Home / ಕವನ / ಕವಿತೆ / ನಮಗೆಯು ಹೆಸರೊಂದನು ತರಲಿ!

ನಮಗೆಯು ಹೆಸರೊಂದನು ತರಲಿ!

ಹಾಳು ಪಟ್ಟಣದ ಬಂಡೆಯ ಬಳಗದ
ಕೊರಗಿನ ಮೌನದ ಕೂಗನು ಕೇಳಿ!


“ಹೇಳಲಿಕಾಗದ ಕಾಲದಿಂದಲೂ
ತಾಳಿ ಗಾಳಿ-ಮಳೆ ಚಳಿ-ಬಿರುಬಿಸಿಲು
ಸೊಗಸೇನನೊ ಬದುಕಿಗೆ ಬಯಸಿದೆವು,
ಹಗಲಿರುಳೂ ತಪದೊಳು ಬಳಲಿದೆವು….
ಆದರು ನಮಗಿಹ ಹೆಸರೇನು ?
ಬಂಡೆಯೆ ಅಲ್ಲವೆ ? ಬೇರೇನು ?”


“ನಿಂದೆಡೆಯೊಳೆ ಅಲುಗಾಡದೆ ನಿಂದು
ಒಂದೆ ಮನದಿ ಮಾಡಿದ ತಪವಿಂದು
ನಮಗೇತಕೆ ಕೊಡದಿರುವುದೊ ಫಲವ!
ಕೇಳುವೆವಾರಲಿ ನೆರವಿನ ಬಲವ ?
ನಮಗಿಹ ‘ಬಂಡೆ’ಯ ಹೆಸರನ್ನು
ತವಿಸುವರಾರೂ ಬರರೇನು?”


“ನಮ್ಮೊಡನೆಯೆ ನೆಲದೊಳು ಮೂಡಿದುವು,
ನಮ್ಮೊಂದಿಗೆ ತಪದೊಳು ಕೂಡಿದುವು,
ಎನಿತೆನಿತೋ ಘನತೆಯ ಪದವೊಂದಿ
ಜನದಲಿ ಹೊಸ ಹೊಸ ಹೆಸರನು ಹೊಂದಿ,
ಹೆಮ್ಮಯ ಕೀರ್‍ತಿಯ ಗಳಿಸಿದುವು
ನಮ್ಮಯ ಕುಲಬಂಧುಗಳೆ ಅವು!


“ಹಂಪೆಯಧೀಶನ ಶ್ರೀಶಿವಲಿಂಗ !
ವಿಜಯನಗರ ಕೋಟೆಯ ಅಂಗಾಂಗ !
ಅರಮನೆ ಸಿರಿಮನೆ ಗಜ-ತುರಗಾಲಯ !
ಅರಸಿಯರಂತಃಪುರ ಗುರುನಿಲಯ !
ಹೆಸರಿಂತೆನಿತನೊ ಪಡೆದಿಹವು-
ನಮ್ಮಯ ಕುಲಬಂಧುಗಳೆ ಅವು !


“ದೊರೆಗಳ ಶಾಸನವೊರೆಯುವುವೆನಿತೋ
ಗರತಿಯ ಬದುಕನು ಮೊರೆಯುವುವೆನಿತೋ !
ವೀರರ ಬಲುಹನು ಹಾಡುತಲೆನಿತೊ, ಉ-
ದಾರರ ಚಾಗವನಾಡುತಲೆನಿತೋ-
ಹೆಮ್ಮೆಯ ಹೆಸರನು ತಳೆದಿಹವು-
ನಮ್ಮಯ ಬಳಿಯಿದ್ದುವಲೆ ಅವು?


“ವಿಜಯ ವಿಟ್ಠಲನ ಚಿತ್ರದ ತೇರು!
ಗುಡಿ ಗೋಪುರ ಮಂಟಪಗಳ ಕುಸುರು !
ಎನಿತು ಕಲಾಕೃತಿ ಅನಿತಕು ಹೆಸರು,
ನಮಗೇನಿರುವುದು ಬರಿ ಬಿಸಿಯುಸಿರು !
ಕೆಲವೆ ಕಾಲ ಬಾಳಿದರು ಅವು-
ಹೆಮ್ಮೆಯ ಹೆಸರನು ಬೆಳಗಿದುವು!


“ಬಲ್ಲಿದರಾರೋ ಬಂದಿಲ್ಲಿಳಿಯುತ
ಇಲ್ಲಿಹ ನಮ್ಮವರನು ಎಚ್ಚರಿಸುತ
ಒಳ್ಳೆಯ ಒಳ್ಳೆಯ ರೂಪವ ಕೊಡಿಸಿ,
ಬಂಡೆಯೆಂಬ ಬರಿ ಹೆಸರನು ಬಿಡಿಸಿ,
ಮನ್ನಣೆಯೊಲವನು ಸಲ್ಲಿಸಿದರು-
ಧನ್ಯರಲ್ಲಿ ಅವರಡಗಿದರು ?


“ಬರುವರೆ.. ಬರಲಿರುವರೆ…. ಯಾರಾದರು
ಮರಳಿ ರಾಜ್ಯವನ್ನು ಕಟ್ಟುವರೆ ?
ಅರಮನೆ-ಗುಡಿಗಳಿಗಿರದಿರೆ ಹೋಗಲಿ
ಸೆರೆಮನೆಗಾದರು ನಮ್ಮನು ಬಳಸಲಿ !
ಬರಲಿರುವರು ಬೇಗನೆ ಬರಲಿ-
ನಮಗೂ ಹೆಸರೊಂದನು ತರಲಿ!
* * *
ಹಾಳುಪಟ್ಟಣದ ಬಂಡೆಯ ಬಳಗದ
ಗೋಳಿನ ಮೌನದ ಕೂಗನು ಕೇಳಿ!
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...