Home / ಕವನ / ಕವಿತೆ / ನೆನಪಿಸಿಕೊಳ್ಳಬೇಕವರನ್ನೊಮ್ಮೆ

ನೆನಪಿಸಿಕೊಳ್ಳಬೇಕವರನ್ನೊಮ್ಮೆ


ಸುತ್ತಿ ಸುರುಳಿಗಟ್ಟಿ ಮದೋನ್ಮತ್ತದೊಳು
ಸೊಕ್ಕಿ ಹೆಣೆದು ಬಿಗಿದಪ್ಪಿ
ನಿರ್ಭಯದೊಳು ಆಕಾಶಕ್ಕೇರಿ
ಸೂರ್ಯನನ್ನೊಳಗೆ ಬಿಟ್ಟುಕೊಳ್ಳದ
ಪಚ್ಚೆ ಹಸಿರಿನ ಛತ್ರ ಚಾಮರಗಳ
ಪಿಸುನುಡಿಗೆ ಮೈ ಬೆವೆತರೂ
ಮೆರೆಯುವ ದಟ್ಟ ಕಾನನ

ಸುರಿಸುರಿವ ಮಳೆ
ಸೊಲ್ಲಿಲ್ಲ ಸೂರಿಲ್ಲ ಜೀವಕೆ
ಮೈ ಮುಚ್ಚಿಕೊಳ್ಳುವ ಪರಿಯಿಲ್ಲ
ಜೀವಭೀತಿಗೆ ಇದ್ದರಿಲ್ಲಿ ವಿಷಪೂರಿತ
ಬಾಣಿನ ಬೆತ್ತಲೆ ತಿರುಗುವ ಕಾಡು ಕರಿಯರು;
ಭೂರಮೆಯ ಜಾರವಾ ಜೇಂಗೊಡಗಳು.

ಸಾವಿಗೆ ಹುಳಹುಪ್ಪಡಿ ಕ್ರಿಮಿಕೀಟಗಳ
ವಿಷಾರಿ ರೋಗಾಣುಗಳು
ಭಯಾನಕ ಭಯಂಕರ ಕಾಡುವ ಕಾಡು.

ಸುತ್ತೆಲ್ಲ ಚಿತ್ತ ಹರಿಸಿದತ್ತೆಲ್ಲ
ಆಕಾಶಕೆ ತಬ್ಬಿ ಮಗದೊಮ್ಮೆ ಸೆಳೆದು
ಧುಮ್ಮನೆ ಧುಮುಕಿ ರೌದ್ರಾವತಾರದ
ಬಾಯಿಬಿಚ್ಚಿ ಗಡಚಿಕ್ಕಿ ಮುನ್ನುಗ್ಗಿ
ನೆರೆತೊರೆಯ ಸುನಾಮಿಗಳಬ್ಬರಿಸಿ
ಎದೆನಡುಗಿಸಿ ಉಸಿರು ಹಿಡಿದಾವರಿಸಿದ
ಕರಿನೀರಿನಾರಣ್ಯ.

ಕಂಡದ್ದೇ ಕರಿನೀರು ದಟ್ಟಕಾಡು
ಕನಸು ಬಿತ್ತಿದವು ಬಿಳಿಯ ಸರ್ವಾಧಿಕಾರಿಗಳು
ಬಂದೂಕು ಹೆಗಲಿಗೇರಿಸಿ ಚರ್ಮದಪಟ್ಟಿ ಹಿಡಿದು
ಸ್ವಾತಂತ್ರ್ಯ ಚಳುವಳಿಕಾರರ ಹಿಡಿದೆಳೆದು
ಕೈದಿ ಹಣೆಪಟ್ಟಿ ಹೊಡೆದು ಕೈಕಾಲಿಗೆ ಸರಪಳಿ ಬಿಗಿದು
ಹಡಗೇರಿಸಿ ಅಟ್ಟಹಾಸ ಮೆರೆದದ್ದು.

ಅರೆಬೆಂದ ಊಟ ಮಾತಿಲ್ಲ ಕತೆಯಿಲ್ಲ ಮೌನ
ಮೇಲೆ ಸೂರ್‍ಯ ಚಂದ್ರರೊಡನೆ ಮೂಕ ಸಂವಾದ
ಎದುರಿನ ಸಮುದ್ರದಬ್ಬರದ ತೆರೆಗಳೊಡನೆ
ರೋಷತುಂಬಿದೆದೆಯ ಉಸಿರು
ಸಮುದ್ರಕ್ಕಾದರೂ ಬಿದ್ದು ಸಾಯಬೇಕೆಂದರವರು
ಉಪವಾಸ ಬಿದ್ದಾದರೂ ಜೀವ ಬಿಡಬೇಕೆಂದರವರು
ತಪ್ಪಿಸಿಕೊಂಡು ದಂಡಕಾರಣ್ಯದಲ್ಲಾದರೂ ಓಡಬೇಕೆಂದರವರು
ಕಾವಲು ಕಾವಲು ಎಲ್ಲೆಲ್ಲೂ ಕಾವಲು
ಸರಳುಗಳ ಹಿಂದೆ ನಿಂತ ಅಸಹಾಯಕ ದೇಶಪ್ರೇಮಿಗಳು.

