Home / ಕವನ / ಕವಿತೆ / ಚಂದ್ರಗ್ರಹಣ

ಚಂದ್ರಗ್ರಹಣ

(ಜೀವನದಲ್ಲಿಯ ಒಂದು ಅನುಭವದ ಅನ್ಯೋಕ್ತಿಯಿದು.)


‘ಇರುಳೆಲ್ಲವೂ ತಿರುಗಿ ತಿರೆಗೆ ಚೆಲುವನು ಬೀರಿ,
ನರರ ಕಣ್‌ಮನ ತಣಿವ ತೆರದಿ ಒಲವನು ತೂರಿ,
ಚರಿತಾರ್ಥನಾಗಲಿಕೆ ಸರಿಯಿದೇದಿನ’ ಎಂದು,
ಹುಣ್ಣಿಮಯ ತಣ್‌ಗದಿರ ತುಂಬುಮೊಗದಲಿ ಬಂದು,
ಅಳತೆಯಿಲ್ಲದ ಪಳುಕು-
ಸೆಳೆಯಂತಿರುವ ತನ್ನ
ಹೊಳೆವ ಕೈ ಕೆಳಗಿಳುಹಿ,
ಹೊನ್ನ ಹುಡಿಯನ್ನು ಹಸನೆಣ್ಣೆಯಲ್ಲಿ ಹೊರೆದು,
ಬಣ್ಣ ಬರೆದನು ಇಳೆಗೆ ಕಲೆಯ ನೆಲೆಯರಿದು.


ಬೆಳಕಿನೊಂದಿಗೆ ರವಿಯು ಬಿರುಬಿಸಿಲ ಪಸರಿಸಿರೆ
ಝಳತಾಗಿ ಜೀವ ಕುಲ ತಳಮಳಿಸುತಿರಲು, ಪೆರೆ
ಬೆಳಕಿನೊಡವೆರಸಿ ತನ್ನೊಡಲಿನಮೃತವ ಸುರಿಸಿ,
ಎಳನಗೆಯ ಮಲ್ಲಿಗೆಯ ಅರಳುಗಳ ಮಳೆಗರಿಸಿ
ನೆಲಕೆ ತಂಪನು ನೀಡಿ,
ಜೀವಿಗಳ ಮೈ ತೀಡಿ,
ಸುಖ-ಶಾಂತಿಗಳನೂಡಿ,
ಜಗವನೆಲ್ಲವ ನಗಿಸಿ ಸೊಗಸನೊಂದಿರುವ-
ನಗುನಗುತ ಬಾನ ತೊರೆಯೊಳು ತೇಲುತಿರುವ.


ಏನಿದೇನಿದು ಚಿತ್ರ? ಬಾನೊಳಾಡುವ ಪೆರೆಯು
ಹೀನಕಳೆಯವನಾಗುತಿಹನೇಕೆ? ಅಚ್ಚರಿಯು!
ನೋಡು ನೋಡುವುದರೊಳೆ ಎನಿತು ಇದು ಮಾರ್‍ಪಾಡು?
ಮೋಡ ನಸುವೂ ಇಲ್ಲ, ಆದರೆಯು ಈ ಪಾಡು!
ಚೆಲುವು ಜಾರುತ್ತಲಿದೆ,
ಹೊಳಪು ಹಾರುತ್ತಲಿದೆ,
ಕೊಳೆಯು ಹೇರುತ್ತಲಿದೆ-
ಬಾಡಿರುವ ಹೊನ್ನರಳ ತೆರ ತೋರುತಿಹನು-
ನೋಡುಗರ ಕಣ್- ಮನದ ತಣಿವ ಕಳೆದಿಹನು.


ಅರಿವು ಮಿರುಗುವ ಎದೆಯು ಮುನಿಯ ಮನವಲ್ಲಾಡೆ,
ಮರೆವು ಅವನನು ಮುಸುಕುವಂತೆ-ಪೆರೆಮೊಗ ಬಾಡೆ,
ಎದ್ದು ಹೊರಟಿದೆ ನೆಲದೊಳಿದ್ದ ಹೊಂಬಣ್ಣವದು;
ಇದ್ದಲಿನ ಹುಡಿಯೆರಚಿದಂತೆ ಕತ್ತಲೆ ಕವಿದು
ಎತ್ತಲೂ ಹರಡಿಹುದು,
ಗೊತ್ತಾಗದೇನೊಂದು,
ಹೊತ್ತು ಎಂತಹದಿಂದು?
ಹೀಗೇತಕಾಗಿದೆಯೊ! ಹಾಂ! ತಿಳಿದೆ, ಅಹುದು!
ಈಗ ಚಂದ್ರನಿಗೆ ಗ್ರಹಣದ ಸಮಯವಿಹುದು!


ಗ್ರಹಣಸಮಯವು ಇಹುದು; ಕುಹಕಿ ಯಹ ಗರವೊಂದು
ಗುಹೆಯಂತೆ ಬಾಯ್ದೆರೆದು ನೊಣೆಯಲಿಕ ನಿಂದಿಹುದು.
ಎಂತಲೇ ತಿಂಗಳಿನ ಕಾಂತಿ ಕುಂದುತಲಿಹುದು-
ಇಂತಹನ ಹಿಂಸಿಸುವುದೆಂಥ ಗರವಿರಬಹುದು?
ಚೆಲುವಿಕೆಗೆ ನೆಲೆಯಿವನೆ,
ಒಲವಿನಾ ಸೆಲೆಯಿವನೆ,
ಕಳೆಯ ಹಿರಿಹೊಳೆಯಿವನೆ!
ಅಯ್ಯೋ, ಏನನ್ಯಾಯ! ಈತಗೂ ಹಗೆಯೆ?
ಅಯ್ಯ! ಜಗದೊಡೆಯ! ನಿನಗೆಲ್ಲವಿದು ನಗೆಯೆ?


