Home / ಕವನ / ಕವಿತೆ / ಮಣ್ಣು

ಮಣ್ಣು

ನಾನು ಭಾವ ನೀನು ಗೀತ
ನಾನು ರಾಮ ನೀನು ಸೀತ
ಹೀಗೆಲ್ಲ ಹಾಡಿದ ಕವಿಗಳು ಒಂದು ದಿನ
ನಾನು ಶವ ನೀನು ಪ್ರೇತ
ಎಂದು ಸಾಯುತ್ತಾರೆ

ನಾನು ದೇವರ ಪುತ್ರ ಬನ್ನಿ ನನ್ನಡಿಯಲ್ಲಿ
ಮೋಕ್ಷದ ಹಾದಿ ಸುರಳೀತ
ಎಂದು ಸಾರಿದ ಸಾಧಕರೆಲ್ಲ
ಗೊತ್ತಿದ್ದೋ ಗೊತ್ತಿಲ್ಲದೆಯೋ
ಇನ್ನೂ ಏಳದ ಹಾಗೆ ಮಲಗಿದ್ದಾರೆ

ಅಣು ಅರಸಿದವನು, ಕೃತಕ
ಮಳೆ ಸುರಿಸಿದವನು, ವಿದ್ಯುತ್
ಒಲೆ ಉರಿಸಿದವನು
ಒಂದು ಸಲ ಅರಸಿ ಹೋಗಿದ್ದಾರೆ ಏನನ್ನೋ
ತಿರುಗಿ ಬಂದಿಲ್ಲ

ಎಲ್ಲರೂ ಕಂಡದ್ದು ಒಂದೇ ಕೊನೆ
ಹೊಡೆದವನದೊಂದೇ ಬೆಣೆ

ನಾನಿಂತ ಮಣ್ಣಲ್ಲೆಲ್ಲ ಕರಗಿದವರ ಕತೆ
ಒಂದು ನರಿಯಂತೆ ಮತ್ತೊಂದು ಹುಲಿಯಂತೆ
ಇನ್ನೊಂದು ಬೀದಿ ನಾಯಿಯಂತೆ
ಎಲ್ಲಾ ಕೂಡಿ
ನಮ್ಮ ಮನೆಯಂಗಳಕ್ಕೆ ಮಣ್ಣಾದವಂತೆ

ಒಬ್ಬ ಮಾಸ್ತರನಂತೆ
ಉಣ್ಣದೇ ಸತ್ತವನು
ಒಬ್ಬ ಕಾರಕೂನನಂತೆ
ಹೊಟ್ಟೆ ತುಂಬಿಯೇ ಸತ್ತವನು

ಇದ್ದಾಗ ಒಬ್ಬರ ಮುಖ
ಇನ್ನೊಬ್ಬರಿಗಾಗದು
ಅವನ ಬಯ್ಯದೇ ಇವಗೆ
ಹೊತ್ತೇ ಹೋಗದು

ಇಬ್ಬರೂ ಸೇರಿ
ಚೌತಿಯ ಗಣಪತಿಗೆ
ಆಕಾರವಾದರು

ಮಣ್ಣ ಹಣತೆಯದೊಂದು ಕತೆ
ಮಡಕೆಯದೊಂದು ನೀಳ್ಗತೆ
ಹೊಸ ಮನೆಯ ಗೋಡೆಯದೊಂದು
ಕಾದಂಬರಿಯೇ ಇದೆ

ಕೇಳುತ್ತ ದಂಗಾದೆ
ಬೆರಳು ಕಚ್ಚಿದೆ ಆಶ್ಚರ್ಯಕ್ಕೆ
ಥೂ ! ಥೂ !
ಉಗಿದೆನು ಬರೀ ಮಣ್ಣು !
ಇಡೀ ಮೈ ನಕ್ಕಿತು ಒಳಗಿನವನನ್ನು ನೋಡಿ
“ನಾನು ನಿನಗಿಂತ ಹಿಂದೆ
ಸತ್ತವರ ಬೂದಿ”

ತಾಳಲಾರದೇ ಮನಸ್ಸಿನ
ಸ್ವಾಸ್ಥ್ಯಕ್ಕೆಂದು
ಮೆಲ್ಲಗೆ ಪಕ್ಕದ ಮನೆಯ
ಹುಡುಗಿಯನ್ನೆತ್ತಿಕೊಂಡೆ
ಎತ್ತಿಕೊಂಡರೆ ಪೂರಾ ಮಣ್ಣಿನದೆ ವಾಸನೆ
ಮೂಗೊತ್ತಿಕೊಂಡೆ

ಪೇಟೆಯಲ್ಲೆಲ್ಲ ಮಣ್ಣಿನದೆ ಮೆರವಣಿಗೆ
ಕ್ಲಾಸಿನಲ್ಲೆಲ್ಲ ಮಣ್ಣಿನದೆ ಬರವಣಿಗೆ
ಮಣ್ಣಿಗೆ ಮಣ್ಣು ಗೋಪುರ ಕಟ್ಟುತ್ತ

ಚೌತಿಯ ಗಣಪತಿ
ಈಶ್ವರ ಕೆರೆಯ ನೀರಲ್ಲಿ
ಹಗು-ಹಗೂರ
ಕರಗುವ ಹಾಗೆ

ನನ್ನೊಳಗೆ ಕರಗುತ್ತಿದ್ದೆ
ಮಣ್ಣಿನ ಮುದ್ದೆ

ಸತ್ತವರ ನೆರಳುಗಳಲ್ಲಿ
ಇದ್ದವರ ಕೊರಳು
ಕೊರೆಯುವ ಗೆದ್ದಲಗಳಲ್ಲಿ
ಬೀಳುತ್ತೆ ಉರುಳು

ಬಜಾರಿನ ತರಕಾರಿ, ಬಜಾರಿಯ ಚಿನ್ನಾಭರಣ
ಈ ಪ್ರಯೋಗಾಲಯದ ಗಾಜಿನುಪಕರಣ
ಜೊತೆಯಲ್ಲಿ ನಾನೂ, ನೀವೂ
ಮಾನವ ಕುಲದ
ಇತಿಹಾಸದಶ್ವತ್ಥ ಮರದಡಿಗೆ
ಮಣ್ಣಲ್ಲಿ ಮಣ್ಣಾಗಿ ಕರಗುವ ಕತೆಯೇ
ಇಂದಿನೀ ಉಸಿರು
*****

 

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...