Home / ಕವನ / ಕವಿತೆ / ಹಿರಿಯ ಜೀವ

ಹಿರಿಯ ಜೀವ

(ಸರ್ವಜ್ಞ ಮೂರ್ತಿಯ ಸ್ವರೂಪದರ್ಶನಕಾರನನ್ನು ಕುರಿತು)

ಯಾರ ಅಭಿಶಾಪವೋ ಸರ್ವಜ್ಞ ಮೂರುತಿಗೆ !
ಅಮರನಲ್ಲವೆ- ಪುಷ್ಪದತ್ತ ಗಂಧರ್ವನವ?

ಕರದಿ ಕಪ್ಪರ ಹಿಡಿದು ಹಿರಿದಾದ ನಾಡಿನಲಿ
ತಿರಿದು ತಿನ್ನುತ, ತನ್ನ ಕಿರಿದುನಾಳ್ನುಡಿಗಳಲಿ
ಹಿರಿಯ ಹುರುಳನು ತುಂಬಿ ಜನಮನಕೆ ತಿನ್ನಿಸುತ್ತ
ಕನ್ನಡದ ಮಲೆನಾಡ-ಕನ್ನಡ ಬಯಲ್ನಾಡ-
ಮೂಡು-ಪಡುವಲು-ಬಡಗ-ತೆಂಕಣವನಲೆದಾಡಿ,
ಕನ್ನಡಿಗರೆಲ್ಲರನು ಕಂಡಿರ್ದ್ದ; ಆ ಕವಿಯ
ಕನ್ನಡಿಗರೆಲ್ಲ ಕಣ್ಣಾರೆ ಕಂಡಿರ್ದರು.

ಆ ಕವಿಯ ನಗೆನುಡಿಯ ಕೇಳಿ ನಕ್ಕಿರ್ದ್ದರು;
ಆತನಾ ಕಿಡಿನುಡಿಗೆ ನಡುಕ ಪಡೆದಿರ್ದ್ದರು,
ಅವನ ಬೆಡಗನು ಕೇಳಿ ಬೆರಗುವಟ್ಟಿರ್ದ್ದರು;
ಅವನ ಜೋಯಿಸ ಕೇಳಿ ಸೊಬಗನಾಂತಿರ್ದ್ದರು
ಅವನ ವೈದ್ಯಕದಿಂದ ಬೇನೆಯನು ನೀಗಿರ್ದ್ದ-
ರವನ ರಸವೈದ್ಯದಲ್ಲಿ ಕಲ್ಲು-ಕಬ್ಬಿಣವನೂ
ಕಾಂಚನವನಾಗಿ ಮಾಡುವ ಬಗೆಯಲಿರ್ದ್ದರು.
ಭವ್ಯ ದೇಹದ ಬ್ರಹ್ಮಚಾರಿ ಸರ್ವಜ್ಞನನು
ಬಲ್ಲದವರಿರಲಿಲ್ಲ ನಾಡಿನೋಳು….ಆದರೆ –
ಯಾರ ಶಾಪವೋ ಏನೋ, ಆ ಅಮರ ಕವಿಗೆ !
ಒಮ್ಮೆಲೇ ಅವನ ಮೈ ಅಳಿದು ಹೋಯಿತು; ಕೆಚ್ಚು-
ಗಟ್ಟಿರ್ದ್ದ ಅವನೊಡಲು ನುಚ್ಚು ನೂರಾಯಿತು !
ಆ ಊರಲೊಂದು ಚೂರ್, ಈ ಊರಲೊಂದು ಚೂರ್;
ಹಳ್ಳಿಗೊಂದೊಂದು ಚೂರ್, ಹಟ್ಟಿಗೊಂದೊಂದು ಚೂರ್;
ಹೊಲೆಯರಲಿ ತುಣುಕೊಂದು, ಹಾರುವರಲಿನ್ನೊಂದು,
ಕುರುಬ ಕುಂಬರ-ಜೇಡ-ಕಮ್ಮರರಲೊಂದೊಂದು;
ಒಕ್ಕಲಿಗರಲ್ಲಿ, ಆ ಲೆಕ್ಕಿಗರ ಮನೆಯಲ್ಲಿ-
ಮಕ್ಕಳಾಟಕೆ ಸಿಕ್ಕಿ ದಿಕ್ಕು ದಿಕ್ಕಿಗೆ ಚೂರು
ಸಿಕ್ಕಿದೊಲು ಚೆದರಿ ಸರ್ವಜ್ಞ ಮೂರ್ತಿಯ ಮೂರ್ತಿ
ಕಾಣದಂತಾಗಿತ್ತು ಕನ್ನಡದ ನಾಡಿನಲಿ.

