Home / ಕವನ / ಕವಿತೆ / ನಿತ್ಯ ಪೂಜೆ

ನಿತ್ಯ ಪೂಜೆ

ಗುಡಿಯಲ್ಲಿ ನಡೆದಿರ್ದ್ದ ಪೂಜೆಯೇ ಸಿರಿಯಿಂದು
ಮರೆಯಾಗಿದೆ-ಎಲ್ಲ-ಮರೆಯಾಗಿದೆ!


ಅಳತೆಯಿರದನಿತು ದೀವಿಗೆಯೋಳಿ ತೊಳತೊಳಗಿ,
ಬೆಳಗಿಸಿದುವಂದು ದೇವಿಯ ವರದ ಮೂರುತಿಯ ;
ಕಳೆದುಕೊಂಡಿಂದು ತಿಳಿನೇಯವನು ದೀವಿಗೆಗ-
ಳಿಳಿದು ಕರ್ಗತ್ತಲೆಯು ಕವಿದು ಮುಸುಕಿದೆ ಗುಡಿಯ.
ದೇವಿಯಾ ವರದಮೂರುತಿ ಕಾಣದಿಹುದು;
ಭಾವುಕರ ಬಳಗವದು ಬೆದರಿ ಚೆದರಿಹುದು!


ಅರಳುಗಳ ಕರ್ಪುರಾರತಿಯ ಧೂಪದ ಕಂಪು
ಬೆರೆತು ಸುಳಿಗಾಳಿಯೋಳು ಹರಿದು, ದೂರದ ಜನರ
ಕರೆದೊಯ್ಯುತ್ತಿರಲಿಲ್ಲವೇ ಬಳಿಗೆ ? ಇಂದೇನು ?
ಸರಿದಿರುವ ಸೊಡರುಗಳ ಸೊವಡುಗಂಪದು ಹರಡಿ,
ಹೊರ- ಹೊರಟು ಮೂಗುಸೆಲೆ ಕೊರೆಯುತಿಹುದು,
ನೆರೆಯವರನೂ ದೂರ ಸರಿಸುತಿಹುದು !


ಅಂದಿನಾ ಪೂಜೆಯವಸರದ ಮಂತ್ರಗಳೇನು !
ಒಂದೆ ದನಿಯೊಳೆ ಮೊರೆವ ಭಾವಗೀತಗಳೇನು !
ದುಂದುಭಿಯ ಡೋಳು-ಜಾಗಟೆಗಳಬ್ಬರವೇನು !
ಇಂದದೊಂದೂ ಇಲ್ಲ, ಎಲ್ಲೆಲ್ಲಿಯೂ ಮೌನ !
ನುಡಿಯುತಿಹ ಹಲ್ಲಿಗಳ ಲೊಟಲೊಟೆಂಬುಲುಹು,
ಅಡಿಗಡಿಗೆ ಮೌನತೆಯ ಸೀಳಿ ಹೊರಡುವುವು!


ಹಾಲಕ್ಕಿಯೊಂದು ಹುಮ್ಮಸದಿ ಕಿಲಬಿಲಿಸುತಿದೆ ;
ಮೂಳನಾಯೊಂದು ಮನಬಂದಂತೆ ಬೊಗಳುತಿದೆ ;
ಕೇಳುತಿದೆ ಅತ್ತಿತ್ತ ನರಿಗಳೂಳಾಟ; ಬಿರುಗಾಳಿ ಬಿರು-
ಗಾಳಿ ಬಿರು-ಬಿರ್ರೆಂದು ಮೊರೆಮೊರೆದು ಬೀಸುತಿದೆ !
ಪೂಜೆಯವಸರದ ಮಂತ್ರ ಸ್ವನಗಳಿಲ್ಲ….
ಓಜೆಯಲಿ ಮೆರೆವ ವಾದ್ಯಧ್ವನಿಗಳಿಲ್ಲ!


ಓ! ಅರಿದಿದೇನಿದು?… ದೇವಿಯಿರುವ ದೆಸೆಯಿಂದಿತ್ತ,
ಬರುವ ಗಾಳಿಯೊಳು ಬೆರೆತಿರುವ ಬಿಸಿಯುಸಿರೇನು ?
ಬಿಸಿಯುಸಿರ ಬೆಂಬಳಿಸಿ ಬರುವ ದನಿ ಯಾರದಿದು ?
ಬರಿಯೆ ದನಿಯಲ್ಲ; ಹುರುಳಿನ ನುಡಿಯ ಕೂಡಿಹುದು!
ಗಾಳಿ ತರುತಿಹ ನುಡಿಯಿದೇನೆಂಬಿರೇನು?
ಕೇಳಿ-ಕೇಳಿರಿ, ನಸುವೆ ಕೊಟ್ಟು ಕಿವಿಗಳನು !


“ನಿತ್ಯ ಪೂಜೆಯು ಬೇಕು ! ನಿತ್ಯ ಪೂಜೆಯು ನನಗೆ !
ಕುತ್ತಗಳ ಕಳೆದುಕೊಳುವಾಶೆಯಲ್ಲವೆ ನಿಮಗೆ?
ನಿತ್ಯ ಪೂಜಿಸಲು ಬೇಸತ್ತರಾಗುವುದೇನು?
ನಿತ್ಯ ಪೂಜೆಯು ಬೇಕು; ನಿತ್ಯ ಪೂಜ್ಯಳು ನಾನು!
ಕತ್ತಲೆಗೆ ಹೆದರದಿರಿ ಕಾಲಿಡಿ ಮುಂದೆ,
ಒತ್ತರದಿ ಬನ್ನಿರೆಲ್ಲರು ಇಲ್ಲಿಗಿಂದೆ!
ಮರ-ಮರಳಿ ಸಲ್ಲಿಸಿರಿ ವೀರಪೂಜೆಯನೆನಗೆ,
ವರವಾವುದನು ಕೇಳಿ ಕೊಡುವೆ ನಾ ನಿಮಗೆ!”
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...