Home / ಕವನ / ಕವಿತೆ / ಬದುಕು ಬೇಡ ಅನ್ನಿಸಲಿಲ್ಲ

ಬದುಕು ಬೇಡ ಅನ್ನಿಸಲಿಲ್ಲ

ಜ್ವರ ನೂರಾನಾಲ್ಕು ಡಿಗ್ರಿಗೆ ಏರಿ ಎದೆ ಹಾರಿ
ಹೋದಾಗಲೂ ಈ ಡಿಗ್ರಿಗಳ ಕೋಟೆಗಳ ಮೀರಿ
ಪ್ರಾಣಪಕ್ಷಿ ಎನ್ನುತ್ತಾರಲ್ಲ ಅದು ರೆಕ್ಕೆ ಬಿಚ್ಚಿ
ಪುರ್ರಂತ ದಿಗಂತ ಸೇರಿ ಅಂಥದೇ ಪಕ್ಷಗಳ ಪ್ರಭಾತಫೇರಿ
ಕೂಡಿಕೊಳ್ಳಲಿ ಈ ಜೀವ ಗರಂ ಇದ್ದುದು ನರಂ ಆಗಲಿ
ಅನ್ನಲಿಲ್ಲ ಆ ಹೊತ್ತಿನಲ್ಲೂ ಸಾವು ಬೇಕೆನಿಸಲಿಲ್ಲ

ಈ ಕೆಂಪು ಬಿಳಿ ಪಂಚ ಪಂಚ ಪ್ರಾತಃಕಾಲ
ಹೇಗೆ ಹೋಗಲಿ ಬದುಕಿನ ಬಟ್ಟೆಗಳ ಕಳಚಿ-
ಜೀವದ ತುಂಬ ವ್ಯಥೆ ತುಂಬಿ ಒಂದು ಥರಾ
ಹೊಟ್ಟೆ ತೊಳೆಸಿ ಬಂತು ಉಸಿರು ಅಲ್ಲೂ ಇಲ್ಲೂ
ತೇಕುತ್ತಿದ್ದಾಗಲೂ ಬದುಕು ಎಷ್ಟು ಸಿಹಿ ಎಷ್ಟು ಸಹ್ಯ
ಅನುಪಾನ ಉಪಚಾರ ತಣ್ಣೀರು ಪಟ್ಟಿಗಳ ಸಶ್ರಮ ಶಿಕ್ಷೆಯ ನಡುವೆ
ನನ್ನ ಚೈತನ್ಯ
ಗೋಕರ್ಣದ ಬೇಲೆ ದೇವಸ್ಥಾನಗಳನ್ನು ಸುತ್ತಾಡಿ
ಹಿರೇಗುತ್ತಿಯನ್ನು ಮೂಸುತ್ತ ಹೊರಟಿತು

ನನ್ನ ಹಳೆಯ ಕನ್ನಡ ಶಾಲೆಯ ಹತ್ತಿರ ಕಾರು ನಿಂತಿತು
ಇಲ್ಲಿಯ ಕ್ಲಾಸುಗಳಲ್ಲಿ ಅಂಗಿ ಚಡ್ಡಿಯ ನಾನು ಇದ್ದೆ
ಒಂದು ದಿನ ಮನೆಗೋಡಿ ಬರುವಾಗ ಇದೇ ಕಂಪೌಂಡಿನಲ್ಲೊಮ್ಮೆ ಬಿದ್ದೆ
ಮಣ್ಣು ಬಾಯೊಳಹೊಕ್ಕಿತು ಥೂಥೂ ಉಗಿದೆ ಎಲ್ಲ ನಗಬೇಕಿತ್ತು
ನಗಲಿಲ್ಲ ನಾ ಇದ್ದಾಗಲೇ ಅಲ್ಲಿದ್ದ ಧ್ವಜದ ಕಂಬ ಕಿತ್ತು ಇಲ್ಲಿ ಹುಗಿದರು
ನನ್ನ ಜೊತೆ ಇದ್ದವರೆಲ್ಲ ಈಗ ಎಲ್ಲೆಲ್ಲಿದ್ದಾರೆ ಮತ್ತೆ
ಹಾಗೆ ಒಟ್ಟಿಗೆ ಸೇರಲಾರೆವು ಇವೆಲ್ಲ ಒಮ್ಮುಖದ ಓಟ
ಯಾವುದೋ ಗುರಿ ಮುಟ್ಟಲಿಕ್ಕಿರುವ ಒಂದೇ ಉಸಿರಿನ ಆಟ
ಇಲ್ಲಿಯ ಕಬಡ್ಡಿ ಮೂಲೋದ್ಯೋಗ ವ್ಯಾಯಾಮ ಪ್ರಾರ್ಥನೆ
ಪಂಚಾಂಗ ಅಮೃತವಾಣಿ ವಾರದ ಚರ್ಚಾಕೂಟ ಬೆಳಗಿನ ಉಪ್ಪಿಟ್ಟು
ನನ್ನ ಮಾಸ್ತರರು ಅಕ್ಕವರು ಗೆಳೆಯರು ಚಾಡಿ ಮಾತು….
ಜ್ವರ ತೊಂಬತ್ತೊಂಬತ್ತಕ್ಕೆ ಇಳಿಯಿತು

