Home / ಕವನ / ಕವಿತೆ / ಹುಣ್ಣಿವೆಯ ಹೊತ್ತಿನ ಹುಟ್ಟು

ಹುಣ್ಣಿವೆಯ ಹೊತ್ತಿನ ಹುಟ್ಟು

(ಒಂದು ಸಾಂಪ್ರದಾಯಿಕ ಭಾವನೆಯ ಉತ್ಪ್ರೇಕ್ಷೆ)


ರಾತ್ರಿ ಸತೀಪತಿ ಚಂದಿರನು-ಕತ್ತಲೆಯೆಂಬಾ ಕುಲಟೆಯಲಿ
ಇರುಳೆಲ್ಲವು ರತನಾಗಿರುತ-ಪರಿಪರಿಯ ಸರಸವಾಡುತಲಿ
ಜಗಕಿಂದು ಮೊಗವ ತೋರಿಸಲು-ಬಗೆಯೊಳು ನಾಚಿಕೆಯೊಂದುತಲಿ,
‘ಮಲಗಿದ ಜನರೇಳುವ ಮೊದಲು
ಮರೆಯಾಗುವೆ’ ನೆಂದು ಜವದೊಳು
ಪಡುವಲ ಸೀಮೆಯ ಬೆಟ್ಟದೊಳು
ಅಡಗಿದನೆಲ್ಲಿಯೊ ತೋಹಿನಲಿ-ಒಡನಿರುವ ಕತ್ತಲೆಯನಗಲಿ!


ಚಿತ್ತವನು ಸೆಳೆದ ಚಂದಿರನು-ಎತ್ತಲೊ ಹೋಗಿರುವುದ ಕಂಡು
ಮತ್ತಾರನಾಶ್ರಯಿಪನೆಂದು ಅತ್ಯಂತ ಕಾತರವನುಂಡು,
ಎತ್ತಲೂ ಸುತ್ತುತಿರಲಂದು – ಹೊತ್ತಿನ ಬರವನು ಬಗೆಗೊಂಡು,
ಅವನೊಡನೆ ಬೆರೆಯಬೇಕೆಂದು
ತವಕದಿಂದ ಕತ್ತಲೆ ಬಂದು
ದಿವಸದೆರೆಯನೆಡೆ ನಿಲಲಂದು
ಕಣ್ದೆರೆದ ಕನಲಿ ಸುಚರಿತನು-ಕೆಂಡಪರಿ ಕಂಡನಾಕೆಯನು.


ಭಾಸ್ಕರನ ಕೋಪವನ್ನರಿದು-ತಸ್ಕರರ ಕೆಳದಿ ಬೆದರಿದಳು.
ಮಿತ್ರನ ಮೊಗ ನೋಡಲು ಹೆದರಿ – ಸುತ್ತುತ ಗಿಡ-ಮರ-ಮೆಳೆಗಳೊಳು
ಮೈಗರೆದಳೊಂದು ತೋಹಿನೊಳು-ಹುಲಿ, ಸಿಂಗಗಳಿಹ ಕಾಡಿನೊಳು
ಕತ್ತಲೆಯ ದುಃಸ್ಥಿತಿಯನರಿದು,
ಆಕೆಯ ಅವಿವೇಕವ ನೆನೆದು,
ಕಾಡಿನರಳುಗಳು ಬಾಯ್ದೆರೆದು,
ಹಿರಿನಗೆಯನಂದು ಹೊಂದಿದುವು-ಸುರಭಿಯನೆಲ್ಲೆಡೆ ಹರಡಿದುವು.


ನಿಜ ನೇಹದಿನಿಯ ನೇಸರಿನಾ-ಪಾವನತೆಯನ್ನು ತಾ ನೋಡಿ,
ಕಮಲಿನೀ ರಮಣಿ ಪ್ರೇಮದಲಿ-ಮೆಲುನಗೆಮೊಗ ಮೇಲಕೆ ಮಾಡಿ,
ಪತಿಯನ್ನು ಕೃತಜ್ಞತೆಯಿಂದ ನಿರುಕಿಸುತ ನಲಿವೊಳೀಜಾಡಿ,
‘ಪರಸತಿಯನಪೇಕ್ಷಿಸದವನು
ನಿಜಸತಿಯ ನಿಚ್ಚದೊಲುಮೆಯನು
ದೊರೆಕಿಸಿ ಚಿರಸುಖವೊಂದುವನು!’
ಎಂದಿಹ ನನ್ನಿಯ ನುಡಿಗಳನು-ಸಾರಿದಳು ಧಾರಿಣಿಗೆ ತಾನು !


