Home / ಕವನ / ಕವಿತೆ / ಚೆಲುವಿನ ಬೇಟೆ

ಚೆಲುವಿನ ಬೇಟೆ


ಹಗಲು ಮುಗಿವ ಸಮಯ ; ದಿನಪ ಜಿಗಿಯಲಿದ್ದ ಬಾನಿನಿಂದೆ.
ಒಗೆದು ಸಂಜೆಗೆಂಪ ತುಂಡುಮುಗಿಲುಗಳಿಗೆ ಬಣ್ಣ ಬರೆದು,
ಪಸಲೆನೆಲಕೆ ಸೊಬಗ ಸಲಿಸಿ, ಹಸಿರಿನೆಲೆಯ ಕಳೆಯ ಬೆಳಸಿ,
ಮಿಸುನಿವಿಸಿಲ ಪಸರಿಸುತಲಿ ರಸೆಯನಾತ ರಂಜಿಸಿದ್ದ.
ಕಾಲವೇನೊ ಬಾಳ ಸೊಗಸು
ಎಲ್ಲ ಕಡೆಗು ಚೆಲ್ಲ ಬೆಳಸು,
ಬಯಸಿತದನು ಉಣಸು ಮನಸು,
ಬಳಿಯಲಿರುವ ಗೆಳೆಯರನೂ ಬರಲು ಕರೆದೆನು –
ಹೊಳೆಯ ತಡಿಯ ತೋಟದೆಡೆಗೆ ಹೊರಟು ನಡೆದೆನು.


ಗೆಳೆಯರೊಡನೆ ಕೆಲೆದು ನಗುತ ಹೊಳೆಯ ಬಳಿಗೆ ಬರುತಲಿರೆ-
ಬಲದ ಬದಿಗೆ ಹೊಂದಿಯಿರುವ ತಳಿತ ಹೊಂಗೆಮರವ ಕಂಡೆ;
ತಿಳಿಯ ಹಸಿರಿನೆಳೆಯ ತಳಿರು ಬೆಳೆದ ಹಸಿರ ಬಲಿತ ತಳಿರು,
ಇಳಿಯ ಬಿಸಿಲಿನೊಳುಪ ಹೊರೆದು, ಸುಳಿವ ಗಾಳಿಗೊನೆದು ತೊನೆದು
ಸೂಸುತಿದ್ದುವಲ್ಲಿ ನಗೆಯ,
ಸೂರೆಗೈದುವೆನ್ನ ಬಗೆಯ,
ಮುಂದಕರಿಸದಾದೆನಡಿಯ;
ತಳಿರ ಸೊಬಗಿನಲಿಯೆ ನೋಟ ನೆಲಸಿ ನಿಂದೆನು;
ಚೆಲುವನಿದನು ಕಳೆದು ನಡೆವುದೆಂತು ಎಂದೆನು!


ಒಡನೆ ಕೆಳೆಯರಿದ್ದರಲೆ ? ನಡೆದುಬಿಟ್ಟರವರು ಮುಂದೆ;
ತಡೆವುದೆಂತು ನಾನು ಹಿಂದೆ ? ಹಾಗೆ ನಸುವೆ ನಿಂತು ಬಗೆದೆ :
ಮನವನೆಳೆದುಕೊಂಡ ತಳಿರ ಗೊನೆಯನೊಂದ ಮುರಿದುಕೊಂಡೆ,
ಎನಿತೊ ನಲುಮೆಯಿಂದಲದನು ತನುವಿಗೊತ್ತಿಕೊಳುತ ನಡೆದೆ.
ಅಡಿಯನಿಟ್ಟೆ ಬೇಗ; ಮುಂದೆ
ನಡೆದಿರುವರ ಸಾರಿ ಬಂದೆ;
ನಡೆಯಿತೆನಿತೊ ಮಾತು ಅಂದೆ.
ಓತು ತಂದ ಗೊನೆಯ ತಳಿರನೊಂದನೊಂದನು-
ಮಾತಿನಲ್ಲಿ ಮರೆತು ಹರಿದು ಹಿಸುಕಿ ಒಗೆದೆನು.


