Home / ಕವನ / ಕವಿತೆ / ಭೂಮಿ

ಭೂಮಿ

ಗುಂಡಗುರುಳಿ ದುಂಡಾಗಿ ಹೊಗೆ ಬೆಂಕಿ
ಒಳಗೇ ಅಮುಕಿ ಹಸಿರು ಚೆಲ್ಲುತ ನಿಂತ ತಾಯೇ
ನಮ್ಮಮ್ಮ ಮಹತಾಯಿ ಭೂಮಿತಾಯೇ
ಹಸಿರಿನ ಪಸೆ ಎಷ್ಟು ಹೊತ್ತೇ ನಿನಗೆ?
ಬೆಂಕಿಯುಗುಳಿ ಒಳಗಿನ ಕಿಚ್ಚ ಹೊರ ಚೆಲ್ಲಿ
ಕಾರಿಕೊಳ್ಳುವ ಬಾಯೇ ನಿನ್ನ ಒಣಗಿದ
ಮೈಯ ಮಡಿಕೆ ಮಡಕೆಯ ಚಾಚಿ
ಶತಶತಮಾನದ ದಾಹ ಇಂಗದ ಬಾಯೇ
ಎಷ್ಟಾಯ್ತೆ ಮಳೆ ನಿನಗೆ ವರ್‍ಷಕೆಷ್ಟಾಯ್ತೆ!
ಮುಂಗಾರ ಮಿಂಚಿನಲಿ ಮಿಂಚುತ್ತ ನಡೆದವಳೇ
ಸ್ವಾತಿ ಚಿತ್ತಾ ಉತ್ತರಾ ಧನಿಷ್ಠಾ….
ಕೊನೆಗೊಮ್ಮೆ ಫಸಲಾಗಿ ಕೊಯ್ಲಾಗಿ
ಹಸಿರ ಚೆಲ್ಲಾಡಿ ಮೆರೆದವಳೇ
ಮತ್ತೇಕೆ ಬಾಯ್ ಬಾಯ್ ಬಿಡುವೆಯೇ?
ಮಾರ್‍ಗಶಿರಕೆಲೆಯುದುರಿಸಿ ಕೋಪ ತೋರುವೆಯೆ?
ವಸಂತನಾಗಮನಕೆಂದೇ ಕೋಗಿಲೆಯ
ಬಡಿದೆಬ್ಬಿಸಿ ಚೀರಿಸುವೆಯೆ?
ಮಲ್ಲಿಗೆ ಮಾವು
ಬದನೆ ಹೂವು ಎಲ್ಲ ಎಲ್ಲರಳಿ ನಗುತಿರಲು
ನೀ ಮಾತ್ರ ಬಾಯಾರಿ ಆಗಸಕೆ ಕಣ್ಣಾಗಿ ನಿಂತೆಯೇಕೆ?
ಮುಂಗಾರಿನ ಚಪಲ ನಿರೀಕ್ಷೆಯಲಿ
ಇಂದಾಗುವುತ್ಸವವ ಕೊಂದೆಯೇಕೆ?
ಬೆವರೊರೆಸಿಕೊಳ್ಳುತ್ತ ಶಪಿಸುತ್ತ ಚೀರುತ್ತ
ಬಿಸಿಲ ಬೇಗೆಯನಿಸಿ ದಣಿದೆಯೇಕೆ?


ಮಳೆಗಾಗಿ ಕಾಯುವ ಸೂಳೆ ಇಳೆ
ಎಷ್ಟು ಮಂದಿ ಇನಿಯರೇ ನಿನಗೆ
ಗೆದ್ದಾಳುವವರು? ಕೊಂದು ಬೆಂದು
ಮಡಿದು ಸ್ವರ್ಗ ಸೇರುವವರು?
ನಿನಗಾಗಿ ಹೊಡೆದಾಡುವವರು?
ಗೆದ್ದವರ ತೊತ್ತು ನೀನು ಸೆರಗ ಹಾಸಿ
ಕರೆವೆ ರಮಿಸಿ ರಮಣ ಎನುವೆ
ಯುಗಯುಗವುರುಳಿದರೂ ಕನ್ಯತ್ವ ಹರಿಯದವಳೇ
ಹಲವು ರಾಜರನು ನುಂಗಿ ನೀರು ಕುಡಿದವಳೇ
ರಕ್ತ ಸ್ನಾನದಲಿ ತೊಯ್ದವಳೇ ನವ ನವೋ
ನ್ಮೇಶ ಶಾಲಿನಿ ನವನವೋಲ್ಲೇಖನ ಶಾಲಿನೀ ಎಷ್ಟು
ಜನ ನಿನ್ನ ಬಗ್ಗೆ ಬರೆದರು ಮತ್ತೆ ಮತ್ತೆ ಬರೆದರು
ಎಷ್ಟು ಕೈ ಕತ್ತಿ ಹಿರಿದವು ಮತ್ತೆಷ್ಟು ಮಡಿದವು.|
ಸಿಂಹಾಸನ ಕೆತ್ತಿ ಕೂರಿಸಿ ಮೆರೆಸುವ
ಮುನಿಸು ತಿರುಗಿತೋ ಕಾಲಡಿಗೆ ಹಾಕಿ
ಹೊಸಕುವೆ ಮತ್ತೆ ಹೊಸ ಗಂಡನ
ಹುಡುಕುವೆ ವಲ್ಲಭಾ ಎನ್ನುವೆ
ಚಿರಯೌವನೀ ಚಿರ ಪ್ರಸವಿನೀ
ಮಾತಾ ನಮೋ ನಮಃ
ಎನೆಂದು ಹಾಡಲಿ ಎಷ್ಟೆಂದು ಹಾಡಲಿ
ನಿನ್ನ ಕಥನ?|


