Home / ಕವನ / ಕವಿತೆ / ನಾನು

ನಾನು

ಒಂದು ದಿನ ಬೆಳಿಗ್ಗೆ ನಾನು ಕಾಣೆಯಾದೆ
ಎಷ್ಟು ಹುಡುಕಿದರೂ ಸಿಕ್ಕಲಿಲ್ಲ
ಕಂಗಾಲಾಗಿ ಪತ್ರಿಕೆಯಲ್ಲಿ ಪ್ರಕಟಣೆ ಕೊಟ್ಟೆ
“ನಾನು ಕಾಣೆಯಾಗಿದ್ದೇನೆ ಓ ನಾನೇ
ನೀನಿಲ್ಲದೇ ನಾನು ಇರಲಾರೆ ಅದಕ್ಕಾಗಿ
ಬೇಗನೇ ಬಾ”

ನಾನು ಸಿಗಲಿಲ್ಲ
ಮನೆಯಲ್ಲಷ್ಟೇ ಹುಡುಕಿದ್ದನಷ್ಟೆ
ಬೇರೆ ಕಡೆಗೂ ಹುಡುಕೋಣ ಹುಡುಕಿದರೆ
ನಾನು ಸಿಕ್ಕಬಹುದು ಎಂದು ಹುಡುಕಿದೆ
ಜೂನು ತಿಂಗಳ ಮಳೆಯೂ ರಣರಣ ಹಗಲು
ನಾನು ಆಲೆ-ಅಲೆದಾಡಿದೆ ನನ್ನನ್ನು ಸಿಗಲು

ಕಾಲೇಜು ಲೈಬ್ರರಿಯ ಪುಸ್ತಕದಲ್ಲಿ ಎಲ್ಲಾದರೂ
ನಾನು ಬಿದ್ದಿರಬಹುದೇ?
ಅಥವ ಯಾರಾದರೂ ನನ್ನ ಕದ್ದಿರಬಹುದೇ ?
ಇಲ್ಲ-ಹೀಗೂ ಇದ್ದಿರಬಹುದೇ ?
ಒಂದು ದಿನ ಮಳೆಯಲ್ಲಿ ತೋಯುತ್ತ ಬಂದಾಗ
ಜಾರಿ ಹೋಗಿರಬಹುದೇ ?
ಕಿಸೆಯೊಳಗೆ ಐಡೆಂಟಿಟೀ ಕಾರ್ಡು
ಅಲ್ಲಾದರೂ ನಾನು ಸಿಕ್ಕಬಹುದೇ ?

ಹ್ಞಾಂ-
ಅಂದಂತೆ
ಯಾವಾಗಲಾದರೂ ಈ ಮನೆಯಲ್ಲಿ ನಾನು ಇದ್ದೆನೇ
ಇದ್ದದ್ದು ಹೋದದ್ದೆಲ್ಲಿಗೆ ? ಹೋದದ್ದು ಬಂದೀತು ಯಾವಾಗ ?
ಓ ನಾನೇ ನಾನೇ ನನ್ನ ಜೀನೇ
ನೀನು ಸತ್ತೇ ಹೋದೆಯೇನೇ
ಶಂಕರಾಚಾರ್ಯರಿಗೆ ನಾನು ಯಾರು ಎಂಬುದು ಪ್ರಶ್ನೆ

ನಾನು ಶಂಕೆಯಾಚಾಯ೯
ನನಗೋ-ನಾನು ಎಲ್ಲಿದ್ದೇನೆ
ಎಂಬ ಹುಡುಕಾಟ
ಈ ಹುಡುಕಾಟವೆಲ್ಲ ಹುಡುಗಾಟವಾದೀತೇ ?
ಅಯ್ಯೋ-ನಾನು ಸಿಕ್ಕದೇ ಹೋದರೆ
ನಾನು ಹೇಗೆ ಉಳಿದೇನು ?