ಗಸ್ತಿನವರ ಚಾಟಿ ಸರಪಳಿ ಏಟುಗಳಿಗೆ
ಮೈಯೆಲ್ಲಾ ಬೆಂಕಿ
ಎದುರು ಮಾತನಾಡಿದ್ದಾದರೆ
ಎದುರಿಗೆ ತೂಗುವ ನೇಣು ಕುಣಿಕೆಗಳು
ಆದರೂ ತಗ್ಗದೆ ಕುಗ್ಗದೆ ಬಗ್ಗದೆ
ಜೀವದ ಹಂಗುತೊರೆದು ಜೈ ಘೋಷ ಕೂಗಿ
ಗವೆನ್ನುವ ಕತ್ತಲು ನೆಲಮಾಳಿಗೆಗೆ
ಹರಿದೋಡುವ ಬಿಸಿನೆತ್ತರಕೆ ಹೆದರದೆ
ಕುಣಿಕೆಗೆ ಕತ್ತೊಡ್ಡಿ ಬಲಿಯಾದರು.

ಅದರಾಚೆ ಹೆಣಗಳು ನುಂಗಲು ಸ್ಪರ್ಧಿಸುವ
ಕಪ್ಪು ಕರಿನೀರ ಹೆದ್ದೆರೆಗಳ ಹಲಗೆ ನಗಾರಿಗಳ ಹೊಡೆತ
ಬಿರುಗಾಳಿ ಮಳೆಯ
ಕಣ್ಣೀರಪ್ಪಳಿಸುವಿಕೆಯ ಅಲ್ಲೋಲ ಕಲ್ಲೋಲ
ಅಯ್ಯೋ! ಅದೆಷ್ಟು ಛಲ ಹೋರಾಟ
ಈ ತಾಯಿನೆಲದ ಪ್ರೀತಿಯ ಋಣಕ್ಕೆ
ಕ್ಷೋಭೆ ಹೋರಾಟ ಹತಾಶೆ ಅಸಹಾಯಕತೆಗೇ
ಇರಬೇಕು; ಗುಂಡಿನೇಟುಗಳಿಗುರುಳಿ ಕಠಿಣ ಶಿಕ್ಷೆಗೇ
ಇರಬೇಕು; ಗಲ್ಲಿಗೆ ಕತ್ತೊಡ್ಡಿ ಕೆಂಪುರಕ್ತ ಕಪ್ಪಾಗಿ ನಂಜೇರಿದ್ದು..
‘ಕಾಳಾಪಾಣಿ’ ಭಯಾನಕ ಶಬ್ದ ಹೊರಹೊಮ್ಮಿದ್ದು.

ಲಕ್ಷಾಂತರ ಚಳುವಳಿಕಾರರ ಕೂಗಿಗೆ
ಜೀವತೆತ್ತ ಆತ್ಮಗಳುಸುರಿಗೆ
ಸಿಕ್ಕಿತು ಸ್ವಾತಂತ್ರ್ಯ ಹೊರಟುಹೋದವು ಪರಂಗಿ
ಪರದೇಶದವುಗಳು


ಕುರ್ಚಿಗಾಗಿ

ಸ್ವಾರ್‍ಥಿಗಳ ಕಚ್ಚಾಟ ಹುನ್ನಾರ ವಿರೋಧ
ಗಾಂಧೀ ತಾತ ನೋಡಿಲ್ಲಿ ನಿನ್ನ ಆದರ್ಶದೇಶದ
ರೆಸಾರ್‍ಟ್ ರಾಜಕೀಯ
ಅವು ಬರಬೇಕೀ ಪುಣ್ಯಕ್ಷೇತ್ರಕೆ
ನಾಚಿಕೆ ಪಟ್ಟುಕೊಳ್ಳಬೇಕೊಮ್ಮೆ ತಮ್ಮ ಐಶಾರಾಮಿಗೆ-
ಕ್ಲಬ್ಬು ಮೋಜು ಮಜ ಕುಣಿತ ಕುಡಿತ
ಬಿಟ್ಟೊಮ್ಮೆ ಬರಬೇಕಿಲ್ಲಿ
ಯುವ ಪೀಳಿಗೆಯ ಅರೆಬರೆಯವು-

ದ್ವೀಪಗಳ ತುಂಬ ತುಂಬಿ ನಿಂತ
ಸಂಗ್ರಾಮದ ಧ್ವನಿ, ಅಸಹಾಯಕತೆ, ಕಿರುಚಾಟ
ನೋವು ಆಲಿಸಬೇಕೊಮ್ಮೆ
ನೋಡಬೇಕವರನ್ನೊಮ್ಮೆ ಮೇಲೆ ಹೊಳೆವ ತಾರೆಗಳಲ್ಲಿ
ಮಾತಾಡಬೇಕೊಮ್ಮೆ ಅವರ ಕಂಡ ಚಂದ್ರನೊಡನೆ
ಫಳಫಳಿಸಿ ಕರಿನೀರ ಕಥೆಹೇಳುವ ಸೂರ್ಯನೊಡನೊಮ್ಮೆ
ಸ್ಪರ್ಶಿಸಬೇಕೊಮ್ಮೆ ಅವರು ಇಟ್ಟ ಹೆಜ್ಜೆಯ ಮಣ್ಣು

ಎದೆ ತುಂಬ ದುಃಖ ಮೈ ತುಂಬ ನಡುಕ
ಕಣ್ಣುಗಳು ಹನಿಗೂಡುತ
ಪಾಪಪ್ರಜ್ಞೆ ಮೂಡುವ ಎಚ್ಚರಿಕೆಯ ಗಂಟೆ.
*****
(ಅಂಡಮಾನಿನ ಸೆಲ್ಯುಲಾರ್ ಜೈಲು ನೋಡಿದಾಗ)

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...