Home / ಕವನ / ಕವಿತೆ / ಹಿರಿಯ ಜೀವ

ಹಿರಿಯ ಜೀವ

(ಸರ್ವಜ್ಞ ಮೂರ್ತಿಯ ಸ್ವರೂಪದರ್ಶನಕಾರನನ್ನು ಕುರಿತು)

ಯಾರ ಅಭಿಶಾಪವೋ ಸರ್ವಜ್ಞ ಮೂರುತಿಗೆ !
ಅಮರನಲ್ಲವೆ- ಪುಷ್ಪದತ್ತ ಗಂಧರ್ವನವ?

ಕರದಿ ಕಪ್ಪರ ಹಿಡಿದು ಹಿರಿದಾದ ನಾಡಿನಲಿ
ತಿರಿದು ತಿನ್ನುತ, ತನ್ನ ಕಿರಿದುನಾಳ್ನುಡಿಗಳಲಿ
ಹಿರಿಯ ಹುರುಳನು ತುಂಬಿ ಜನಮನಕೆ ತಿನ್ನಿಸುತ್ತ
ಕನ್ನಡದ ಮಲೆನಾಡ-ಕನ್ನಡ ಬಯಲ್ನಾಡ-
ಮೂಡು-ಪಡುವಲು-ಬಡಗ-ತೆಂಕಣವನಲೆದಾಡಿ,
ಕನ್ನಡಿಗರೆಲ್ಲರನು ಕಂಡಿರ್ದ್ದ; ಆ ಕವಿಯ
ಕನ್ನಡಿಗರೆಲ್ಲ ಕಣ್ಣಾರೆ ಕಂಡಿರ್ದರು.

ಆ ಕವಿಯ ನಗೆನುಡಿಯ ಕೇಳಿ ನಕ್ಕಿರ್ದ್ದರು;
ಆತನಾ ಕಿಡಿನುಡಿಗೆ ನಡುಕ ಪಡೆದಿರ್ದ್ದರು,
ಅವನ ಬೆಡಗನು ಕೇಳಿ ಬೆರಗುವಟ್ಟಿರ್ದ್ದರು;
ಅವನ ಜೋಯಿಸ ಕೇಳಿ ಸೊಬಗನಾಂತಿರ್ದ್ದರು
ಅವನ ವೈದ್ಯಕದಿಂದ ಬೇನೆಯನು ನೀಗಿರ್ದ್ದ-
ರವನ ರಸವೈದ್ಯದಲ್ಲಿ ಕಲ್ಲು-ಕಬ್ಬಿಣವನೂ
ಕಾಂಚನವನಾಗಿ ಮಾಡುವ ಬಗೆಯಲಿರ್ದ್ದರು.
ಭವ್ಯ ದೇಹದ ಬ್ರಹ್ಮಚಾರಿ ಸರ್ವಜ್ಞನನು
ಬಲ್ಲದವರಿರಲಿಲ್ಲ ನಾಡಿನೋಳು….ಆದರೆ –
ಯಾರ ಶಾಪವೋ ಏನೋ, ಆ ಅಮರ ಕವಿಗೆ !
ಒಮ್ಮೆಲೇ ಅವನ ಮೈ ಅಳಿದು ಹೋಯಿತು; ಕೆಚ್ಚು-
ಗಟ್ಟಿರ್ದ್ದ ಅವನೊಡಲು ನುಚ್ಚು ನೂರಾಯಿತು !
ಆ ಊರಲೊಂದು ಚೂರ್, ಈ ಊರಲೊಂದು ಚೂರ್;
ಹಳ್ಳಿಗೊಂದೊಂದು ಚೂರ್, ಹಟ್ಟಿಗೊಂದೊಂದು ಚೂರ್;
ಹೊಲೆಯರಲಿ ತುಣುಕೊಂದು, ಹಾರುವರಲಿನ್ನೊಂದು,
ಕುರುಬ ಕುಂಬರ-ಜೇಡ-ಕಮ್ಮರರಲೊಂದೊಂದು;
ಒಕ್ಕಲಿಗರಲ್ಲಿ, ಆ ಲೆಕ್ಕಿಗರ ಮನೆಯಲ್ಲಿ-
ಮಕ್ಕಳಾಟಕೆ ಸಿಕ್ಕಿ ದಿಕ್ಕು ದಿಕ್ಕಿಗೆ ಚೂರು
ಸಿಕ್ಕಿದೊಲು ಚೆದರಿ ಸರ್ವಜ್ಞ ಮೂರ್ತಿಯ ಮೂರ್ತಿ
ಕಾಣದಂತಾಗಿತ್ತು ಕನ್ನಡದ ನಾಡಿನಲಿ.