ಇಷ್ಟಾದರೂ ನನ್ನ ಹುಡುಕಿ ಫಲವೇನು ?
ನಾನು ಇದ್ದರೂ ಇರದೆ
ಇದ್ದರೂ ಬಿದ್ದರೂ
ಬೇರೆ ಯಾರೂ ನನ್ನ ಹುಡುಕಾಡಲೊಲ್ಲರು
ಹಾಗೆಂದು ನನಗೆ ನಾನು ಬೇಡವೇ
ಏನಿದು ಅನರ್ಥ ?

ಕನ್ನಡಿಯ ಎದುರುಗಡೆ ನಾನಿಲ್ಲ
ಅಂಗಿ ಪ್ಯಾಂಟಿನ ಒಳಗೆ ನಾನಿಲ್ಲ
ಸಭೆಯೊಳಗೆ ನಿಂತವನು ನಾನಲ್ಲ
ಈ ಪದ್ಯ ಬರೆದವನೂ ನಾನಲ್ಲ
ನಾನು ಉಂಟು ನಾನು ಇಲ್ಲ
ನಾನು ಕಾಣೆ ನಾನು ಹುಡುಕುವವ
ನನ್ನನ್ನ ನಾನೇ ಹುಡುಕಿ
ನಾನು ಸಿಗಲಿಲ್ಲ
ಎಂದರೆ ಸರಿ ಅಲ್ಲ
ಅಂದರೂ ಸಿಗದೆ ಇದ್ದದ್ದು ಸುಳ್ಳಲ್ಲ

ಈ ಮಣ್ಣಿನಾಳ ಪಾತಾಳದೊಳಗಡೆಗೆ
ನಾನು ಹೂತಿರಬಹುದೇ
ಇರಲಾರೆ-ಇರಲಾರೆ
ನಿನ್ನೆ ಕಂಡಿದ್ದ ಆ ಸುಮದ ನಗೆಯರಳಲ್ಲಿ
ನಾನು ಚೆಲ್ಲಿ ಹೋಗಿರಬಹುದೇ ?
ಇರಲಾರೆ-ಇರಲಾರೆ
ದೇವರೆದರುಗಡೆ ಕಣ್ಮುಚ್ಚಿ ಕುಳಿತಾಗ
ಹರಿದ ಭಕ್ತಿಯ ಕಡಲ
ನೀರಾಗಿ ಸಾಯುಜ್ಯ ಹೊಂದಿರಲುಬಹುದೇ ?
ಇರಲಾರೆ-ಇರಲಾರೆ
ಹಾಗಿದ್ದಲ್ಲಿ
ನಾನೆಂದೂ ತಿರುಗಿ ಬರಲಾರೆ

ಒಂದು ದಿನ ನಡುರಾತ್ರಿ
ಹೆಂಡತಿ ಮಕ್ಕಳು ರಾಜ್ಯ
ಎಲ್ಲವನ್ನೂ ತೊರೆದು
ಬುದ್ಧ ಓಡಿದ ಹಾಗೆ
ನನ್ನೊಳಗಿನಿಂದ ಈ ನಾನು ಓಡಿರಬಹುದೇ ?
ಒಂದು ಹುಣ್ಣಿಮೆ ರಾತ್ರಿ
ಕಾವಿ ಬಟ್ಟೆಯನುಟ್ಟು
ನಾನು ನನ್ನೊಳಗಡೆಗೆ ಹಿಂತಿರುಗಬಹುದೇ ?

ಹೌದಲ್ಲ
ನನ್ನದಾಗಿದ್ದಲ್ಲಿ ನನಗೆ ಸಿಗಲೇಬೇಕು
ಆದರೂ ಅಲ್ಲಿಯವರೆಗೆ ಹುಡುಕಾಡಬೇಕು
ಹುಡುಕೀ ಹುಡುಕೀ ನಾನು
ನನ್ನನ್ನು ಪಡೆದು
ನನ್ನಲ್ಲಿ ನನ್ನನ್ನು ನನ್ನ ಜಾಗದ ಮೇಲೆ
ಕೂರಿಸಿದರೆ ಮಾತ್ರ ಉಳಿದೀತು
ನನ್ನ ನನ್ನತನ
ಇಲ್ಲ-ಇದೇ ಸಣ್ಣತನ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...