Home / ಕವನ / ಕವಿತೆ / ನಾಗಣ್ಣನ ಕನ್ನಡಕ

ನಾಗಣ್ಣನ ಕನ್ನಡಕ

“ಓಡಿ ಬನ್ನಿರಿ! ಕೂಡಿ ಬನ್ನಿರಿ!
ನೋಡಿ ಬನ್ನಿರಿ! ಗೆಳೆಯರೆ!
ನೋಡಿ ನಮ್ಮಯ ಕನ್ನಡಕಗಳ!
ಹಾಡಿ ಹೊಗಳಿರಿ, ಗೆಳೆಯರೆ!

“ಊರುಗನ್ನಡಿ! ಉರುಟು ಕನ್ನಡಿ!
ದೂರನೋಟದ ಕನ್ನಡಿ!
ಓರೆಕಣ್ಣಿಗೆ ನೇರು ಕನ್ನಡಿ!
ಮೂರು ಚವುಲಕೆ ಕೊಡುವೆನು.

“ಹಸುರು ಹರಳಿದು! ಹೊಸತು ಹರಳಿದು!
ಕೊಸರು ಕಾಸಿಗೆ ಕೊಡುವೆನು;
ಬಿಸಿಲು ತಾಗದು, ಬೇನೆಯಾಗದು,
ಪಿಸರು ಬಾರದು ಕಣ್ಣಿಗೆ

“ಬಿಳಿಯ ಕನ್ನಡಿ! ತಿಳಿಯ ಕನ್ನಡಿ!
ಕಳೆಯ ಬೇಡಿರಿ ಸಮಯವಾ;
ಹಲವು ಜನಕಿದು ಭೂತ ಕನ್ನಡಿ!
ಬಲವ ಕೊಡುವುದು ಕಣ್ಣಿಗೆ!

“ಹಣ್ಣುಮುದುಕಗೆ ಚಿಣ್ಣಮಕ್ಕಳ
ಕಣ್ಣು ಕೊಡುವಾ ಕನ್ನಡಿ!
ಬಣ್ಣ ಬಣ್ಣದ ಕನ್ನಡಕಗಳು
ಬೆಣ್ಣೆಯಂದದಿ ತಣ್ಣಗೆ.

“ಅರಸು ಮೂಗಿನೊಳಿದ್ದು, ರಾಜ್ಯದ
ಪರಿಯ ನೋಡುವ ಕನ್ನಡಿ!
ಎರಡು ರೂಪಾಇ ಬೆಲೆಗೆ ನಿಮ್ಮನು
ದೊರೆಯ ಮಾಡುವ ಕನ್ನಡಿ!

“ಬರಹ ಓದದ ಪರೆಯ ಕಣ್ಣನು
ತೆರೆದು ಕಲಿಸುವುದೆಲ್ಲವಾ!
ಆರಿವು, ಕನ್ನಡದಿರವು, ಇಂಗ್ಲಿಷ್
ಅರಿವು ಬರುವುದು ನಿಮಿಷದಿ!”

ಹೀಗೆ ಶ್ಯಾಮನು ಕೂಗಿ ಹೊಗಳುವ
ಸೋಗು ಮಾತನು ಕೇಳುತಾ,
ನಾಗನಪ್ಪನು ತೂಗಿ ತಲೆಯನು,
ಮೇಗೆ ಬಂದನು ಅಂಗಡಿಗೆ.

“ಒಳ್ಳೆ ಕನ್ನಡಿ ಬೇಕು ರಾಯರೆ,
ಕೊಳ್ಳಿರೈ ಸರಿ ಬೆಲೆಯನು !
ಹಳ್ಳಿ ಮಂದಿಗೆ ಕೊಡಲು ಬಾರದು
ಸುಳ್ಳು ಕನ್ನಡಿ” ಎಂದನು.

ಆಗ ಶ್ಯಾಮನು ನಾಗನಪ್ಪನ
ಮೂಗಿಗಿಟ್ಟನು ಕನ್ನಡಿ;
ಕಾಗದಗಳನು ಕೈಗೆ ಕೊಟ್ಟು,
“ಹೇಗೆ ಕಾಂಬುದು?” ಎಂದನು.

“ಆಗಲಾರದು, ತಾಗಲಾರದು”
ನಾಗನಪ್ಪನು ನುಡಿದನು;
ಬೇಗ ತೆಗೆದನು; ಬೇರೆ ಕನ್ನಡಿ
ಬಾಗಿಸಿಟ್ಟನು ಶ್ಯಾಮನು.

“ತೋರಲಾರದು, ಸೇರಲಾರದು;
ನೀರು ಹನಿವುದು ಕಣ್ಣಿಲಿ,
ಬೇರೆ ಕನ್ನಡಿ ಬೇಗನೇ ಕೊಡಿ,
ಜಾರಿ ಬೀಳ್ವುದು” ಎಂದನು.