ಯಾರ ಶಾಪವೋ ಕಾಣೆ, ಆ ಅಮೃತ ಮೂರುತಿಗೆ !
ಮೂರ್ತಿ ಅಳಿದರೆಯು ಆತನ ಕೀರ್ತಿ ನಾಡಿನಲಿ
ಸುಳಿದಾಡುತಿತ್ತು; ಸರ್ವಜ್ಞನಾ ಸವಿಹೆಸರು
ಕನ್ನಡದ ಬಾಯಿ-ಕಿವಿಗಳಲ್ಲಿ ಮನೆ ಮಾಡಿತ್ತು.
ಅಮರಕವಿ ಸರ್ವಜ್ಞ ಶಾಪಕ್ಕೆ ಸಾಯುವನೆ ?
ಶಾಪಮೋಚನ ಕಾಲ ಸಂದುಬಂದಿತು; ಕಾಲ
ತಾನೆ ಮಾಡುವನೇನು ತನ್ನ ಕಜ್ಜವನೆಲ್ಲ?
ಯಾವುದೋ ಹಿರಿಯ ಜೀವವನೊಂದ ಕರೆಯುವನು;
ಅದರ ಉಸಿರಲಿ ತನ್ನ ಉಸಿರನ್ನು ಊದುವನು.
ತನ್ನ ಕಜ್ಜವನೆಲ್ಲ ಮಾಡಿಸುವನದರಿಂದ.
ಆ ಜೀವವನೆ ‘ಮಹಾಪುರುಷ’ ಎನ್ನುತ ಲೋಕ
ಕೊಂಡಾಡಿ ಕೊನೆವಂತೆ ಮಾಡುತಿಹನಾತ.

ಸರ್ವಜ್ಞನಾ ನುಚ್ಚು ನೂರಾದ ಕಾಯವನು
ಮರಳಿ ಸಂಧಿಸಿ ಮೂರ್ತಿಯನ್ನು ನಿರ್ಮಿಸಲೆಂದು
ಕಾಲನಾರಿಸಿದ ಕನ್ನಡದೊಂದು ಹಿರಿಜೀವ
ದಿಕ್ಕು-ದಿಕ್ಕಿಗೆ ಚೆದರಿಬಿದ್ದಿರ್ದ್ದ ಕವಿರಾಯ-
ನಾ ಮೈಯ ನುಚ್ಚುನೂರುಗಳನೊರ್ಗೂಡಿಸುತ,
ತನ್ನ ಹಿರಿಮೆಯ ತಪದ ಸಂಜೀವಶಕ್ತಿಯಲಿ
ಸರ್ವಜ್ಞ ಕವಿಗೆ ಉಸಿರನ್ನಿತ್ತಿತಾ ಜೀವ.
ಮೆಯ್ಯಳಿದ ಕವಿ ಮತ್ತೆ ಮೆಯ್ಯಾಂತು ನಿಲ್ಲುವಂ-
ದದಿ ಮಾಡಿತಾ ಹಿರಿಯ ಜೀವ; ಈ ದಿನ ಮತ್ತೆ
ಸರ್ವಜ್ಞ ಮರಳಿ ಮಾತಾಡುತಿಹ ಮೈಗೊಂಡು.

ಕನ್ನಡಕೆ ಸರ್ವಜ್ಞ ಕವಿಯನೊದವಿಸಿಕೊಟ್ಟ
ಹಿರಿಜೀವ ಕನ್ನಡದ ಸೌಭಾಗ್ಯವದು ಸತ್ಯ !
ಕಾಲನೇ ಒಪ್ಪಿರಲು ಅದರ ಹಿರಿಮೆಯನಿನ್ನು
ಕನ್ನಡರು ಒಪ್ಪದೇನಿರುವರೇ? ಆ ಜೀವ
ಕನ್ನಡದ ನಾಡಿನಲಿ ಬಹುಕಾಲ ಬಾಳಲಿ !
ಆಳಾದ ಕನ್ನಡವು ಅರಸಾಗಿ ಬಾಳ್ವುದನು
ಕಣ್ಣಾರೆ ಕಂಡು ಸುಖ, ಶಾಂತಿಯನು ತಾಳಲಿ!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...