Home / ಕವನ / ಕವಿತೆ / ಮಣ್ಣು

ಮಣ್ಣು

ನಾನು ಭಾವ ನೀನು ಗೀತ
ನಾನು ರಾಮ ನೀನು ಸೀತ
ಹೀಗೆಲ್ಲ ಹಾಡಿದ ಕವಿಗಳು ಒಂದು ದಿನ
ನಾನು ಶವ ನೀನು ಪ್ರೇತ
ಎಂದು ಸಾಯುತ್ತಾರೆ

ನಾನು ದೇವರ ಪುತ್ರ ಬನ್ನಿ ನನ್ನಡಿಯಲ್ಲಿ
ಮೋಕ್ಷದ ಹಾದಿ ಸುರಳೀತ
ಎಂದು ಸಾರಿದ ಸಾಧಕರೆಲ್ಲ
ಗೊತ್ತಿದ್ದೋ ಗೊತ್ತಿಲ್ಲದೆಯೋ
ಇನ್ನೂ ಏಳದ ಹಾಗೆ ಮಲಗಿದ್ದಾರೆ

ಅಣು ಅರಸಿದವನು, ಕೃತಕ
ಮಳೆ ಸುರಿಸಿದವನು, ವಿದ್ಯುತ್
ಒಲೆ ಉರಿಸಿದವನು
ಒಂದು ಸಲ ಅರಸಿ ಹೋಗಿದ್ದಾರೆ ಏನನ್ನೋ
ತಿರುಗಿ ಬಂದಿಲ್ಲ

ಎಲ್ಲರೂ ಕಂಡದ್ದು ಒಂದೇ ಕೊನೆ
ಹೊಡೆದವನದೊಂದೇ ಬೆಣೆ

ನಾನಿಂತ ಮಣ್ಣಲ್ಲೆಲ್ಲ ಕರಗಿದವರ ಕತೆ
ಒಂದು ನರಿಯಂತೆ ಮತ್ತೊಂದು ಹುಲಿಯಂತೆ
ಇನ್ನೊಂದು ಬೀದಿ ನಾಯಿಯಂತೆ
ಎಲ್ಲಾ ಕೂಡಿ
ನಮ್ಮ ಮನೆಯಂಗಳಕ್ಕೆ ಮಣ್ಣಾದವಂತೆ

ಒಬ್ಬ ಮಾಸ್ತರನಂತೆ
ಉಣ್ಣದೇ ಸತ್ತವನು
ಒಬ್ಬ ಕಾರಕೂನನಂತೆ
ಹೊಟ್ಟೆ ತುಂಬಿಯೇ ಸತ್ತವನು

ಇದ್ದಾಗ ಒಬ್ಬರ ಮುಖ
ಇನ್ನೊಬ್ಬರಿಗಾಗದು
ಅವನ ಬಯ್ಯದೇ ಇವಗೆ
ಹೊತ್ತೇ ಹೋಗದು

ಇಬ್ಬರೂ ಸೇರಿ
ಚೌತಿಯ ಗಣಪತಿಗೆ
ಆಕಾರವಾದರು

ಮಣ್ಣ ಹಣತೆಯದೊಂದು ಕತೆ
ಮಡಕೆಯದೊಂದು ನೀಳ್ಗತೆ
ಹೊಸ ಮನೆಯ ಗೋಡೆಯದೊಂದು
ಕಾದಂಬರಿಯೇ ಇದೆ

ಕೇಳುತ್ತ ದಂಗಾದೆ
ಬೆರಳು ಕಚ್ಚಿದೆ ಆಶ್ಚರ್ಯಕ್ಕೆ
ಥೂ ! ಥೂ !
ಉಗಿದೆನು ಬರೀ ಮಣ್ಣು !
ಇಡೀ ಮೈ ನಕ್ಕಿತು ಒಳಗಿನವನನ್ನು ನೋಡಿ
“ನಾನು ನಿನಗಿಂತ ಹಿಂದೆ
ಸತ್ತವರ ಬೂದಿ”

ತಾಳಲಾರದೇ ಮನಸ್ಸಿನ
ಸ್ವಾಸ್ಥ್ಯಕ್ಕೆಂದು
ಮೆಲ್ಲಗೆ ಪಕ್ಕದ ಮನೆಯ
ಹುಡುಗಿಯನ್ನೆತ್ತಿಕೊಂಡೆ
ಎತ್ತಿಕೊಂಡರೆ ಪೂರಾ ಮಣ್ಣಿನದೆ ವಾಸನೆ
ಮೂಗೊತ್ತಿಕೊಂಡೆ

ಪೇಟೆಯಲ್ಲೆಲ್ಲ ಮಣ್ಣಿನದೆ ಮೆರವಣಿಗೆ
ಕ್ಲಾಸಿನಲ್ಲೆಲ್ಲ ಮಣ್ಣಿನದೆ ಬರವಣಿಗೆ
ಮಣ್ಣಿಗೆ ಮಣ್ಣು ಗೋಪುರ ಕಟ್ಟುತ್ತ

ಚೌತಿಯ ಗಣಪತಿ
ಈಶ್ವರ ಕೆರೆಯ ನೀರಲ್ಲಿ
ಹಗು-ಹಗೂರ
ಕರಗುವ ಹಾಗೆ

ನನ್ನೊಳಗೆ ಕರಗುತ್ತಿದ್ದೆ
ಮಣ್ಣಿನ ಮುದ್ದೆ

ಸತ್ತವರ ನೆರಳುಗಳಲ್ಲಿ
ಇದ್ದವರ ಕೊರಳು
ಕೊರೆಯುವ ಗೆದ್ದಲಗಳಲ್ಲಿ
ಬೀಳುತ್ತೆ ಉರುಳು

ಬಜಾರಿನ ತರಕಾರಿ, ಬಜಾರಿಯ ಚಿನ್ನಾಭರಣ
ಈ ಪ್ರಯೋಗಾಲಯದ ಗಾಜಿನುಪಕರಣ
ಜೊತೆಯಲ್ಲಿ ನಾನೂ, ನೀವೂ
ಮಾನವ ಕುಲದ
ಇತಿಹಾಸದಶ್ವತ್ಥ ಮರದಡಿಗೆ
ಮಣ್ಣಲ್ಲಿ ಮಣ್ಣಾಗಿ ಕರಗುವ ಕತೆಯೇ
ಇಂದಿನೀ ಉಸಿರು
*****

 

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...