Home / ಲೇಖನ / ಇತರೆ / ಸಂತೋಷ

ಸಂತೋಷ

ಸಂತೋಷ – ಹೆಪಿನೆಸ್ – ಎನ್ನುವುದು ಒಂದು ಮರೀಚಿಕೆ. ಹಿಡಿಯಲು ಹೋದರೆ ಜಾರಿಕೊಳ್ಳುತ್ತದೆ. ಹುಡುಕಲು ಹೋದರೆ ಸಿಗುವುದಿಲ್ಲ. ಯಾವುದನ್ನೋ ಗುರಿ ಇಟ್ಟುಕೊಂಡು ಹುಡುಕುತ್ತಾ ಹತ್ತಿರ ಹೋದರೆ ದೂರದೂರ ಓಡುತ್ತದೆ. ಇದರಲ್ಲೇ ನಮ್ಮ ಸಂತೋಷ ಇದೆ ಎಂದು ಯಾವುದಾದರೂ ಒಂದನ್ನು ಹಿಡಿದುಕೊಂಡರೆ ಮುಂದೊಂದು ದಿನ ಇದೇ ದುಃಖಕ್ಕೆ ನಾಂದಿಯಾಯಿತಲ್ಲ ಎನ್ನುವ ಕೊರಗು ಹುಟ್ಟಿಕೊಳ್ಳುತ್ತದೆ. ಸಂತೋಷ ಸಿಗುತ್ತದೆ ಎಂದು ಎಣಿಸಿದಲ್ಲಿ ಸಿಗುವುದಿಲ್ಲ. ಕೆಲವೊಮ್ಮೆ ಇಲ್ಲ ಎಂದು ಎಣಿಸಿದಲ್ಲಿ ಸಿಗುತ್ತದೆ. ಹಾಗಾಗಿ ಸಂತೋಷಕ್ಕೊಂದು ಇಕ್ವೆಶನ್ ಹಾಕುವುದೂ ಸಾಧ್ಯವಿಲ್ಲ. ಸಂತೋಷ ಎನ್ನುವುದು ನಮ್ಮ ಮನದ ಒಂದು ಭಾವನೆ.

ನಮ್ಮ ಮನೋಭೂಮಿಕೆ ಮಿತಿಯಿಲ್ಲದಷ್ಟು ವಿಶಾಲವಾಗಿದೆ. ಹಲವಾರು ಭಾವನೆಗಳ ಆಗರವಾಗಿದೆ. ಮನದಂಗಳದಲ್ಲಿ ಆಸೆಗಳ ಮೂಟೆಮೂಟೆಗಳೇ ರಾಶಿ ಬಿದ್ದಿರುತ್ತವೆ. ಎಡೆಬಿಡದ ಬೇಕು ಬೇಡಗಳು ಕಾಡಿಸುತ್ತಲೇ ಇರುತ್ತವೆ. ಅಳೆಯಲಾಗದ ಆಳದಿಂದ ಆಸೆಗಳು, ಅಗತ್ಯಗಳು, ನಿರೀಕ್ಷೆಗಳು ಉದ್ಭವವಾಗುತ್ತಲೇ ಇರುತ್ತವೆ. ಇವುಗಳಿಗೆ ತಕ್ಕ ಹಾಗೆ ಸಂತೋಷದ ಇಕ್ವೇಷನ್ ಬದಲಾಗುತ್ತಾ ಹೋಗುತ್ತದೆ.

ಹಾಗಾದರೆ ಸಂತೋಷ ಅಂದರೆ ಏನು? ಅದು ಎಲ್ಲಿ ಹೇಗೆ ಸಿಗುತ್ತದೆ? ಅದನ್ನು ನಮ್ಮದಾಗಿಸಿಕೊಳ್ಳುವುದು ಹೇಗೆ? ಸಂತೋಷದ ಹುಡುಕಾಟ ಎನ್ನುವುದು ಒಂದು ಭ್ರಮೆಯೇ? ಧರ್ಮಗ್ರಂಥಗಳಲ್ಲಿ ಇದಕ್ಕೆ ಉತ್ತರಗಳಿವೆ. ಸಂತರು, ಚಿಂತಕರು ಇದಕ್ಕೆ ಬೇರೆ ಬೇರೆ ರೀತಿಯಲ್ಲಿ ಉತ್ತರ ಹೇಳಿದ್ದಾರೆ. ಹೇಳುತ್ತಿದ್ದಾರೆ. ಆದರೆ ಒಬ್ಬ ಸಾಮಾನ್ಯ ಮನುಷ್ಯಳಾಗಿ ನನಗನಿಸುವುದು ಸಂತೋಷ ಎನ್ನುವುದು ಒಂದು ಭ್ರಮೆಯಲ್ಲದೆ ಬೇರೆ ಏನೂ ಅಲ್ಲ ಎಂದು. ನಾವು ಎಣಿಸಿದುದರಲ್ಲಿ ಸಂತೋಷ ಸಿಗುವುದಿಲ್ಲ ಎನ್ನುವುದು ಗೊತ್ತಿದ್ದರೂ ಅದನ್ನು ಹುಡುಕಿಕೊಂಡು ಹೋಗುತ್ತೇವೆಯಲ್ಲ ಅಲ್ಲೇ ಸಂತೋಷದ ಅವಸಾನವಾಗಿರುತ್ತದೆ. ಸಂತೋಷದ ಹುಡುಕಾಟವೇ ದುಃಖದ ಮೂಲ.