ಕಿವಿಯಲ್ಲಿ ಅಘನಾಶಿನಿ ಮೊರೆದಳು
ಅಘನಾಶಿನೀ ನನಗೆ ಹಾದಿ ಬಿಡು
ಅಲ್ಲಿ ತಾರೀಕಟ್ಟೆಯಲ್ಲಿ ಒಂದರೆಗಳಿಗೆ ಕೂತು
ನಿನ್ನ ನೋಡಿ ಮೈ ಮರೆಯುವೆ ಹೇಳು
ಈ ಚಂದ್ರನ್ನ ನಕ್ಷತ್ರಗಳ ತೊಟ್ಟಿಲು ಕಟ್ಟಿ ತೂಗಿದರಾರು
ನಿನ್ನ ಗರ್ಭದ ಪಾತಾಳದೊಳಗೆ ಸೇರಿದ ಜೀವಗಳೆಷ್ಟು
ಈ ದಡವನ್ನು ಕಾಲುಗಳು ತುಳಿದವು
ನಕ್ಷತ್ರಗಳು ಮೈ ತೊಳೆಯಲು ನಿನ್ನಲ್ಲಿಗೇ ಬಂದಿದ್ದವೇ
ಈ ತಾರಿಕಟ್ಟಿ ಕಟ್ಟಿದವರಾರು ಸಭಾಹಿತರ ಮನೆಯವರು
ಯಾವಾಗ ಬಂದರು ನಿನಗೆಷ್ಟು ವರ್ಷ ಇಲ್ಲಿ ರಾಮಸೀತೆ
ಬಂದಿದ್ದು ನಿಜವೇ ಆ ನಾಯಿಯನ್ನು ಆ ಜನರು ಗುಂಡಿಟ್ಟು
ಕೊಂದರೇ ಈ ತೆಂಗಿನ ಮರದ ಕಾಯಿಗಳನ್ನು ಕದ್ದವರಾರು
ದಿವಸದ ಮೊದಲಿನ ದೋಣಿ ಎಷ್ಟಕ್ಕೆ ಹೊರಡುತ್ತದೆ
ಇವರೆಲ್ಲ ಎಲ್ಲಿಯವರು ಏನಾಗಲಿರುವರು ನೀನು ಎಲ್ಲಿಂದ ಬಂದೆ
ಹೋಗುವೆ ಎಲ್ಲಿಗೆ ಈ ನೈಟ್ ಹಾಲ್ಟ್ ಬಸ್ಸು ಇವತ್ತು ರಾತ್ರಿ
ಎಷ್ಟಕ್ಕೆ ಬಂತು ಈ ಹಾದಿ ದೀಪದ ಮಂದ ಬೆಳಕಲ್ಲಿ
ಹೊಳೆವ ಕಲ್ಲು ಬೂದಿ ಮಣ್ಣು ಬೀದಿನಾಯಿ ಪಾಗಾರ ಕೆಂಪುಬಸ್ಸು
ಇವುಗಳ ಅರ್ಥ ಹೇಳು ಅಘನಾಶಿನೀ ನಿನ್ನ ಸುದೀರ್ಘ ಮೌನ
ಕಳೆದು ಏನೇನೆಂದು ಉಸುರು ಈ ನಿನ್ನ ಗಂಡನ ಹೆಸರು
ಹೇಳು ಇಲ್ಲದಿದ್ದರೆ ನನ್ನ ತಲೆ ಹಾಳಾಗಿ ಹೋಳಾಗಿ ಹೋಗುವುದು
ತಾಯೀ ಅದಕ್ಕಾಗಿಯಾದರೂ ಮಾತಾಡು ನನ್ನ ಚೈತನ್ಯ
ನಿನ್ನ ಮಾತುಗಳಿಂದ ಶಾಂತವಾಗಲಿ
*****

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...