ಮಳೆಗಾಗಿ ಇಳೆಯೋ ಇಳೆಗಾಗಿ ಮಳೆಯೋ
ಬೀಜವೃಕ್ಷ ನ್ಯಾಯದ ಪರಿಧಿ ಬಲ್ಲ ಬ್ರಹ್ಮನಿಗೇ
ಸವಾಲು ಮುಗಿದೂ ಮುಗಿಯದ ಈ ಅವಿನಾಭಾವ
ಸಂಬಂಧ “ನನಗೂ ನಿನಗೂ ಅಂಟಿದ ನಂಟಿನ ಕೊನೆ
ಬಲ್ಲವರಾರು ಕಾಮಾಕ್ಷಿಯೇ” ಬೆದೆ ಬಂದಾಗೊಮ್ಮೆ
ಬೆರೆವೆ ಉಗಿ ಪೊರೆಯಾಗಿ ತೇಲುವ ಈ ನೆಲದ
ಧೂಳಿಗೇ ಗಟ್ಟಿಗೊಳುವೆ ಉಗಿ‌ಉಗಿ ಕೆಂಡವಾಗಿ ಉರಿದ
ಈ ಇಳೆಯ ಮೇಲೇ ತಂಪಾಗಿ ಸುರಿವೆ ಕಾದು ಕಾದು
ಕಾಯದಿದ್ದರೆ ಈ ಇಳೆ ಅಲ್ಲೇ ಇರುವೆ ಹಾಯಾಗಿ
ಬಿಳಿ ಮೋಡವಾಗಿ ತೇಲುವ ಮಳೆ ಕಾಯುವ ನೋಂಪಿ
ಹೊತ್ತ ನದಿಗಳೆಲ್ಲಾ ಕಾದು ಕಾದು ಈ ಇಳೆಯ
ಜನರನು ಸಾಯದಂತೆ ಕಾದು ಕಾದು ಅವರ
ನಾಗರಿಕತೆ ಸಂಸ್ಕೃತಿಗಳನ್ನು ಕಾದು ಕಾದು
ತಾವು ಮಾತ್ರ ಹರಿದು ಸಾಗರ ಸೇರಿವೆ ಅಲ್ಲಿಂದಲೇ
ಉಗಿಯಾಗಿ ಮೋಡವಾಗಿ ಮತ್ತೆ ಮಳೆಯಾಗಿ
ಇಳೆಗೇ ಸುರಿದಿವೆ|


ಅದ್ಯಾಕೇ ಹಾಗೆ ಗಡಗಡ ನಡುಗಿದೆ?
ಒಡಲೆಲ್ಲಾ ಬೇನೆ ಬೆಂಕಿಯೆ ನಿನಗೆ?
ಅಲ್ಲಲ್ಲಿ ಆಗಾಗ ಗಡಗಡನೆ ನಡುಗುತ್ತಿರುವ
ನಿನಗೆ ಮಾಘ ಮಾಸದ ಚಳಿಯೇನೇ
ಮಕ್ಕಳ ಮೇಲೆ ಕೋಪವೇನೇ
ಅಗೆದಗೆದು ನಿನ್ನೆಲ್ಲಾ ಚಿನ್ನ ಬೆಳ್ಳಿ ತೆಗೆ
ದರೆಂದು ಅತ್ತತ್ತು ನೀನು ಹಿಡಿದಿಟ್ಟ ಕಣ್ಣೀರನ್ನು
ತಣ್ಣೀರಾಗಿ ಕುಡಿದರೆಂದು ಬಾವಿಗಳ ತೋಡಿ
ತೋಡಿ ಗೋರಿದರೆಂದು ಕೋಪವ ಕಾರಲು ಬಾಯಿ
ಲ್ಲವೇ ನಿನಗೆ? ಹಕ್ಕಿಲ್ಲವೇ ನಿನ್ನ ಮಕ್ಕಳ ಮೇಲೆ
ಹೀಗೆ ನಂಬಿ ನಿಂತಿದ್ದ ಎಲ್ಲರನು ಎಲ್ಲವನು ಎತ್ತಿ
ಅಲ್ಲಾಡಿಸಿ ಬಿಸಾಡುವುದು? ಕಾಂಕ್ರೀಟಿನ
ಹುಡಿಯಡಿ ಕಿತ್ತ ಕೈಕಾಲು ಸಿಕ್ಕಿಸಿ ಎತ್ತಾ
ಕಿಸುವುದು? ಇದು ತರವೇ ನಿನಗೆ?
ಈ ಮಾರಣ ಹೋಮ?
ಸ್ವಂತ ಮಕ್ಕಳ ರಕ್ತ ಕಾಮ?
*****
ಶೂದ್ರ

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...