Home / ಕವನ / ಕವಿತೆ / ಹುಣ್ಣಿವೆಯ ಹೊತ್ತಿನ ಹುಟ್ಟು

ಹುಣ್ಣಿವೆಯ ಹೊತ್ತಿನ ಹುಟ್ಟು

(ಒಂದು ಸಾಂಪ್ರದಾಯಿಕ ಭಾವನೆಯ ಉತ್ಪ್ರೇಕ್ಷೆ)


ರಾತ್ರಿ ಸತೀಪತಿ ಚಂದಿರನು-ಕತ್ತಲೆಯೆಂಬಾ ಕುಲಟೆಯಲಿ
ಇರುಳೆಲ್ಲವು ರತನಾಗಿರುತ-ಪರಿಪರಿಯ ಸರಸವಾಡುತಲಿ
ಜಗಕಿಂದು ಮೊಗವ ತೋರಿಸಲು-ಬಗೆಯೊಳು ನಾಚಿಕೆಯೊಂದುತಲಿ,
‘ಮಲಗಿದ ಜನರೇಳುವ ಮೊದಲು
ಮರೆಯಾಗುವೆ’ ನೆಂದು ಜವದೊಳು
ಪಡುವಲ ಸೀಮೆಯ ಬೆಟ್ಟದೊಳು
ಅಡಗಿದನೆಲ್ಲಿಯೊ ತೋಹಿನಲಿ-ಒಡನಿರುವ ಕತ್ತಲೆಯನಗಲಿ!


ಚಿತ್ತವನು ಸೆಳೆದ ಚಂದಿರನು-ಎತ್ತಲೊ ಹೋಗಿರುವುದ ಕಂಡು
ಮತ್ತಾರನಾಶ್ರಯಿಪನೆಂದು ಅತ್ಯಂತ ಕಾತರವನುಂಡು,
ಎತ್ತಲೂ ಸುತ್ತುತಿರಲಂದು – ಹೊತ್ತಿನ ಬರವನು ಬಗೆಗೊಂಡು,
ಅವನೊಡನೆ ಬೆರೆಯಬೇಕೆಂದು
ತವಕದಿಂದ ಕತ್ತಲೆ ಬಂದು
ದಿವಸದೆರೆಯನೆಡೆ ನಿಲಲಂದು
ಕಣ್ದೆರೆದ ಕನಲಿ ಸುಚರಿತನು-ಕೆಂಡಪರಿ ಕಂಡನಾಕೆಯನು.


ಭಾಸ್ಕರನ ಕೋಪವನ್ನರಿದು-ತಸ್ಕರರ ಕೆಳದಿ ಬೆದರಿದಳು.
ಮಿತ್ರನ ಮೊಗ ನೋಡಲು ಹೆದರಿ – ಸುತ್ತುತ ಗಿಡ-ಮರ-ಮೆಳೆಗಳೊಳು
ಮೈಗರೆದಳೊಂದು ತೋಹಿನೊಳು-ಹುಲಿ, ಸಿಂಗಗಳಿಹ ಕಾಡಿನೊಳು
ಕತ್ತಲೆಯ ದುಃಸ್ಥಿತಿಯನರಿದು,
ಆಕೆಯ ಅವಿವೇಕವ ನೆನೆದು,
ಕಾಡಿನರಳುಗಳು ಬಾಯ್ದೆರೆದು,
ಹಿರಿನಗೆಯನಂದು ಹೊಂದಿದುವು-ಸುರಭಿಯನೆಲ್ಲೆಡೆ ಹರಡಿದುವು.


ನಿಜ ನೇಹದಿನಿಯ ನೇಸರಿನಾ-ಪಾವನತೆಯನ್ನು ತಾ ನೋಡಿ,
ಕಮಲಿನೀ ರಮಣಿ ಪ್ರೇಮದಲಿ-ಮೆಲುನಗೆಮೊಗ ಮೇಲಕೆ ಮಾಡಿ,
ಪತಿಯನ್ನು ಕೃತಜ್ಞತೆಯಿಂದ ನಿರುಕಿಸುತ ನಲಿವೊಳೀಜಾಡಿ,
‘ಪರಸತಿಯನಪೇಕ್ಷಿಸದವನು
ನಿಜಸತಿಯ ನಿಚ್ಚದೊಲುಮೆಯನು
ದೊರೆಕಿಸಿ ಚಿರಸುಖವೊಂದುವನು!’
ಎಂದಿಹ ನನ್ನಿಯ ನುಡಿಗಳನು-ಸಾರಿದಳು ಧಾರಿಣಿಗೆ ತಾನು !


