Home / ಕವನ / ಕವಿತೆ / ಭಲಭಲರೆ, ಶಕುನಿ!

ಭಲಭಲರೆ, ಶಕುನಿ!

ಕೌರವರ ಮಂತಣಗಾರನಾದ ಶಕುನಿ ಮಾಡಿದ ಕಾರ್ಯ ಅಕಾರ್ಯವೆಂದ ನಿಂದಿಸುವುದು, ಅಜ್ಞಾನದ ಪರಿಣಾಮವೆಂದು ಭಾವಿಸಬಹುದಲ್ಲವೆ?


ಧೀರುರೇ, ಭಲಭಲರೆ! ಶಕುನಿಯೇ ನಾ ನಿನಗೆ
ತಲೆವಾಗಿ ವಂದಿಸುವೆನೈ!
ಭಾರತೀಯರ ಮೇಲೆ ನೀ ಮಾಡಿದುಪಕಾರ
ಭಾರವಾಗಿಹುದು ಕಾಣೈ!


ನಿನ್ನ ಕೈ ಚಳಕದಾ ಹೊಲಬನರಿಯದೆ ನಿನಗೆ
ಹಳಿವನ್ನು ಹೊದ್ದಿಸುವರು-
ಬಣ್ಣವನೆ ನೋಡಿ ಕೋಗಿಲಿಗೆ ಕರಿಗಾಗೆಯೆಂ-
ದೆನುವ ಮತಿಮಂದಜನರು!


ಮುಳ್ಳ ಮಳೆಯಲ್ಲಿರುವ ಹೊಸಜೇನುಹುಟ್ಟಿನಲಿ
ಇನಿರಸವು ತುಂಬಿರುವೊಲು-
ಸುಳ್ಳಲ್ಲ, ನಿನ್ನ ಪ್ರತಿಯೊಂದು ಕೃತಿಯೊಳಗೊಳಗೆ
ಹುರುಳು ಹುದುಗಿಹುದು ಕೇಳು!


ನೀನಿಲ್ಲದಿರಲು ಭಾರತದ ಹಿರಿಹೊತ್ತಗೆಯು
ತಿರುಳಿಲ್ಲದಾಗಿರುವುದು-
ತನಿರಸವನೆಲ್ಲವನು ಹಿಂಡಿ ಹೊರದೆಗೆದ ಕ-
ಬ್ಬಿನ ಕೋಲಿನಂತಿರುವುದು.


ಸುಜನರನು ದುರ್ಜನರು ಯುಗ-ಯುಗಗಳಲ್ಲಿಯೂ
ಪೀಡಿಸುವರೆಂಬುದನ್ನು
ತ್ರಿಜಗಕ್ಕೆ ತಿಳುಹಲಿಕೆ ಭಾರತದ ನಾಟಕದಿ
ಸೂತ್ರಧರನಾದೆ ನೀನು !


ಧರ್ಮರಾಯನ ಧರ್ಮನಿಷ್ಠೆ, ಭೀಮನ ಬಲುಹು,
ಅರ್ಜುನನ ಅಸ್ತ್ರದರಿವು,
ನಮ್ಮೆಲ್ಲರಾ ಕಂಗಳೆದುರಿನಲ್ಲಿ ಕುಣಿಯುವುದು
ನಿನ್ನ ಗೈಮಯ ಫಲಿತವು !


ದುರ್ಯೋಧನನ ಧೈರ್ಯ-ಚಲದಂಕತನವ, ವಿದು-
ರನ ವಿಷ್ಣುಭಕ್ತಿಯನ್ನು,
ಸೂರ್‍ಯಾತ್ಮಜನ ದಾತೃಗುಣವ ಡಂಗುರ ಹೊಯ್ದು
ಜಗದಿ ಸಾರಿದೆಯೊ ನೀನು!


ಪಾಂಚಾಲಿನಿಯ ಪಾವನತೆಯು ಪಸರಿಸುವುದಕೆ
ನೆರವು ನೀ ನೀಡಿದೆಯಲ್ಲಾ?
ಚಂಚಲಾಕ್ಷಿಯ ಹೆಸರನಾರು ತಿಳಿಯುತ್ತಿರ್ದ-
ರೈ, ಪೇಳು ನೀ ಸೌಬಲಾ!


ಕುರುವಂಶಜಾತರನು ಹುರಿಗೊಳಿಸಿ ಸಂಗರಕೆ
ಪರಮಾತ್ಮ ಕೃಷ್ಣನಿಂದೆ-
ಪರಮಗೀತೆಯನು ಹಾಡಿಸಿದೆ ಜಗಕೆಲ್ಲ ಉಪ-
ಕೃತಿಯ ಹೊರೆಯನು ಹೊರಿಸಿದೆ!

೧೦
ಇನ್ನೆಂದು ಬಂದು ನೀ ಭರತಖಂಡದಲಿ ಹೂ-
ಡುವೆ ನಿನ್ನ ನಾಟಕವನು ?
ಮನ್ನೆಯನೆ ತಿಳುಹುವುದು ಜನಕೆ ‘ಸತ್ಯಕ್ಕೆ ಜಯ
ವುಂಟೆ’ಂಬ ತತ್ತ್ವವನ್ನು !

೧೧
ಧೀರುರೇ, ಭಲಭಲರೆ ! ಶಕುನಿಯೇ ನಿನಗೆ ನಾ
ತಲೆವಾಗಿ ವಂದಿಸುವೆನು.
ಭಾರತೀಯರಿಗೆಲ್ಲ ಜೀವನದ ಸಾರವನು
ಕಲಿಸಲಿಕೆ ಬೇಕು ನೀನು!
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...