ಯಾರ ಶಾಪವೋ ಕಾಣೆ, ಆ ಅಮೃತ ಮೂರುತಿಗೆ !
ಮೂರ್ತಿ ಅಳಿದರೆಯು ಆತನ ಕೀರ್ತಿ ನಾಡಿನಲಿ
ಸುಳಿದಾಡುತಿತ್ತು; ಸರ್ವಜ್ಞನಾ ಸವಿಹೆಸರು
ಕನ್ನಡದ ಬಾಯಿ-ಕಿವಿಗಳಲ್ಲಿ ಮನೆ ಮಾಡಿತ್ತು.
ಅಮರಕವಿ ಸರ್ವಜ್ಞ ಶಾಪಕ್ಕೆ ಸಾಯುವನೆ ?
ಶಾಪಮೋಚನ ಕಾಲ ಸಂದುಬಂದಿತು; ಕಾಲ
ತಾನೆ ಮಾಡುವನೇನು ತನ್ನ ಕಜ್ಜವನೆಲ್ಲ?
ಯಾವುದೋ ಹಿರಿಯ ಜೀವವನೊಂದ ಕರೆಯುವನು;
ಅದರ ಉಸಿರಲಿ ತನ್ನ ಉಸಿರನ್ನು ಊದುವನು.
ತನ್ನ ಕಜ್ಜವನೆಲ್ಲ ಮಾಡಿಸುವನದರಿಂದ.
ಆ ಜೀವವನೆ ‘ಮಹಾಪುರುಷ’ ಎನ್ನುತ ಲೋಕ
ಕೊಂಡಾಡಿ ಕೊನೆವಂತೆ ಮಾಡುತಿಹನಾತ.

ಸರ್ವಜ್ಞನಾ ನುಚ್ಚು ನೂರಾದ ಕಾಯವನು
ಮರಳಿ ಸಂಧಿಸಿ ಮೂರ್ತಿಯನ್ನು ನಿರ್ಮಿಸಲೆಂದು
ಕಾಲನಾರಿಸಿದ ಕನ್ನಡದೊಂದು ಹಿರಿಜೀವ
ದಿಕ್ಕು-ದಿಕ್ಕಿಗೆ ಚೆದರಿಬಿದ್ದಿರ್ದ್ದ ಕವಿರಾಯ-
ನಾ ಮೈಯ ನುಚ್ಚುನೂರುಗಳನೊರ್ಗೂಡಿಸುತ,
ತನ್ನ ಹಿರಿಮೆಯ ತಪದ ಸಂಜೀವಶಕ್ತಿಯಲಿ
ಸರ್ವಜ್ಞ ಕವಿಗೆ ಉಸಿರನ್ನಿತ್ತಿತಾ ಜೀವ.
ಮೆಯ್ಯಳಿದ ಕವಿ ಮತ್ತೆ ಮೆಯ್ಯಾಂತು ನಿಲ್ಲುವಂ-
ದದಿ ಮಾಡಿತಾ ಹಿರಿಯ ಜೀವ; ಈ ದಿನ ಮತ್ತೆ
ಸರ್ವಜ್ಞ ಮರಳಿ ಮಾತಾಡುತಿಹ ಮೈಗೊಂಡು.

ಕನ್ನಡಕೆ ಸರ್ವಜ್ಞ ಕವಿಯನೊದವಿಸಿಕೊಟ್ಟ
ಹಿರಿಜೀವ ಕನ್ನಡದ ಸೌಭಾಗ್ಯವದು ಸತ್ಯ !
ಕಾಲನೇ ಒಪ್ಪಿರಲು ಅದರ ಹಿರಿಮೆಯನಿನ್ನು
ಕನ್ನಡರು ಒಪ್ಪದೇನಿರುವರೇ? ಆ ಜೀವ
ಕನ್ನಡದ ನಾಡಿನಲಿ ಬಹುಕಾಲ ಬಾಳಲಿ !
ಆಳಾದ ಕನ್ನಡವು ಅರಸಾಗಿ ಬಾಳ್ವುದನು
ಕಣ್ಣಾರೆ ಕಂಡು ಸುಖ, ಶಾಂತಿಯನು ತಾಳಲಿ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...