ಆದರೂ ಎಲ್ಲರಿಗೂ ಬೇಕಾಗಿರುವುದು ಸುಖ, ಸಂತೋಷ, ಸರಿಯಾಗಿ ಆಲೋಚಿಸಿದರೆ, ಸಂತೋಷ ಸಿಗುವುದು ಹೊರಗಿನ ಸುಖಗಳಿಂದಲ್ಲ. ನಮ್ಮೊಳಗಿನ ಭಾವನೆಗಳಿಂದ. ನಮ್ಮ ಭಾವನೆಗಳನ್ನು ನಿಯಂತ್ರಿಸುವುದರಿಂದ ಅದನ್ನು ಪಡೆದುಕೊಳ್ಳುವುದು ಸಾಧ್ಯ. ನಾವು ಏನನ್ನಾದರೂ ಗೆದ್ದರೆ, ನಮಗೆ ಬೇಕಾದ್ದು ಏನಾದರೂ ಸಿಕ್ಕಿದರೆ, ನಮಗೆ ಬೇಕಾದಂತೆ ಎಲ್ಲವೂ ನಡೆದರೆ ಸಂತೋಷ ಸಿಗುತ್ತದೆ ಎನ್ನುವುದು ಒಂದು ಭ್ರಮೆ. ಇದರಕ್ಕಿಂತ ಏನಾದರೂ ಒಳ್ಳೆಯದನ್ನು ಯೋಚಿಸಿದರೆ ಯಾರಿಗಾದರೂ ಒಳ್ಳೆಯದನ್ನು ಮಾಡಿದರೆ ಸಂತೋಷ ಸಿಗುತ್ತದೆ. ಸಂತೋಷ ಎನ್ನುವುದು ನಮ್ಮೊಳಗೇ ಇದೆ. ನಮ್ಮ ಮನಸ್ಸಿನಲ್ಲಿ, ನಮ್ಮ ಹೃದಯದಲ್ಲಿ, ನಮ್ಮ ಅರಿವಿನಲ್ಲಿ, ನಮ್ಮ ಆಯ್ಕೆಯಲ್ಲಿ, ನಮ್ಮ ಗುರುತಿಸುವಿಕೆಯಲ್ಲಿ, ನಾವು ಜೀವನವನ್ನು ನೋಡುವ ದೃಷ್ಟಿಯಲ್ಲಿ, ನಾವು ಜೀವಿಸುವ ರೀತಿಯಲ್ಲಿ ಸಂತೋಷದ ಒಸರಿದೆ. ನಾವು ಅನುಭವಿಸುವ ದುಃಖದಲ್ಲಿ ಸಂತೋಷದ ಅಂಶವಿದೆ. ಅನುಭವಿಸುವ ಸಂತೋಷದಲ್ಲಿ ದುಃಖದ ಒಳಹರಿವಿದೆ. ಇದನ್ನು ಗುರುತಿಸುವ ದಾರಿಯನ್ನು ಕಂಡುಕೊಂಡರೆ ಸಂತೋಷ ಎನ್ನುವುದು ನಮ್ಮ ಹತ್ತಿರದಲ್ಲೇ ಎಲ್ಲೋ ಸುಳಿಯುತ್ತಿದೆ ಎನ್ನುವ ಅರಿವಾಗುತ್ತದೆ. ಉದಾಹರಣೆಗೆ ನಮ್ಮ ಅತ್ಯಂತ ಪ್ರೀತಿ ಪಾತ್ರರಿಂದ ದೂರವಾಗುವ ದುಃಖವನ್ನೇ ತೆಗೆದುಕೊಂಡರೆ ಆ ದುಃಖದಲ್ಲಿ ನಮಗೆ ಅವರೆಷ್ಟು ಪ್ರೀತಿಯವರು ಎನ್ನುವ ಸಂತೋಷದ ಅರಿವಿದೆ. ಈ ಪ್ರೀತಿಯೆನ್ನುವ ಸಂತೋಷದ ಅರಿವಿನಿಂದಲೇ ಅವರ ಅಗಲಿಕೆ ನಮಗೆ ನೋವನ್ನು ತರುತ್ತದೆ. ಸಂತೋಷ ಮತ್ತು ದುಃಖ ಒಂದರೊಳಗೊಂದು ಸೇರಿಕೊಂಡೇ ಇದೆ. ಸ್ವಲ್ಪ ಆಳವಾಗಿ ಯೋಚಿಸಿದರೆ ಇದಕ್ಕೆ ಉದಾಹರಣೆಗಳನ್ನು ನಾವೇ ಕಂಡುಕೊಳ್ಳಬಹುದು.