ಮೂರು ಕನ್ನಡಿ, ಆರು ಕನ್ನಡಿ,
ನೂರು ಕನ್ನಡಿ ತೋರಿದಾ,
ಬಾರಿಬಾರಿಗೂ ನಾಗನೆಂದನು
“ತೋರದೈ ಕನ್ನಡಿಗಳು”.

ಅದನು ತೆಗೆದನು, ಇದನು ತೆಗೆದನು,
ಮುದುಕ ಗ್ರಹಕನ ಮೂಗಿನಾ
ತುದಿಯೊಳಿಟ್ಟನು; ಒಡನೆ ಮುದುಕನು
“ಮೊದಲಿನಂತೆಯ” ಎಂದನು.

“ಅರಿಕೆ ಮಾಡುವೆ, ಹಿರಿಯ ಅಯ್ಯಾ,
ಧರಿಸಬಾರದು ಕೋಪವಾ;
ಸರಿಯ ಕನ್ನಡಿ ದೊರೆವುದಿಲ್ಲ;
……ಅ….ಕುರುಡು
ಉಂಟೇ ಕಣ್ಣಿಲಿ?”

ಉರಿದು ಬಿದ್ದನು, ಮುದುಕನೆದ್ದನು-
“ಹರಳು ಕಲ್ಲನು ಮಾರುವಾ
ಕುರುಡು ರಾಯರ ನೋಳ್ಪ
ನಮ್ಮಯ ಎರಡು ಕಣ್ಣಳು ಸರಿ ಇವೆ!”

ಸಿಟ್ಟು ನುಡಿಯನು ಕೇಳಿ ಶ್ಯಾಮನು
ದಟ್ಟ ಹರಳುಗಳೆರಡನು
ಇಟ್ಟು ಗ್ರಹಕನ ಕಣ್ಣ ಮುಂಗಡೆ,
ಕೊಟ್ಟ ಕಾಗದ ಕೈಯಲಿ.

ಗುಡ್ಡ ಕುಂಬಳದಂತೆ ಬರೆದಿಹ
ದೊಡ್ಡ ಅಕ್ಷರ ಪತ್ರವಾ
ಅಡ್ಡ ಹಿಡಿದನು,-
“ಓದಿ, ಸ್ವಾಮೀ, ಅಡ್ಡಿಯಿಲ್ಲದೆ” ಎಂದನು.

“ಎಲೆಲೆ ರಾಯರೆ! ತೆಲಗು ಕನ್ನಡ
ಕಲಿಪ ಕನ್ನಡಿ ಬೇಕಲೈ!
ಬೆಲೆಯ ಕೊಡುವೆನು; ಬೇಗ ತನ್ನಿರಿ,
ಚೆಲುವ ಇಂಗ್ಲಿಷ್ ಕನ್ನಡಿ.

“ಓದು ಬರಹಗಳೆಮಗೆ ತಿಳಿಯದು,
ಓದು ಬರಹವ ತೋರುವಾ
ಬೂದು ಕನ್ನಡಿ ಬೇಕು ರಾಯರೆ,
ಬೀದಿಗೆಸೆವುದು ಮಿಕ್ಕವಾ”.

ಒರೆದ ಮಾತಿಗೆ ಮತ್ತೆ ಶ್ಯಾಮನು,
“ಬರಹ ಕಲಿಸುವ ಕನ್ನಡಿ
ಹರಳು ನಮ್ಮಲ್ಲಿಲ್ಲ, ಸ್ವಾಮೀ,
ತೆರಳಿ ಹಳ್ಳಿಯ ಸಾಲೆಗೆ!”

ಎಂದು ಶ್ಯಾಮನು ನುಡಿಯಲು ಮುಂದೆ
ನಾಗನು “ಸಾಲೆಯೋಳ್
ಚೆಂದ ಕನ್ನಡಿ ಯಾವುದೆನೆ,”
ನಗುತೆಂದನಾಗಲೆ ಶ್ಯಾಮನು-

“ಅಲ್ಲಿ ಕನ್ನಡಿ ದೊರಕುದಿಲ್ಲವು:
ಅಲ್ಲಿ ’ಕನ್ನಡ’ ದೊರೆವುದು!
ಮೆಲ್ಲನಿದ ನೀವ್ ಕಲಿತುಕೊಂಡರೆ,
ಎಲ್ಲ ತಾನೇ ಕಾಂಬುದು.”

ಹೀಗೆ ಶ್ಯಾಮನು ನುಡಿದ ಮಾತನು
ನಾಗನಪ್ಪನು ಕೇಳುತಾ
ಬೇಗ ತನ್ನಯ ಮಕ್ಕಳನು
ಲೇಸಾಗೆ ಕಳುಹಿದ ಸಾಲೆಗೆ
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...