ವಲ್ಲಭನಿಲ್ಲದ ವೇಳೆಯಲಿ-ತನ್ನೆಡೆ ಬಂದಾರಡಿಗಳನು
ಹದಿಬದೆಯ ಹುರುಳಿನಲಿ ಬಿಗಿದು ಬಂಧಿಸಿರಲು ಕಮಲಿನಿಯದನು
ಕಾಣುತ, ಕರುಣದಿ ಭಾಸ್ಕರನು-ಕಮಲಿನಿಗೆ ಇಂತು ಉಸುರಿದನು :
‘ಬಂಧಿಸಿದಾ ಮಧುವಾಳಿಯನು
ಬಿಡು ಬಿಡು ಕೊಡು, ಗಡ ಮೋಕ್ಷವನು
ತಾಳಿಹವು ತಕ್ಕ ಶಿಕ್ಷೆಯನು…
ಸಾರ್ಥಕಗೊಳಿಸಲು ಬೇಕದನು-ಸುಮನೆಯೆಂಬ ತವನಾಮವನು;


ನಲ್ಲನ ಇನಿನುಡಿಯಾಲಿಸುತ – ಫುಲ್ಲಾನನೆ ಮರುನುಡಿ ಕೊಡದೆ,
ಹೃದಯದಿ ಕರುಣದ ರಸ ಸುರಿಯೆ- ಮಧುವಾಳಿಯ ನಸು ನೋಯಿಸದೆ,
ಬಿಡುಗಡೆ ಕೊಡಲಾ ಬವರಗಳು-ತಮ್ಮಯ ಗುಂಜಾರವದಿಂದೆ-
ವನಜಾಪತಿಯುಪಕಾರವನು
ನೆನೆ-ನೆನೆದು ಹೊಂದಿ ಹರುಷವನು
ತೋರಿಸಲು ತಮ್ಮ ಹೃದಯವನು
ಇಂಚರದಲಿ ಕೊಂಡಾಡಿದುವು ಮಿತ್ರನ ಮಹಿಮೆಯ ಹಾಡಿದುವು.


ತನ್ನಯ ಕಟ್ಟಳೆ ಮಾರದೆಯೆ-ಬಂಡುಣಿಗಳನ್ನು ಬಿಡಲಂದು
ಮೊಗದಲ್ಲಿ ಮೋದವನು ತಳೆದು-‘ಭಲೆಭಲೆ ಶರಜಿನಿಸತಿ’ ಎಂದು
‘ಇರುಳೆಲ್ಲ ನಿನ್ನ ನಾನಗಲಿ-ಮರುಗಿಸಿ ಕುದಿದೆನು ಮನನೊಂದು’
ಎಂದೀತೆರ ನಯನುಡಿಯಾಡಿ,
ಪ್ರೇಮಾಮೃತವನು ತಾನೂಡಿ,
ತನ್ನಯ ಕೈ ಮುಂದಕೆ ಮಾಡಿ
ಬಿಗಿದಪ್ಪಿದ ಬಾನ್ಮಣಿಯವನು- ತಾವರೆವೆಣ್ಣನು ತಣಿಸಿದನು.


‘ನಿನ್ನೊಲುಮೆಗೆ ಸಲುವ ಫಲವನು-ಚೆಲುವೆಯೆ ನಿನಗೀಯದೆ ಬಿಡೆನು ;
‘ಸತಿಯರಿಗಹಿತವು ನಿಜಪತಿಯು-ಬಯಸುವುದು ಪರಾಂಗನೆಯನ್ನು
‘ಅದರಿಂದೆ ಅನ್ಯರೆನ್ನನ್ನು -ನಿಟ್ಟಿಸಲು ಅವರ ಕಂಗಳನು….’
‘ಸೀದು ಮಾಳ್ಪೆ ಕಣ್ಣಿಲಿಗಳನು,
‘ಪಾವಿತ್ರ್ಯದ ಬೆಲೆ ತೋರುವೆನು!’
ಇಂತೊರೆದು ಸರಸಿಜಾತೆಯನು….
ಸಂತಸದಲಿ ಬಾಯ್ದೆರೆಸಿದನು-ತಾನುಗ್ರತೆಯನ್ನು ವಹಿಸಿದನು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...