ಸಂತೋಷವನ್ನು ಹುಡುಕಿಕೊಂಡು ಅಲೆಯುವವನಿಗಿಂತ ಏನು ಲಭ್ಯವಾಗಿದೆಯೋ ಆದರಲ್ಲಿಯೇ ಸಂತೋಷವನ್ನು ಕಂಡುಕೊಳ್ಳುವವನಿಗೆ ನಿಜವಾದ ಸಂತೋಷ ಯಾವಾಗಲೂ ಸಿಗುತ್ತದೆ. ಇದ್ದುದರಲ್ಲಿಯೇ ಸಂತೋಷವನ್ನು ಹುಡುಕಿಕೊಳ್ಳುವ ಮನೋಭಾವ ಜೀವನದ ರೀತಿಯೇ ಆದಾಗ ಸಂತೋಷವನ್ನು ಹುಡುಕುವ, ಹುಡುಕಿಕೊಂಡು ಹೋಗಿ ಸಿಗದಾಗ ನಿರಾಶರಾಗುವ ಪ್ರಮೇಯವೇ ಎದುರಾಗುವುದಿಲ್ಲ. ಸಂತೋಷ ಯಾವಾಗಲೂ ನಮ್ಮ ಜೊತೆಗೇ ಇರುತ್ತದೆ. ನಮ್ಮ ಒಳಗೇ ಇರುತ್ತದೆ.

ಒಂದು ಸುಂದರವಾದ ಮಾತಿದೆ. ಸಂತೋಷವೆನ್ನುವುದು ಕೈಗೆಟಕುವ ಹೂಗಳಿಂದಲೇ ತಯಾರಿಸಿದ ಒಂದು ಸುಂದರವಾದ ಹೂಗೊಂಚಲಿನ ಹಾಗೆ. ಸುಂದರವಾದ ಹೂಗೊಂಚಲಿಗೆ ಇದೇ ಹೂವಾಗಬೇಕೆನ್ನುವ ಚೌಕಟ್ಟು ಇಲ್ಲ. ಯಾವ ಹೂ ಕೈಗೆ ಸಿಗುವುದೋ ಅದರಿಂದಲೇ ಹೂ ಗೊಂಚಲನ್ನು ತಯಾರಿಸಬಹುದು. ಮನಸೆಳೆಯುವ ಅಂತಹ ಹೂಗೊಂಚಲೊಂದನ್ನು ತಯಾರಿಸುವ ಕಲೆಯಂತಹ ಕಲೆ ಸಂತೋಷ. ಜೀವನದಲ್ಲಿಯೂ ಹಾಗೆ, ನಮಗೆ ಸಿಕ್ಕಿದುದರಲ್ಲಿಯೇ ಸಂತೋಷವನ್ನು ಕಂಡು ಹುಡುಕುವ ಮನೋಭೂಮಿಕೆಯನ್ನು ನಮ್ಮದಾಗಿಸಿಕೊಂಡರೆ ಸಂತೋಷ ನಮ್ಮ ಹತ್ತಿರವೇ ಇದೆ, ನಮ್ಮ ಒಳಗೇ ಇದೆ ಎನ್ನುವ ಅರಿವಾಗುತ್ತದೆ. ಅರಿಯುವ ಕಲೆಯನ್ನು ಸಿದ್ಧಿಸಿಕೊಂಡರೆ ಈ ಸಂತೋಷಕ್ಕಾಗಿ ಪರದಾಡುವ ಕಷ್ಟವಿಲ್ಲ. ಸಂತೋಷ ಭ್ರಮನಿರಸನವಿಲ್ಲ. ಸಿಗದಾಗ ಸಂತೋಷವನ್ನು ಹುಡುಕಿಕೊಂಡು ಹೋಗುವ ಜಂಜಾಟವಿಲ್ಲ.
*****
(ಚಿಂತನ – ಆಕಾಶವಾಣಿ, ಮಂತಣಿ)

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...