Home / ಕವನ / ಕವಿತೆ / ಬದುಕು ಬೇಡ ಅನ್ನಿಸಲಿಲ್ಲ

ಬದುಕು ಬೇಡ ಅನ್ನಿಸಲಿಲ್ಲ

ಜ್ವರ ನೂರಾನಾಲ್ಕು ಡಿಗ್ರಿಗೆ ಏರಿ ಎದೆ ಹಾರಿ
ಹೋದಾಗಲೂ ಈ ಡಿಗ್ರಿಗಳ ಕೋಟೆಗಳ ಮೀರಿ
ಪ್ರಾಣಪಕ್ಷಿ ಎನ್ನುತ್ತಾರಲ್ಲ ಅದು ರೆಕ್ಕೆ ಬಿಚ್ಚಿ
ಪುರ್ರಂತ ದಿಗಂತ ಸೇರಿ ಅಂಥದೇ ಪಕ್ಷಗಳ ಪ್ರಭಾತಫೇರಿ
ಕೂಡಿಕೊಳ್ಳಲಿ ಈ ಜೀವ ಗರಂ ಇದ್ದುದು ನರಂ ಆಗಲಿ
ಅನ್ನಲಿಲ್ಲ ಆ ಹೊತ್ತಿನಲ್ಲೂ ಸಾವು ಬೇಕೆನಿಸಲಿಲ್ಲ

ಈ ಕೆಂಪು ಬಿಳಿ ಪಂಚ ಪಂಚ ಪ್ರಾತಃಕಾಲ
ಹೇಗೆ ಹೋಗಲಿ ಬದುಕಿನ ಬಟ್ಟೆಗಳ ಕಳಚಿ-
ಜೀವದ ತುಂಬ ವ್ಯಥೆ ತುಂಬಿ ಒಂದು ಥರಾ
ಹೊಟ್ಟೆ ತೊಳೆಸಿ ಬಂತು ಉಸಿರು ಅಲ್ಲೂ ಇಲ್ಲೂ
ತೇಕುತ್ತಿದ್ದಾಗಲೂ ಬದುಕು ಎಷ್ಟು ಸಿಹಿ ಎಷ್ಟು ಸಹ್ಯ
ಅನುಪಾನ ಉಪಚಾರ ತಣ್ಣೀರು ಪಟ್ಟಿಗಳ ಸಶ್ರಮ ಶಿಕ್ಷೆಯ ನಡುವೆ
ನನ್ನ ಚೈತನ್ಯ
ಗೋಕರ್ಣದ ಬೇಲೆ ದೇವಸ್ಥಾನಗಳನ್ನು ಸುತ್ತಾಡಿ
ಹಿರೇಗುತ್ತಿಯನ್ನು ಮೂಸುತ್ತ ಹೊರಟಿತು

ನನ್ನ ಹಳೆಯ ಕನ್ನಡ ಶಾಲೆಯ ಹತ್ತಿರ ಕಾರು ನಿಂತಿತು
ಇಲ್ಲಿಯ ಕ್ಲಾಸುಗಳಲ್ಲಿ ಅಂಗಿ ಚಡ್ಡಿಯ ನಾನು ಇದ್ದೆ
ಒಂದು ದಿನ ಮನೆಗೋಡಿ ಬರುವಾಗ ಇದೇ ಕಂಪೌಂಡಿನಲ್ಲೊಮ್ಮೆ ಬಿದ್ದೆ
ಮಣ್ಣು ಬಾಯೊಳಹೊಕ್ಕಿತು ಥೂಥೂ ಉಗಿದೆ ಎಲ್ಲ ನಗಬೇಕಿತ್ತು
ನಗಲಿಲ್ಲ ನಾ ಇದ್ದಾಗಲೇ ಅಲ್ಲಿದ್ದ ಧ್ವಜದ ಕಂಬ ಕಿತ್ತು ಇಲ್ಲಿ ಹುಗಿದರು
ನನ್ನ ಜೊತೆ ಇದ್ದವರೆಲ್ಲ ಈಗ ಎಲ್ಲೆಲ್ಲಿದ್ದಾರೆ ಮತ್ತೆ
ಹಾಗೆ ಒಟ್ಟಿಗೆ ಸೇರಲಾರೆವು ಇವೆಲ್ಲ ಒಮ್ಮುಖದ ಓಟ
ಯಾವುದೋ ಗುರಿ ಮುಟ್ಟಲಿಕ್ಕಿರುವ ಒಂದೇ ಉಸಿರಿನ ಆಟ
ಇಲ್ಲಿಯ ಕಬಡ್ಡಿ ಮೂಲೋದ್ಯೋಗ ವ್ಯಾಯಾಮ ಪ್ರಾರ್ಥನೆ
ಪಂಚಾಂಗ ಅಮೃತವಾಣಿ ವಾರದ ಚರ್ಚಾಕೂಟ ಬೆಳಗಿನ ಉಪ್ಪಿಟ್ಟು
ನನ್ನ ಮಾಸ್ತರರು ಅಕ್ಕವರು ಗೆಳೆಯರು ಚಾಡಿ ಮಾತು….
ಜ್ವರ ತೊಂಬತ್ತೊಂಬತ್ತಕ್ಕೆ ಇಳಿಯಿತು

