Home / ಬಾಲ ಚಿಲುಮೆ / ಕಥೆ / ಬಾಳೆಯೂ ಸುಗಂಧರಾಜನೂ

ಬಾಳೆಯೂ ಸುಗಂಧರಾಜನೂ

ಮುತ್ತುಗದ ಮರವು ಮರಗಳಿಗೆಲ್ಲಾ ಗುರುವಂತೆ. ಮರಗಳೆಲ್ಲಾ ಅದರ ಬಳಿಗೆ ಓದು ಕಲಿಯಲು ಹೋಗುತ್ತಿದ್ದವಂತೆ. ಅದು ಹಣ್ಣಿನ ಗಿಡಗಳಿಗೇ ಒಂದು ತರಗತಿ, ಹೂವಿನ ಗಿಡಗಳಿಗೇ ಒಂದು ತರಗತಿ ಎಂದು ಬೇರೆ ಬೇರೆ ಮಾಡಿದ್ದಿತಂತೆ. ಅಂತೂ ಪಾಠಗಳೇನೋ ಕ್ರಮವಾಗಿ ನಡೆಯುತ್ತಿದ್ದವು. ಹುಡುಗರು ಗುರುಗಳು ಹೇಳಿದಂತೆ ಕೇಳಿಕೊಂಡು ವಿದ್ಯೆ ಕಲಿಯುತ್ತಿದ್ದರು.

ಹಣ್ಣಿನ ಗಿಡಗಳಲ್ಲಿ ಬಾಳೆಯೂ, ಹೂವಿನ ಗಿಡಗಳಲ್ಲಿ ಸುಗಂಧರಾಜನೂ ಇಬ್ಬರೂ ಗೆಳೆಯರಾದವು. ಅವರಿಬ್ಬರಿಗೂ ಕೊಂಚ ಜಂಭ. “ಮುತ್ತುಗದ ಎಲೆಗಿಂತ ನನ್ನ ಎಲೆ ದೊಡ್ಡದು; ಅಲ್ಲದೆ ಜನರು ಮುತ್ತುಗದ ಎಲೆಗಿಂತ ನನ್ನ ಎಲೆಗೆ ಬೆಲೆಯನ್ನು ಕೊಡುವರು” ಎಂದು ಬಾಳೆಗೆ ಜಂಭ. “ಮುತ್ತುಗದ ಹೂ ಎಷ್ಟು ಅಂದವಾಗಿದ್ದರೇನು? ವಾಸನೆಯೇ ಇಲ್ಲ, ನನ್ನ ಹೂವಿನ ಮುಂದೆ ಹೂವೇ?” ಎಂದು ಸುಗಂಧರಾಜನಿಗೆ ಜಂಭ. ಈ ಜಂಭವು ಬಲಿಯಿತು. ಬಾಳೆಯೂ ಸುಗಂಧರಾಜನೂ ಬರುಬರುತ್ತ ಅವಿಧೇಯರಾದರು. ಅವು ಗುರುಗಳು ಹೇಳಿದ ಮಾತನ್ನು ಕೇಳದೆ ಹೋದವು.

ಮುತ್ತುಗವೂ ಇದನ್ನು ಕಂಡು, ಅವರಿಬ್ಬರನ್ನೂ ಕರೆದು “ನೀವು ಹೀಗೆ ಮಾಡಬಾರದು. ಹೇಳಿದ ಮಾತು ಕೇಳದಿದ್ದರೆ ನಿಮಗೇ ಕಷ್ಟ” ಎಂದು ಹೇಳಿತು. ಅವು ಕೇಳಲಿಲ್ಲ. ಆಗ ತರಗತಿಯಲ್ಲಿ “ಕವಲು ಬಿಡುವುದು” ಎಂಬ ಪಾಠವು ಆಗುತ್ತಿತ್ತು. ಅವಿಧೇಯರಾದ ಬಾಳೆ, ಸುಗಂಧರಾಜಗಳು ಪಾಠವನ್ನು ಗಮನಿಸಲಿಲ್ಲ.

ಕೆಲವು ದಿನವಾಯಿತು. ಮಲ್ಲಿಗೆ, ಜಾಜಿ, ಸಂಪಿಗೆ, ಪಾದರಿ, ಸುರಗಿ, ಪಗಡೆ, ಮೊದಲಾದ ಹೂವಿನ ಗಿಡಗಳೂ, ಮಾವು, ಬೇಲ, ಸೇಬು, ದ್ರಾಕ್ಷಿ, ಕಿತ್ತಳೆ, ಮೊದಲಾದ ಹಣ್ಣಿನ ಗಿಡಗಳೂ ಕವಲೊಡೆದವು. ಏನೇನು ಮಾಡಿದರೂ ಬಾಳೆಯೂ ಸುಗಂಧರಾಜನೂ ಕವಲು ಬಿಡಲಾಗಲಿಲ್ಲ. ಅವುಗಳಿಗೆ ಬಹಳ ದುಃಖವಾಯಿತು. “ಗುರುವು ಹೇಳಿದ ಮಾತು ಕೇಳಲಿಲ್ಲವಲ್ಲ! ಕೆಟ್ಟೆವಲ್ಲಾ!” ಎಂದು ಬಹಳ ನೊಂದುಕೊಂಡವು. ಈಗಲೂ ನೀವು ಬಾಳೆಯನ್ನೂ ಸುಗಂಧರಾಜನನ್ನೂ ನೋಡಿ. ಹಣ್ಣು ಹೂವು ಆದಮೇಲೆ ಮಿಕ್ಕ ಗಿಡಗಳು, ಕವಲೊಡೆದು ಸಂತೋಷದಿಂದ ಬೆಳೆಯುತ್ತಿದ್ದರೆ, ಅವೆರಡೂ ದುಃಖದಿಂದ ಬಾಡಿ ಬಳಲಿ ಒಣಗಿ ಹೋಗುವುವು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...