Home / ಕವನ / ಕವಿತೆ / ಭೂಮಿ

ಭೂಮಿ

ಗುಂಡಗುರುಳಿ ದುಂಡಾಗಿ ಹೊಗೆ ಬೆಂಕಿ
ಒಳಗೇ ಅಮುಕಿ ಹಸಿರು ಚೆಲ್ಲುತ ನಿಂತ ತಾಯೇ
ನಮ್ಮಮ್ಮ ಮಹತಾಯಿ ಭೂಮಿತಾಯೇ
ಹಸಿರಿನ ಪಸೆ ಎಷ್ಟು ಹೊತ್ತೇ ನಿನಗೆ?
ಬೆಂಕಿಯುಗುಳಿ ಒಳಗಿನ ಕಿಚ್ಚ ಹೊರ ಚೆಲ್ಲಿ
ಕಾರಿಕೊಳ್ಳುವ ಬಾಯೇ ನಿನ್ನ ಒಣಗಿದ
ಮೈಯ ಮಡಿಕೆ ಮಡಕೆಯ ಚಾಚಿ
ಶತಶತಮಾನದ ದಾಹ ಇಂಗದ ಬಾಯೇ
ಎಷ್ಟಾಯ್ತೆ ಮಳೆ ನಿನಗೆ ವರ್‍ಷಕೆಷ್ಟಾಯ್ತೆ!
ಮುಂಗಾರ ಮಿಂಚಿನಲಿ ಮಿಂಚುತ್ತ ನಡೆದವಳೇ
ಸ್ವಾತಿ ಚಿತ್ತಾ ಉತ್ತರಾ ಧನಿಷ್ಠಾ….
ಕೊನೆಗೊಮ್ಮೆ ಫಸಲಾಗಿ ಕೊಯ್ಲಾಗಿ
ಹಸಿರ ಚೆಲ್ಲಾಡಿ ಮೆರೆದವಳೇ
ಮತ್ತೇಕೆ ಬಾಯ್ ಬಾಯ್ ಬಿಡುವೆಯೇ?
ಮಾರ್‍ಗಶಿರಕೆಲೆಯುದುರಿಸಿ ಕೋಪ ತೋರುವೆಯೆ?
ವಸಂತನಾಗಮನಕೆಂದೇ ಕೋಗಿಲೆಯ
ಬಡಿದೆಬ್ಬಿಸಿ ಚೀರಿಸುವೆಯೆ?
ಮಲ್ಲಿಗೆ ಮಾವು
ಬದನೆ ಹೂವು ಎಲ್ಲ ಎಲ್ಲರಳಿ ನಗುತಿರಲು
ನೀ ಮಾತ್ರ ಬಾಯಾರಿ ಆಗಸಕೆ ಕಣ್ಣಾಗಿ ನಿಂತೆಯೇಕೆ?
ಮುಂಗಾರಿನ ಚಪಲ ನಿರೀಕ್ಷೆಯಲಿ
ಇಂದಾಗುವುತ್ಸವವ ಕೊಂದೆಯೇಕೆ?
ಬೆವರೊರೆಸಿಕೊಳ್ಳುತ್ತ ಶಪಿಸುತ್ತ ಚೀರುತ್ತ
ಬಿಸಿಲ ಬೇಗೆಯನಿಸಿ ದಣಿದೆಯೇಕೆ?


ಮಳೆಗಾಗಿ ಕಾಯುವ ಸೂಳೆ ಇಳೆ
ಎಷ್ಟು ಮಂದಿ ಇನಿಯರೇ ನಿನಗೆ
ಗೆದ್ದಾಳುವವರು? ಕೊಂದು ಬೆಂದು
ಮಡಿದು ಸ್ವರ್ಗ ಸೇರುವವರು?
ನಿನಗಾಗಿ ಹೊಡೆದಾಡುವವರು?
ಗೆದ್ದವರ ತೊತ್ತು ನೀನು ಸೆರಗ ಹಾಸಿ
ಕರೆವೆ ರಮಿಸಿ ರಮಣ ಎನುವೆ
ಯುಗಯುಗವುರುಳಿದರೂ ಕನ್ಯತ್ವ ಹರಿಯದವಳೇ
ಹಲವು ರಾಜರನು ನುಂಗಿ ನೀರು ಕುಡಿದವಳೇ
ರಕ್ತ ಸ್ನಾನದಲಿ ತೊಯ್ದವಳೇ ನವ ನವೋ
ನ್ಮೇಶ ಶಾಲಿನಿ ನವನವೋಲ್ಲೇಖನ ಶಾಲಿನೀ ಎಷ್ಟು
ಜನ ನಿನ್ನ ಬಗ್ಗೆ ಬರೆದರು ಮತ್ತೆ ಮತ್ತೆ ಬರೆದರು
ಎಷ್ಟು ಕೈ ಕತ್ತಿ ಹಿರಿದವು ಮತ್ತೆಷ್ಟು ಮಡಿದವು.|
ಸಿಂಹಾಸನ ಕೆತ್ತಿ ಕೂರಿಸಿ ಮೆರೆಸುವ
ಮುನಿಸು ತಿರುಗಿತೋ ಕಾಲಡಿಗೆ ಹಾಕಿ
ಹೊಸಕುವೆ ಮತ್ತೆ ಹೊಸ ಗಂಡನ
ಹುಡುಕುವೆ ವಲ್ಲಭಾ ಎನ್ನುವೆ
ಚಿರಯೌವನೀ ಚಿರ ಪ್ರಸವಿನೀ
ಮಾತಾ ನಮೋ ನಮಃ
ಎನೆಂದು ಹಾಡಲಿ ಎಷ್ಟೆಂದು ಹಾಡಲಿ
ನಿನ್ನ ಕಥನ?|


