Home / ಕವನ / ಕವಿತೆ / ಮತ್ತೆ ಮಳೆ ಹೊಯ್ಯಲಿದೆ

ಮತ್ತೆ ಮಳೆ ಹೊಯ್ಯಲಿದೆ

ಮತ್ತೆ ಮಳೆ ಹೊಯ್ಯುವದೆ ? ಬಾಯಾರಿ ಬಿದ್ದ
ಬಾವಿಗಳು ತುಂಬುವವೆ ? ಬಾಡಿ ಬಸವಳಿದ
ನನ್ನ ಹಿತ್ತಲ ಗಿಡದ ಎಲೆಗಳು ಚಿಗುರುವವೆ ?
ಬರಲಿದೆಯೆ ಮೋಡಗಳ ಸಾಲು ? ಕಣ್ತುಂಬಲಿದೆಯೆ
ಮಿಂಚುಗಳ ಆಟ ? ಮೊದಲ ಮಳೆ ಬಿದ್ದು
ಮಣ್ಣು ಘಮ್ಮೆಂದ ಸಂಭ್ರಮ ? ಹರಕು ಕೊಡೆಗಳ
ಹೊಲಿಗೆ ? ತಟ್ಟಿ ಕಟ್ಟುವುದು ? ನೀರು ಸೋರುವಲ್ಲೆಲ್ಲ
ತಕ್ಕ ವ್ಯವಸ್ಥೆ ? ನಿಜ ಇವೆಲ್ಲ ಕಳೆದಿದ್ದೇ ದಾರಿ
ಈ ದಾರಿ ದಾಟಿದ್ದು ಅದೆಷ್ಟೋ ಬಾರಿ ಆದರೂ
ಕಳೆದಿದ್ದು ಕಟ್ಟುವುದು ಮತ್ತೆ ಮತ್ತೆ ಕಟ್ಟುವುದು
ಇದು ನಮ್ಮ- ನಿಮ್ಮ- ಭಾಗ್ಯ ಅದೆಲ್ಲಾ ಸರಿ ಗೆಳೆಯ
ಈಗ ಹೇಗಿದೆ ನಿನ್ನ ಆರೋಗ್ಯ ?

ಮನುಷ್ಯರ ಮಿತಿಗಳ ದಾಟಿ ನನ್ನ ಜ್ವರ ಇನ್ನು ಕೈ
ಬಿಟ್ಟೆವೋ ಎಂಬಂತೆ ಕ್ಷೀಣ ಸ್ವರ ಹೋದ ಹೋದ
ಕಣ್ಣುಗಳು ತುಂಬಿ ಬಂದವು ಜೀವದ ಕನಸುಗಳೆಲ್ಲ
ಕುತ್ತಿಗೆಗೆ ಬಂದವು ಉಕ್ಕಿ ಹರಿಯಿತು ಅಘನಾಶಿನಿ
ಈಸುತ್ತ ಬಂದವು ನೆನಪುಗಳು ಆ ನೆನಪುಗಳಿಗೆ
ನಾನಾ ಸ್ವರೂಪ ಕಲಸಿ ಕಲಸಿ
ಕಣ್ಣೊತ್ತಿ ನಿಂತಿದ್ದು ಮಂಗಳದ ಕುಂಕುಮ ಹೇಳು
ಆ ತಾಯಿ ಯಾರು ? ಅನಿಸುವುದು ನಾನು ಬದುಕುಳಿದಿದ್ದು
ಸಂಕಲ್ಪ ಮಾತ್ರದಿಂದ

ಮತ್ತೆ ಮಳೆ ಹೊಯ್ಯುವುದೆ ? ನನ್ನೂರು ಹಿರೇಗುತ್ತಿ
ಸ್ನಾನದ ಪುಳಕಕ್ಕೆ ಅರಳಿ ಹೂವಾಗುವುದೆ ? ಈಶ್ವರ ಕೆರೆ
ತುಂಬಿ ಎಬ್ಬಿಸುವುದೆ ರೋಮಾಂಚನ ? ಇದೇ ರೀತಿ
ಚೌತಿಯ ತನಕ ಇದ್ದು ಬಿಟ್ಟರೆ ಬಹಳ ಆರಾಮು
ಅನಂತರವೇನೂ ಬೇಡ ಎಂದಲ್ಲ …………….

