Home / ಕವನ / ಕವಿತೆ / ನಾನು

ನಾನು

ಒಂದು ದಿನ ಬೆಳಿಗ್ಗೆ ನಾನು ಕಾಣೆಯಾದೆ
ಎಷ್ಟು ಹುಡುಕಿದರೂ ಸಿಕ್ಕಲಿಲ್ಲ
ಕಂಗಾಲಾಗಿ ಪತ್ರಿಕೆಯಲ್ಲಿ ಪ್ರಕಟಣೆ ಕೊಟ್ಟೆ
“ನಾನು ಕಾಣೆಯಾಗಿದ್ದೇನೆ ಓ ನಾನೇ
ನೀನಿಲ್ಲದೇ ನಾನು ಇರಲಾರೆ ಅದಕ್ಕಾಗಿ
ಬೇಗನೇ ಬಾ”

ನಾನು ಸಿಗಲಿಲ್ಲ
ಮನೆಯಲ್ಲಷ್ಟೇ ಹುಡುಕಿದ್ದನಷ್ಟೆ
ಬೇರೆ ಕಡೆಗೂ ಹುಡುಕೋಣ ಹುಡುಕಿದರೆ
ನಾನು ಸಿಕ್ಕಬಹುದು ಎಂದು ಹುಡುಕಿದೆ
ಜೂನು ತಿಂಗಳ ಮಳೆಯೂ ರಣರಣ ಹಗಲು
ನಾನು ಆಲೆ-ಅಲೆದಾಡಿದೆ ನನ್ನನ್ನು ಸಿಗಲು

ಕಾಲೇಜು ಲೈಬ್ರರಿಯ ಪುಸ್ತಕದಲ್ಲಿ ಎಲ್ಲಾದರೂ
ನಾನು ಬಿದ್ದಿರಬಹುದೇ?
ಅಥವ ಯಾರಾದರೂ ನನ್ನ ಕದ್ದಿರಬಹುದೇ ?
ಇಲ್ಲ-ಹೀಗೂ ಇದ್ದಿರಬಹುದೇ ?
ಒಂದು ದಿನ ಮಳೆಯಲ್ಲಿ ತೋಯುತ್ತ ಬಂದಾಗ
ಜಾರಿ ಹೋಗಿರಬಹುದೇ ?
ಕಿಸೆಯೊಳಗೆ ಐಡೆಂಟಿಟೀ ಕಾರ್ಡು
ಅಲ್ಲಾದರೂ ನಾನು ಸಿಕ್ಕಬಹುದೇ ?

ಹ್ಞಾಂ-
ಅಂದಂತೆ
ಯಾವಾಗಲಾದರೂ ಈ ಮನೆಯಲ್ಲಿ ನಾನು ಇದ್ದೆನೇ
ಇದ್ದದ್ದು ಹೋದದ್ದೆಲ್ಲಿಗೆ ? ಹೋದದ್ದು ಬಂದೀತು ಯಾವಾಗ ?
ಓ ನಾನೇ ನಾನೇ ನನ್ನ ಜೀನೇ
ನೀನು ಸತ್ತೇ ಹೋದೆಯೇನೇ
ಶಂಕರಾಚಾರ್ಯರಿಗೆ ನಾನು ಯಾರು ಎಂಬುದು ಪ್ರಶ್ನೆ

ನಾನು ಶಂಕೆಯಾಚಾಯ೯
ನನಗೋ-ನಾನು ಎಲ್ಲಿದ್ದೇನೆ
ಎಂಬ ಹುಡುಕಾಟ
ಈ ಹುಡುಕಾಟವೆಲ್ಲ ಹುಡುಗಾಟವಾದೀತೇ ?
ಅಯ್ಯೋ-ನಾನು ಸಿಕ್ಕದೇ ಹೋದರೆ
ನಾನು ಹೇಗೆ ಉಳಿದೇನು ?