ಬಂದೆವಾಗ ಬನಕೆ; ಒಡನೆ ಬಂದ ಕೆಳೆಯರವರು ಕಲ್ಲಿ-
ನೊಂದು ಜಗುಲಿಯಲ್ಲಿ ಕುಳಿತು, ಮುಂದೆ ಸಾಗಿಸಿದರು ಮಾತು
ಕುಳಿತುಕೊಳ್ಳಲಿಲ್ಲ ನಾನು ಉಳಿದೆನವರ ಬರಿಯ ಹರಟೆ;
ಸುಳಿದು ಬರುವೆ ಬನದೊಳೆಂದು ಅಲೆದಾಡುತ ಹಾಗೆ ಹೊರಟೆ.
ಕಂಪಿನೆಲೆಯ ಗಿಡಗಳೇನು!
ಜೊಂಪಿನಲರ ಲತೆಗಳೇನು!
ಸೊಂಪ ನೋಡಿ ತಣಿದೆ ನಾನು.
ಎಡೆಯೊಳೊಂದು ಒಳುಗುಲಾಬಿಗಿಡವ ಕಂಡು ತಡೆದನು;
ಗಿಡದೊಳಿದ್ದದೊಂದೆ ಹೂವ ಬೆಡಗನೇನನೆಂಬೆನು ?


ಹಸಿರುತಳಿರ ತುತ್ತತುದಿಗೆ ಮಿಸುಕಾಡುತ ಮೆಲುಗಾಳಿಗೆ-
ಎಸೆಯುವರಳ ಕಂಡು ಕಣ್ಣ ಹಸಿವು ಹೆಚ್ಚೆ, ನಿಂತೆ ಹಾಗೆ,
‘ಹಸಿರು ಸೀರೆಯುಟ್ಟು ಸೆರಗ ಮುಸುರೆ ತಾಯಿ ಮಲಗಿಸಿರಲು-
ಮುಸುಕ ಸರಿಸಿ ತಾಯ ನೋಳ್ಪ ಹಸುಳೆಯ ಮೊಗವಿದುವೊ?’ ಎಂದೆ.
ನಲ್ಲ ಬಿನದದಲ್ಲಿ ನುಡಿದ
ಲಲ್ಲೆ ವಾತುಗಳಿಗೆ ನಾಚಿ
ನಲ್ಲೆ ತನ್ನ ಸೆರಗ ಚಾಚಿ-
ಚೆಲ್ವಮೊಗವ ಮುಚ್ಚಿಕೊಳ್ಳಲು ಸೆರಗು ಸರಿದು ತೋರುವ-
ಗಲ್ಲದ ತೆರ ಬೀರಿತರಳು ಹೊಸತುಬಗೆಯ ಚೆಂದವ


‘ಇನಿದುತಿನಿಸ ನಿನಗೀಯುವೆ, ಕುಣಿಕುಣಿಯುತ ಬಳಿಗೆ ಬಾರೊ!’
ಎನುತ ಕರೆಯೆ ನಮ್ಮ ಮುದ್ದ ಮಿನುಗುನಗೆಯ ಮೊಗದಿ ಬಂದು,
ಕೈಯ ನೀಡಿ ಬೇಡಲದನು, ‘ಬಾಯನು ತೆರೆ’ ಎನಲು ನಾನು,
ಬಾಯ ತರೆದು ನಿಲ್ಲಲವನ ಬಾಯಿ ಹೀಗೆ ಹೊಳವುದಲೇ?’-
ಹೀಗೆ ಎನಿತೊ ಮನದಿ ಬಗೆದೆ,
ಎವೆಯಿಕ್ಕದೆ ನೋಡುತಿರ್‍ದೆ,
ನೆಟ್ಟ ದಿಟ್ಟ ಕೀಳದಾದೆ.
ಕಳೆದೆನಿಂತದೇಸೊ ಕಾಲ; ಬಳಿಕ ಮೆ-ಲ್ಲ-ಕೆ-
ಅಲರ ಕೊಯಿದುಕೊಂಡು ಮರಳಿ ನಡೆದ ಹಿಂದಕೆ.