ವಲ್ಲಭನಿಲ್ಲದ ವೇಳೆಯಲಿ-ತನ್ನೆಡೆ ಬಂದಾರಡಿಗಳನು
ಹದಿಬದೆಯ ಹುರುಳಿನಲಿ ಬಿಗಿದು ಬಂಧಿಸಿರಲು ಕಮಲಿನಿಯದನು
ಕಾಣುತ, ಕರುಣದಿ ಭಾಸ್ಕರನು-ಕಮಲಿನಿಗೆ ಇಂತು ಉಸುರಿದನು :
‘ಬಂಧಿಸಿದಾ ಮಧುವಾಳಿಯನು
ಬಿಡು ಬಿಡು ಕೊಡು, ಗಡ ಮೋಕ್ಷವನು
ತಾಳಿಹವು ತಕ್ಕ ಶಿಕ್ಷೆಯನು…
ಸಾರ್ಥಕಗೊಳಿಸಲು ಬೇಕದನು-ಸುಮನೆಯೆಂಬ ತವನಾಮವನು;


ನಲ್ಲನ ಇನಿನುಡಿಯಾಲಿಸುತ – ಫುಲ್ಲಾನನೆ ಮರುನುಡಿ ಕೊಡದೆ,
ಹೃದಯದಿ ಕರುಣದ ರಸ ಸುರಿಯೆ- ಮಧುವಾಳಿಯ ನಸು ನೋಯಿಸದೆ,
ಬಿಡುಗಡೆ ಕೊಡಲಾ ಬವರಗಳು-ತಮ್ಮಯ ಗುಂಜಾರವದಿಂದೆ-
ವನಜಾಪತಿಯುಪಕಾರವನು
ನೆನೆ-ನೆನೆದು ಹೊಂದಿ ಹರುಷವನು
ತೋರಿಸಲು ತಮ್ಮ ಹೃದಯವನು
ಇಂಚರದಲಿ ಕೊಂಡಾಡಿದುವು ಮಿತ್ರನ ಮಹಿಮೆಯ ಹಾಡಿದುವು.


ತನ್ನಯ ಕಟ್ಟಳೆ ಮಾರದೆಯೆ-ಬಂಡುಣಿಗಳನ್ನು ಬಿಡಲಂದು
ಮೊಗದಲ್ಲಿ ಮೋದವನು ತಳೆದು-‘ಭಲೆಭಲೆ ಶರಜಿನಿಸತಿ’ ಎಂದು
‘ಇರುಳೆಲ್ಲ ನಿನ್ನ ನಾನಗಲಿ-ಮರುಗಿಸಿ ಕುದಿದೆನು ಮನನೊಂದು’
ಎಂದೀತೆರ ನಯನುಡಿಯಾಡಿ,
ಪ್ರೇಮಾಮೃತವನು ತಾನೂಡಿ,
ತನ್ನಯ ಕೈ ಮುಂದಕೆ ಮಾಡಿ
ಬಿಗಿದಪ್ಪಿದ ಬಾನ್ಮಣಿಯವನು- ತಾವರೆವೆಣ್ಣನು ತಣಿಸಿದನು.


‘ನಿನ್ನೊಲುಮೆಗೆ ಸಲುವ ಫಲವನು-ಚೆಲುವೆಯೆ ನಿನಗೀಯದೆ ಬಿಡೆನು ;
‘ಸತಿಯರಿಗಹಿತವು ನಿಜಪತಿಯು-ಬಯಸುವುದು ಪರಾಂಗನೆಯನ್ನು
‘ಅದರಿಂದೆ ಅನ್ಯರೆನ್ನನ್ನು -ನಿಟ್ಟಿಸಲು ಅವರ ಕಂಗಳನು….’
‘ಸೀದು ಮಾಳ್ಪೆ ಕಣ್ಣಿಲಿಗಳನು,
‘ಪಾವಿತ್ರ್ಯದ ಬೆಲೆ ತೋರುವೆನು!’
ಇಂತೊರೆದು ಸರಸಿಜಾತೆಯನು….
ಸಂತಸದಲಿ ಬಾಯ್ದೆರೆಸಿದನು-ತಾನುಗ್ರತೆಯನ್ನು ವಹಿಸಿದನು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...