಮೂರ್ಚೆಹೋಗಿದ್ದಾರೆ
ಸೂರ್ಯ ಜ್ವಲಿಸುತ್ತಲೇ ಇದ್ದಾನೆ
ಹೊತ್ತಿಗೆ ಮುಳುಗುವುದೇ
ಮರೆತು ಹೋಗಿದೆ!


ಬೈರಾಗಿಗೆ
ಜಡೆ
ಹೆಣೆಯುತ್ತಲೇ
ಇದ್ದೇನೆ….
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...