ಮೃತ್ಯು ಲೋಕ ಬಾ ಎಂದಾಗ ಬದುಕು ಸಿಹಿ ಅನಿಸಿತು
ಇಲ್ಲಿ ಬದುಕುವೆ ಮಾನವನಾಗಿ ಈ ಬದುಕು ನನ್ನದು
ಇದರ ಸೋಲೂ ಗೆಲುವೂ ಸಂಪೂರ್ಣ ನನ್ನದು ಒಮ್ಮೆ
ಕೊಟ್ಟು ನೋಡು ಅವಕಾಶ- ಆಗ
ಎತ್ತರಿಸುವೆ ಆಕಾಶ

ಸ್ವಲ್ಪ ಸಾವಕಾಶ ಬಿದ್ದ ಮಳೆ ಪೂರಾ ನೋಡಿದ್ದೇ ಕೀರ್ತಿ
ಅಲ್ಲ. ನಮ್ಮೂರ ಕೆರೆಗಳ ಪಾಲೂ ಉಂಟಲ್ಲ ? ಬಾ ಎಂದು ಕರೆಯುವ
ಬೆಟ್ಟಗಳು ನವಿಲುಗಳು ಕಪ್ಪೆಗಳು ಇವುಗಳಿಗೆ ಅಭಾರ
ಸಲ್ಲಲೇಬೇಕಲ್ಲ ? ಮುಖ್ಯವಾಗಿ ಇವೆಲ್ಲ ಪ್ರಕೃತಿ ನಿಯಮ
ಇದು ಸತ್ಯ. ಇದು ಸತ್ಯ ನಂಬು

ನಾನಾಗ ಚಿಕ್ಕವನು ಆಗ ಇದ್ದಿದ್ದು ಈ ಮನೆಯಲ್ಲಲ್ಲ ಇದೇ
ಕೇರಿಯಲ್ಲಿ ಕೆಳಗೆ ಎಂಥ ಮಳೇ ಹೇಗೆ ಹರಿಯುತ್ತಿತ್ತು, ನೀರು !
ಆ ನೀರಿನ ಎದುರು ಎದ್ದ ಗುಳ್ಳೆಗಳ ಎದುರು ದಂಗು ದುಗುಡದ ನಾ
ಮನೆ ಅಂಗಳದ ಎರಡನೇ ಮೆಟ್ಟಿಲ ಮೇಲೆ ಆ ಗುಳ್ಳೆಗಳಿಗೆ
ಕೈ ಬೀಸುತ್ತಿದ್ದೆ. ಆ ಗುಳ್ಳೆಗಳದು ಅನಿಯಂತ್ರಿತ ಪ್ರವಾಹ
ಇಂದಿಗೂ ನಾನು ಅದೇ ಹುಡುಗ ಗಡ್ಡ ಮೀಸೆ ಬಂದಿದ್ದು
ನನಗಲ್ಲ ನನ್ನ ದೇಹಕ್ಕೆ

ಮತ್ತೆ ಮಳೆ ಹೊಯ್ಯಲಿದೆ. ಕಲ್ಪನೆಯ ಕಡಲುಗಳು
ತುಂಬಿ ತುಳುಕಲಿವೆ ಹಡಗುಗಳು ಬರಲಿವೆ ದೋಣಿಗಳು
ಬರಲಿವೆ ಆಚೆ ದಡದಿಂದ ಬರುವರು ಹೊಸ ಅತಿಥಿಗಳು
ಬಾ – ಅವರನ್ನು ಸ್ವಾಗತಿಸು ಕುಡಿಯಲು ಬಿಸಿಯೋ ತಣ್ಣಗೋ
ಬನ್ನಿ ಬಟ್ಟೆ ಬದಲಿಸಿ ನಮ್ಮದೂ ನಿಮ್ಮದೂ ಒಂದೇ ಬದುಕು
ಇರುವಷ್ಟು ದಿವಸ ಇದ್ದೇ ಬಿಡುವ ಬಿಡದೇ ಬಿರುಕು
ಇಲ್ಲದಿದ್ದಾಗಲೂ ಇದ್ದಿದ್ದ ಎಂದು ಎದೆ ತುಂಬಿ ಹೇಳಿದರೆ ಸಾಕು
ಅಷ್ಟೇ ಸಾಕು ; ಈ ಮಣ್ಣಿನ ಜೀವಕ್ಕೆ ಇನ್ನೇನು ಬೇಕು ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...