ಕೇಡು- ಹಗೆ- ಪೀಡೆ-ಗರ ಕಾಡಬಹುದಾರನ್ನು?
ಖೋಡಿ-ಕೇಡಿಗ-ಕವಡಿಯಾದ ನಾಡಾಡಿಯನು!
ಜಗದಾಪ್ತನೀತ, ಇವನಿಗು ಹಗೆಗಳಿಹರೇನು?
ಜಗವನೇ ಸೊಗದೊಳಿಡೆ ಹಗಲಿರುಳು ಹವಣಿಪನು.
ಎಳೆಯರೆಲ್ಲರು ಇವನ
ಕಳೆಗಳಿಗೆ ಮನಸೋತು,
ಒಲವಿನೊಲವಾಗಿರುವ
ತಮ್ಮ ತಾಯಿಗೆ ತಮ್ಮನೆಂದು ತಿಳಿಯುವರು-
‘ನಮ್ಮ ಚಂದಮಾಮ’ ಎನುತ ಹಿಗ್ಗುವರು.


ಕೊಡುಗೂಸುಗಳು ಇವನ ಬೆಡಗು-ಗಾಡಿಗೆ ಬೆರೆತು,
ಪಡೆಯಲಿಹ ಒಡನಾಡಿ ಸೆರೆಯಂತೆ ಇರಲೆಂದು,
ಮನದೆರಕದಿಂದ ಮೈ ಮರೆದು ಲಜ್ಜೆ ಯನುಳಿದು
‘ಇನಿಯ ಚಂದ್ರಮರಾಯ!’ ಎಂದು ಒಕ್ಕಣಿಸುವರು.
ನಲ್ಲ-ನಲ್ಲೆಯರೊಂದಿ
ಚೆಲ್ಲಾಟಗಳನಾಡೆ-
ಉಲ್ಲಸದೊಳೋಲಾಡೆ-
ಎಲ್ಲರೀ ಚೆಲ್ಲಿಗನ ಕೆಳೆಯ ಬಯಸುವರು-
‘ಇಲ್ಲ ಸರಿ ಇದಕೆ’ನುವ ಸೊಗವ ಸಾರುವರು.


ಬಾಳುವೆಯ ತಿರುಳೆಂದು ತಿಳಿದ ಹಸುಮಕ್ಕಳನು
ಹೇಳಲಾಗದ ಹೃದಯದೊಲವಿಂದೆ ತಾಯದಿರು
ಬಲು ಮುದ್ದು ಮಾಡಿ ಕರೆಯುವರಾವ ಹೆಸರಿಂದೆ?
‘ಚೆಲುವ ಚೆಂದಿರ!’ ಎಂದೆ-ಬೇರೆ ಇನ್ನಾವುದಿದೆ?
ಎಲ್ಲರೊಲವಿನ ಸರಿಗೆ
ಸಲ್ಲುವಂತೆಯೆ ತೂಗೆ
ಇಲ್ಲವೀತನ ಹಾಗೆ!
ಮಾತಿನಾಚೆಯ ಬಗೆಯ ಮೌನಗೀತವ ಹಾಡಿ,
ಈತ ಜಡಗಳನು ಸಹ ನಲಿಸುವನುಸಿರ ನೀಡಿ.


‘ಸುರರ ಗರುವಿಕೆಯೇನು? ನರರ ಕಿರುಕುಳವೇನು?
ಸರಿಯೆ ಎಲ್ಲರು!’ ಎಂಬ ಸಮದರ್ಶಿ ಚಂದಿರನು-
ಸುರಿಸುತಿರುವನು ನಿರುತ ಧರೆಗೆ ಸವಿಸೊದೆಯನ್ನು ;
ಸರಿಹೋಲುವರಾರು ಈ ಯೋಗಿರಾಜನನು?
ಇವನೊಡನೆಯೂ ಹಗೆಯೆ?
ಇವನಲಿಯು ಕೀಳ್‌ಬಗೆಯೆ?
ಇವನಿಗೂ ತಗುಬಗಿಯೆ?
ರವಿಯ ರಾಜ್ಯದೊಳು ಕಾವಳದ ಹಾವಳಿಯೆ ?
ಸುವಿಮುಕ್ತ ಜೀವರಿಗು ಭವದ ಬಳಲಿಕೆಯೆ ?

೧೦
ಭಂಗಕೊಳಗಾಗಿಸಲು ತಿಂಗಳಿನ ತಪ್ಪೇನು ?
ಕೊಂಗಿಗಳು ಒಪ್ಪು-ತಪ್ಪುಗಳ ನೋಡುವರೇನು ?
ಬಹುಜನಕೆ ಬೇಕಾದ ಮಹಿಮನನು ಕಂಡೊಂದು
ಕುಹಕಿ ತಾ ಸಹಿಸದೆಯೆ ಬರಿದೆ ವೈರವ ತಳೆದು
ಖೋಡಿಗಳೆಯುತೆ ಹಳಿದು,
ಕಾಡಿ ಪೀಡಿಸುವುದಿದು
ರೂಢಿನಿಯಮವೆ ಇಹುದು.
ಹಾಲಗಡಿಗೆಯಲಿ ಹುಳಿಬೆರಸಿ ಹಿಗ್ಗುವುದು,
ಕೀಳುಜೀವದ ಹುಟ್ಟು ಗುಣವೆ ಆಗಿಹುದು.

ನೊಣೆಯಲಿಗೆ ಬಂದಿರುವ ಹಗೆಯನ್ನು ಹಣಿದು,
ಮಿನುಗದಿಹನೇ ಮುನ್ನಿನಂತೆ ಪೂರ್ಣೇಂದು?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...