ಮಳೆಗಾಗಿ ಇಳೆಯೋ ಇಳೆಗಾಗಿ ಮಳೆಯೋ
ಬೀಜವೃಕ್ಷ ನ್ಯಾಯದ ಪರಿಧಿ ಬಲ್ಲ ಬ್ರಹ್ಮನಿಗೇ
ಸವಾಲು ಮುಗಿದೂ ಮುಗಿಯದ ಈ ಅವಿನಾಭಾವ
ಸಂಬಂಧ “ನನಗೂ ನಿನಗೂ ಅಂಟಿದ ನಂಟಿನ ಕೊನೆ
ಬಲ್ಲವರಾರು ಕಾಮಾಕ್ಷಿಯೇ” ಬೆದೆ ಬಂದಾಗೊಮ್ಮೆ
ಬೆರೆವೆ ಉಗಿ ಪೊರೆಯಾಗಿ ತೇಲುವ ಈ ನೆಲದ
ಧೂಳಿಗೇ ಗಟ್ಟಿಗೊಳುವೆ ಉಗಿ‌ಉಗಿ ಕೆಂಡವಾಗಿ ಉರಿದ
ಈ ಇಳೆಯ ಮೇಲೇ ತಂಪಾಗಿ ಸುರಿವೆ ಕಾದು ಕಾದು
ಕಾಯದಿದ್ದರೆ ಈ ಇಳೆ ಅಲ್ಲೇ ಇರುವೆ ಹಾಯಾಗಿ
ಬಿಳಿ ಮೋಡವಾಗಿ ತೇಲುವ ಮಳೆ ಕಾಯುವ ನೋಂಪಿ
ಹೊತ್ತ ನದಿಗಳೆಲ್ಲಾ ಕಾದು ಕಾದು ಈ ಇಳೆಯ
ಜನರನು ಸಾಯದಂತೆ ಕಾದು ಕಾದು ಅವರ
ನಾಗರಿಕತೆ ಸಂಸ್ಕೃತಿಗಳನ್ನು ಕಾದು ಕಾದು
ತಾವು ಮಾತ್ರ ಹರಿದು ಸಾಗರ ಸೇರಿವೆ ಅಲ್ಲಿಂದಲೇ
ಉಗಿಯಾಗಿ ಮೋಡವಾಗಿ ಮತ್ತೆ ಮಳೆಯಾಗಿ
ಇಳೆಗೇ ಸುರಿದಿವೆ|


ಅದ್ಯಾಕೇ ಹಾಗೆ ಗಡಗಡ ನಡುಗಿದೆ?
ಒಡಲೆಲ್ಲಾ ಬೇನೆ ಬೆಂಕಿಯೆ ನಿನಗೆ?
ಅಲ್ಲಲ್ಲಿ ಆಗಾಗ ಗಡಗಡನೆ ನಡುಗುತ್ತಿರುವ
ನಿನಗೆ ಮಾಘ ಮಾಸದ ಚಳಿಯೇನೇ
ಮಕ್ಕಳ ಮೇಲೆ ಕೋಪವೇನೇ
ಅಗೆದಗೆದು ನಿನ್ನೆಲ್ಲಾ ಚಿನ್ನ ಬೆಳ್ಳಿ ತೆಗೆ
ದರೆಂದು ಅತ್ತತ್ತು ನೀನು ಹಿಡಿದಿಟ್ಟ ಕಣ್ಣೀರನ್ನು
ತಣ್ಣೀರಾಗಿ ಕುಡಿದರೆಂದು ಬಾವಿಗಳ ತೋಡಿ
ತೋಡಿ ಗೋರಿದರೆಂದು ಕೋಪವ ಕಾರಲು ಬಾಯಿ
ಲ್ಲವೇ ನಿನಗೆ? ಹಕ್ಕಿಲ್ಲವೇ ನಿನ್ನ ಮಕ್ಕಳ ಮೇಲೆ
ಹೀಗೆ ನಂಬಿ ನಿಂತಿದ್ದ ಎಲ್ಲರನು ಎಲ್ಲವನು ಎತ್ತಿ
ಅಲ್ಲಾಡಿಸಿ ಬಿಸಾಡುವುದು? ಕಾಂಕ್ರೀಟಿನ
ಹುಡಿಯಡಿ ಕಿತ್ತ ಕೈಕಾಲು ಸಿಕ್ಕಿಸಿ ಎತ್ತಾ
ಕಿಸುವುದು? ಇದು ತರವೇ ನಿನಗೆ?
ಈ ಮಾರಣ ಹೋಮ?
ಸ್ವಂತ ಮಕ್ಕಳ ರಕ್ತ ಕಾಮ?
*****
ಶೂದ್ರ

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...