ಕಿವಿಯಲ್ಲಿ ಅಘನಾಶಿನಿ ಮೊರೆದಳು
ಅಘನಾಶಿನೀ ನನಗೆ ಹಾದಿ ಬಿಡು
ಅಲ್ಲಿ ತಾರೀಕಟ್ಟೆಯಲ್ಲಿ ಒಂದರೆಗಳಿಗೆ ಕೂತು
ನಿನ್ನ ನೋಡಿ ಮೈ ಮರೆಯುವೆ ಹೇಳು
ಈ ಚಂದ್ರನ್ನ ನಕ್ಷತ್ರಗಳ ತೊಟ್ಟಿಲು ಕಟ್ಟಿ ತೂಗಿದರಾರು
ನಿನ್ನ ಗರ್ಭದ ಪಾತಾಳದೊಳಗೆ ಸೇರಿದ ಜೀವಗಳೆಷ್ಟು
ಈ ದಡವನ್ನು ಕಾಲುಗಳು ತುಳಿದವು
ನಕ್ಷತ್ರಗಳು ಮೈ ತೊಳೆಯಲು ನಿನ್ನಲ್ಲಿಗೇ ಬಂದಿದ್ದವೇ
ಈ ತಾರಿಕಟ್ಟಿ ಕಟ್ಟಿದವರಾರು ಸಭಾಹಿತರ ಮನೆಯವರು
ಯಾವಾಗ ಬಂದರು ನಿನಗೆಷ್ಟು ವರ್ಷ ಇಲ್ಲಿ ರಾಮಸೀತೆ
ಬಂದಿದ್ದು ನಿಜವೇ ಆ ನಾಯಿಯನ್ನು ಆ ಜನರು ಗುಂಡಿಟ್ಟು
ಕೊಂದರೇ ಈ ತೆಂಗಿನ ಮರದ ಕಾಯಿಗಳನ್ನು ಕದ್ದವರಾರು
ದಿವಸದ ಮೊದಲಿನ ದೋಣಿ ಎಷ್ಟಕ್ಕೆ ಹೊರಡುತ್ತದೆ
ಇವರೆಲ್ಲ ಎಲ್ಲಿಯವರು ಏನಾಗಲಿರುವರು ನೀನು ಎಲ್ಲಿಂದ ಬಂದೆ
ಹೋಗುವೆ ಎಲ್ಲಿಗೆ ಈ ನೈಟ್ ಹಾಲ್ಟ್ ಬಸ್ಸು ಇವತ್ತು ರಾತ್ರಿ
ಎಷ್ಟಕ್ಕೆ ಬಂತು ಈ ಹಾದಿ ದೀಪದ ಮಂದ ಬೆಳಕಲ್ಲಿ
ಹೊಳೆವ ಕಲ್ಲು ಬೂದಿ ಮಣ್ಣು ಬೀದಿನಾಯಿ ಪಾಗಾರ ಕೆಂಪುಬಸ್ಸು
ಇವುಗಳ ಅರ್ಥ ಹೇಳು ಅಘನಾಶಿನೀ ನಿನ್ನ ಸುದೀರ್ಘ ಮೌನ
ಕಳೆದು ಏನೇನೆಂದು ಉಸುರು ಈ ನಿನ್ನ ಗಂಡನ ಹೆಸರು
ಹೇಳು ಇಲ್ಲದಿದ್ದರೆ ನನ್ನ ತಲೆ ಹಾಳಾಗಿ ಹೋಳಾಗಿ ಹೋಗುವುದು
ತಾಯೀ ಅದಕ್ಕಾಗಿಯಾದರೂ ಮಾತಾಡು ನನ್ನ ಚೈತನ್ಯ
ನಿನ್ನ ಮಾತುಗಳಿಂದ ಶಾಂತವಾಗಲಿ
*****

 

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...