Home / ಕವನ / ಕವಿತೆ / ನಮಗೆಯು ಹೆಸರೊಂದನು ತರಲಿ!

ನಮಗೆಯು ಹೆಸರೊಂದನು ತರಲಿ!

ಹಾಳು ಪಟ್ಟಣದ ಬಂಡೆಯ ಬಳಗದ
ಕೊರಗಿನ ಮೌನದ ಕೂಗನು ಕೇಳಿ!


“ಹೇಳಲಿಕಾಗದ ಕಾಲದಿಂದಲೂ
ತಾಳಿ ಗಾಳಿ-ಮಳೆ ಚಳಿ-ಬಿರುಬಿಸಿಲು
ಸೊಗಸೇನನೊ ಬದುಕಿಗೆ ಬಯಸಿದೆವು,
ಹಗಲಿರುಳೂ ತಪದೊಳು ಬಳಲಿದೆವು….
ಆದರು ನಮಗಿಹ ಹೆಸರೇನು ?
ಬಂಡೆಯೆ ಅಲ್ಲವೆ ? ಬೇರೇನು ?”


“ನಿಂದೆಡೆಯೊಳೆ ಅಲುಗಾಡದೆ ನಿಂದು
ಒಂದೆ ಮನದಿ ಮಾಡಿದ ತಪವಿಂದು
ನಮಗೇತಕೆ ಕೊಡದಿರುವುದೊ ಫಲವ!
ಕೇಳುವೆವಾರಲಿ ನೆರವಿನ ಬಲವ ?
ನಮಗಿಹ ‘ಬಂಡೆ’ಯ ಹೆಸರನ್ನು
ತವಿಸುವರಾರೂ ಬರರೇನು?”


“ನಮ್ಮೊಡನೆಯೆ ನೆಲದೊಳು ಮೂಡಿದುವು,
ನಮ್ಮೊಂದಿಗೆ ತಪದೊಳು ಕೂಡಿದುವು,
ಎನಿತೆನಿತೋ ಘನತೆಯ ಪದವೊಂದಿ
ಜನದಲಿ ಹೊಸ ಹೊಸ ಹೆಸರನು ಹೊಂದಿ,
ಹೆಮ್ಮಯ ಕೀರ್‍ತಿಯ ಗಳಿಸಿದುವು
ನಮ್ಮಯ ಕುಲಬಂಧುಗಳೆ ಅವು!


“ಹಂಪೆಯಧೀಶನ ಶ್ರೀಶಿವಲಿಂಗ !
ವಿಜಯನಗರ ಕೋಟೆಯ ಅಂಗಾಂಗ !
ಅರಮನೆ ಸಿರಿಮನೆ ಗಜ-ತುರಗಾಲಯ !
ಅರಸಿಯರಂತಃಪುರ ಗುರುನಿಲಯ !
ಹೆಸರಿಂತೆನಿತನೊ ಪಡೆದಿಹವು-
ನಮ್ಮಯ ಕುಲಬಂಧುಗಳೆ ಅವು !


“ದೊರೆಗಳ ಶಾಸನವೊರೆಯುವುವೆನಿತೋ
ಗರತಿಯ ಬದುಕನು ಮೊರೆಯುವುವೆನಿತೋ !
ವೀರರ ಬಲುಹನು ಹಾಡುತಲೆನಿತೊ, ಉ-
ದಾರರ ಚಾಗವನಾಡುತಲೆನಿತೋ-
ಹೆಮ್ಮೆಯ ಹೆಸರನು ತಳೆದಿಹವು-
ನಮ್ಮಯ ಬಳಿಯಿದ್ದುವಲೆ ಅವು?


“ವಿಜಯ ವಿಟ್ಠಲನ ಚಿತ್ರದ ತೇರು!
ಗುಡಿ ಗೋಪುರ ಮಂಟಪಗಳ ಕುಸುರು !
ಎನಿತು ಕಲಾಕೃತಿ ಅನಿತಕು ಹೆಸರು,
ನಮಗೇನಿರುವುದು ಬರಿ ಬಿಸಿಯುಸಿರು !
ಕೆಲವೆ ಕಾಲ ಬಾಳಿದರು ಅವು-
ಹೆಮ್ಮೆಯ ಹೆಸರನು ಬೆಳಗಿದುವು!


“ಬಲ್ಲಿದರಾರೋ ಬಂದಿಲ್ಲಿಳಿಯುತ
ಇಲ್ಲಿಹ ನಮ್ಮವರನು ಎಚ್ಚರಿಸುತ
ಒಳ್ಳೆಯ ಒಳ್ಳೆಯ ರೂಪವ ಕೊಡಿಸಿ,
ಬಂಡೆಯೆಂಬ ಬರಿ ಹೆಸರನು ಬಿಡಿಸಿ,
ಮನ್ನಣೆಯೊಲವನು ಸಲ್ಲಿಸಿದರು-
ಧನ್ಯರಲ್ಲಿ ಅವರಡಗಿದರು ?


“ಬರುವರೆ.. ಬರಲಿರುವರೆ…. ಯಾರಾದರು
ಮರಳಿ ರಾಜ್ಯವನ್ನು ಕಟ್ಟುವರೆ ?
ಅರಮನೆ-ಗುಡಿಗಳಿಗಿರದಿರೆ ಹೋಗಲಿ
ಸೆರೆಮನೆಗಾದರು ನಮ್ಮನು ಬಳಸಲಿ !
ಬರಲಿರುವರು ಬೇಗನೆ ಬರಲಿ-
ನಮಗೂ ಹೆಸರೊಂದನು ತರಲಿ!
* * *
ಹಾಳುಪಟ್ಟಣದ ಬಂಡೆಯ ಬಳಗದ
ಗೋಳಿನ ಮೌನದ ಕೂಗನು ಕೇಳಿ!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...