ಇಷ್ಟಾದರೂ ನನ್ನ ಹುಡುಕಿ ಫಲವೇನು ?
ನಾನು ಇದ್ದರೂ ಇರದೆ
ಇದ್ದರೂ ಬಿದ್ದರೂ
ಬೇರೆ ಯಾರೂ ನನ್ನ ಹುಡುಕಾಡಲೊಲ್ಲರು
ಹಾಗೆಂದು ನನಗೆ ನಾನು ಬೇಡವೇ
ಏನಿದು ಅನರ್ಥ ?

ಕನ್ನಡಿಯ ಎದುರುಗಡೆ ನಾನಿಲ್ಲ
ಅಂಗಿ ಪ್ಯಾಂಟಿನ ಒಳಗೆ ನಾನಿಲ್ಲ
ಸಭೆಯೊಳಗೆ ನಿಂತವನು ನಾನಲ್ಲ
ಈ ಪದ್ಯ ಬರೆದವನೂ ನಾನಲ್ಲ
ನಾನು ಉಂಟು ನಾನು ಇಲ್ಲ
ನಾನು ಕಾಣೆ ನಾನು ಹುಡುಕುವವ
ನನ್ನನ್ನ ನಾನೇ ಹುಡುಕಿ
ನಾನು ಸಿಗಲಿಲ್ಲ
ಎಂದರೆ ಸರಿ ಅಲ್ಲ
ಅಂದರೂ ಸಿಗದೆ ಇದ್ದದ್ದು ಸುಳ್ಳಲ್ಲ

ಈ ಮಣ್ಣಿನಾಳ ಪಾತಾಳದೊಳಗಡೆಗೆ
ನಾನು ಹೂತಿರಬಹುದೇ
ಇರಲಾರೆ-ಇರಲಾರೆ
ನಿನ್ನೆ ಕಂಡಿದ್ದ ಆ ಸುಮದ ನಗೆಯರಳಲ್ಲಿ
ನಾನು ಚೆಲ್ಲಿ ಹೋಗಿರಬಹುದೇ ?
ಇರಲಾರೆ-ಇರಲಾರೆ
ದೇವರೆದರುಗಡೆ ಕಣ್ಮುಚ್ಚಿ ಕುಳಿತಾಗ
ಹರಿದ ಭಕ್ತಿಯ ಕಡಲ
ನೀರಾಗಿ ಸಾಯುಜ್ಯ ಹೊಂದಿರಲುಬಹುದೇ ?
ಇರಲಾರೆ-ಇರಲಾರೆ
ಹಾಗಿದ್ದಲ್ಲಿ
ನಾನೆಂದೂ ತಿರುಗಿ ಬರಲಾರೆ

ಒಂದು ದಿನ ನಡುರಾತ್ರಿ
ಹೆಂಡತಿ ಮಕ್ಕಳು ರಾಜ್ಯ
ಎಲ್ಲವನ್ನೂ ತೊರೆದು
ಬುದ್ಧ ಓಡಿದ ಹಾಗೆ
ನನ್ನೊಳಗಿನಿಂದ ಈ ನಾನು ಓಡಿರಬಹುದೇ ?
ಒಂದು ಹುಣ್ಣಿಮೆ ರಾತ್ರಿ
ಕಾವಿ ಬಟ್ಟೆಯನುಟ್ಟು
ನಾನು ನನ್ನೊಳಗಡೆಗೆ ಹಿಂತಿರುಗಬಹುದೇ ?

ಹೌದಲ್ಲ
ನನ್ನದಾಗಿದ್ದಲ್ಲಿ ನನಗೆ ಸಿಗಲೇಬೇಕು
ಆದರೂ ಅಲ್ಲಿಯವರೆಗೆ ಹುಡುಕಾಡಬೇಕು
ಹುಡುಕೀ ಹುಡುಕೀ ನಾನು
ನನ್ನನ್ನು ಪಡೆದು
ನನ್ನಲ್ಲಿ ನನ್ನನ್ನು ನನ್ನ ಜಾಗದ ಮೇಲೆ
ಕೂರಿಸಿದರೆ ಮಾತ್ರ ಉಳಿದೀತು
ನನ್ನ ನನ್ನತನ
ಇಲ್ಲ-ಇದೇ ಸಣ್ಣತನ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...