ಎತ್ತಿಕೊಂಡು ಕೈಗೆ ಹೂವ ಮುತ್ತು ಕೊಟ್ಟೆ ಮೋಹದಿಂದೆ;
ಒತ್ತಿಕೊಂಡೆ ಗಲ್ಲಗಳಿಗೆ, ಮತ್ತೆ ಮತ್ತೆ ಮೂಸಿ ನಲಿದೆ.
ಬೆರಳಿಂದಲಿ ತಿರುಗಿಸುತಲಿ, ಮರಳಿ ಮರಳಿ ನಿರುಕಿಸುತಲಿ,
ಅರಿವು ಇರದ ತೆರದಿ ನಡೆದುಬರುತ ಕೆಳೆಯರನ್ನು ಕಂಡೆ.
ನಡೆದೆ ಇದ್ದಿತವರ ಮಾತು,
ಹರಟೆಗೆನ್ನ ಮನವೆಳಸಿತು,
ವಾದ-ಚರ್ಚೆ ಬಲು ನಡೆಯಿತು.
ಹುರುಳು ಇರದ ಹರಟೆಗಳಿಗೆ ಮನವನಾಗ ಮಾರಿದೆ;
ಅರಳಿನೆಸಳನೊಂದೊಂದನು ಹರಿದು ಹೊಸೆದು ತೂರಿದೆ.


ಕೊನೆಯ ಕಾಣಲಿಲ್ಲ ಮಾತು; ದಣಿದು ನಿಲ್ಲಿಸಿದೆವು ವಾದ;
‘ಮನೆಗೆ ತೆರಳೆ ಸಮಯವಾಯ್ತೆ!’ ಎನುತಲೆಲ್ಲರೆದ್ದೆವಾಗ-
ಕೆಳಗೆ ನೆಲದಿ ಬಾಡಿ ಬಿದ್ದ ಅಲರಿನೆಸಳುಗಳನು ಕಂಡೆ ;
ಮರವೆ ತೊಲಗೆ, ನನ್ನ ಹುಚ್ಚನರಿದು ಹೀಗೆ ಎಂದುಕೊಂಡೆ :
‘ಅಲ್ಲಿ ತಳಿರ ಮುರಿದುದೇನು!
ಇಲ್ಲಿ ಹೂವ ಕೊಯ್ದುದೇನು !
ಮಾತಿಗೆ ಮರುಳಾದುದೇನು !
ಒಲಿದು ತಂದ ಚೆಲುವಿನೊಡನೆ ಬರಿದೆ ಮಣ್ಗೆ ಬೆರಸಿದೆ;
ಗಳಿಗೆಗಾಗಿ ಮಳಿಗೆ ಸುಡುವ ಮೂಳನಂತೆ ಮಾಡಿದೆ.


‘ಮುರಿದು ನಾನು ಕಿಡಿಸದಿರಲು ಮೆರೆಯುತಿದ್ದಿತಲ್ಲಿ ತಳಿರು ;
ಹರಿದು ಹೊಸೆದು ಹಾಕದಿರಲು ಮಿರುಗುತಿದ್ದತಿಲ್ಲಿ ಅಲರು.
ಹಲವರಿದರ ಚೆಲುವ ನೋಡಿ ನಲಿವನಾನುತಿರ್‍ದರಲೆ ?
ಚೆಲುವ ಬೇಟೆಯಾಡಿ ಕಣ್ಗೆ ಬಲಿಯ ಸಲಿಸಿಕೊಂಡೆನಲೆ ?
ಇಳೆಯ ಕಳೆಯ ಕಿಡಿಯನೊಂದು
ತೊಳೆದು ಬಿಟ್ಟೆ ನಾನು ಇಂದು ;
ನುಡಿದೆನಿಂತು ಒಳಗೆ ನೊಂದು
ಬಗೆವ ಬಗೆಯ ಮುಗಿದ ಬಾಯ ದುಗುಡವೊಗೆದ ಮೊಗದಲಿ,
ಮುಗುದನಂತೆ ನಡೆಯುತಿರ್‍ದೆ ಆಗಿ ನಾನು ಮಾತಿಲಿ!
* * * *

ಚೆಲುವಿಗೊಲಿದು ತಳಿರ ಅಲರ ಕೊಂಡುದೇನು ತಪ್ಪೊ?
ಬಳಿಕ ಅದರ ಅಳಿವಿಗಾಗಿ ನೊಂದು ನುಡಿದುದೊಪ್ಪೊ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...