Home / ಕವನ / ಕವಿತೆ / ನವಯುಗಾರಂಭ

ನವಯುಗಾರಂಭ

(ಭಾರತ ಸ್ವಾತಂತ್ರ ದಿನದಂದಿನ ಉಲ್ಲಸಿತಭಾವನೆಯ ಉತ್ಸಾಹ ಪ್ರಗಾಥ)


ಇಂದಿನುದಯ ರವಿ ತಂದಿಹನೈ, ತ-
ನ್ನೊಂದಿಗೆ ನವಯುಗವ,
ಇಂದಿನ ಮಧುರಸಮೀರ ಹರಡುತಿಹ
ಸ್ವಾತಂತ್ರ್ಯದ ಸೊಗವ!

ಇಂದಿನ ಉಸಿರಾಟಕೆ ತಡೆಯಿಲ್ಲವು
ಕಳಚಿ ಕೊರಳ ನೊಗವ-
ಹೊಂದಿಹವೈ ಮನ-ಮನವು ರೆಕ್ಕೆಗಳ,
ಮೀರಿಸಿಹವು ಖಗವ!

ಪ್ರಳಯದಿಳೆಯ ತಮ ಮರೆಯಾಯ್ತೋ-ಕಡ-
ಲೊಳಗಿನ ನೌಕೆಯು ಕರೆಗಾಯ್ತೋ-ಮನು-
ಕುಲದ ಬಾಳ ಗೋಳದು ಹೋಯ್ತೊ….!

ಉಳಿದಿವೆ ಶಕ್ತಿಯ ಬೀಜಗಳೆಲ್ಲವು ;
ಕಂಡೆವು ನವಯುಗವ….
ಬೆಳೆಯ ಕೊಂಡು ನಾವಿನ್ನು ಬಲಿಯ ಬೇ-
ಕಾಗಿದೆ ಹೊಸಜಗವ !

ಇಂದಿನುದಯರವಿ ತಂದಿಹನೈ, ತ-
ನ್ನೊಂದಿಗೆ ನವೆಯುಗವ-
ಮಂದಿ ಕಾಣುತಿದೆ ಭಾರತಮಾತೆಯ
ಚೆಂದದ ನಗೆಮೊಗವ !


ಇಂದು ಹುಟ್ಟಿದಣುಗನಿಗೆ ಇಲ್ಲವೈ,
ಪರದಾಸ್ಯದ ಹೊಲೆಯು !
ಬೆಂದುಹೋಯ್ತು ದೆಸೆದೆಸೆಗಳಲ್ಲಿಯೂ
ಹಗೆಯು ಹೆಣೆದ ಬಲೆಯು !

ಹಿಂದೆ ತಿಂದ ಕೂಳೇನ ಕೊಟ್ಟಿ ತೋ-
ಬರಿಯೆ ಹಂದೆತನವ;
ಇಂದು ಉಂಡ ಊಟವಿದು ತುಂಬುತಿದೆ
ಮನದಿ ಮನುಜಗುಣವ.

ತುಂಡುಗೊಂಡ ಎದೆ ಬೆಸೆದಿಹುವೋ-ಜನ-
ಮಂಡಲದಸುಗಳ ಹೊಸೆದಿಹವೋ-ರಣ-
ಚಂಡಿಯ ಕಂಗಳ ಕೊಸೆದಿಹವೊ….!

ಯಾವ ಭಾವ ಕಂಡಿರುವ ಕನಸು ಮೈ-
ಗೊಳುತಲಿಂದು ಬಂತೋ…
ಯಾವ ಯೋಗ ಸಾಧನವು ನಮಗೆ ಸಂ-
ಸಿದ್ಧಿಯನ್ನು ತಂತೋ !

ಇಂದಿನುದಯರವಿ ತಂದಿಹನೈ ತ-
ನ್ನೊಂದಿಗೆ ನವಯುಗವ-
ಕುಂದದಿರುವ ಪ್ರಭೆಯಿಂದ ಬೆಳಗುವನು
ಭಾಗ್ಯೋದಯನಗವ.


ದೇವನು ಮೀನಿನ ಮಾನಕಿಳಿದು ಆ
ಪ್ರಳಯ ಕಳೆದನಂದು ;
ಮಾನವ ದೇವನ ಸ್ಥಾನಕೇರಿ ಈ
ಪ್ರಳಯವಳಿದನಿಂದು !

ದೇವನೊಬ್ಬನೇ ತಂದ ಯುಗಗಳವು
ವೈಷಮ್ಯದ ಒಡಲು,
ಮಾನವನೇ ಮೂಡಿಸಿದೀ ನವಯುಗ
ಸಮತೆಯ ಸವಿಗಡಲು !

ಭಾರತಶಕ್ತಿಯು ದುಡಿ-ದುಡಿದು,-ಕರೆ-
ತಂದಿದೆ ಕಾಲದ ಕೈಹಿಡಿದು-ಇದೆ
ಲೋಕದ ಕಂಗಳ ತೆರೆಸುವುದು….!

ದಾನವತೆಯ ಮೂಲವನೇ ಮುರಿಯುವೆ-
ನೆನ್ನುವುದೀಯುಗವು ;
ಮಾನವರೆದೆಯೊಳೆ ದೇವನಿರುವುದನು
ಕಾಂಬುದಿನ್ನು ಜಗವು !

ಇಂದಿನುದಯರವಿ ತಂದಿಹನೈ ತ-
ನ್ನೊಂದಿಗೆ ನವಯುಗವ-
ಇಂದಿನ ಗಾಳಿಯು ಗೀತಿಸುತಿರುವುದು
ಸ್ವಾತಂತ್ರ್ಯದ ಸೊಗವ !


ತಾರಾಲೋಕದ ಮೇಗಣಿಂದ ಋಷಿ-
ವೃಂದವು ಹರಸುತಿದೆ;
ಭಾರತಕುಲಪಿತೃಗಣವು ಸ್ವರ್ಗದಿಂ
ಹೂಮಳೆಯೆರಚುತಿದೆ.

ಬೆಳ್ಳಿಯ ಬೆಟ್ಟದ ಮೇಲೆ ತ್ರಿಶೂಲಿಯು
ತಾಂಡವ ತೊಡಗಿರುವ-
ಯಕ್ಷ-ರಕ್ಷ ಗಂಧರ್ವ ಕಿನ್ನರರ
ಮೇಳ ಕೂಡಿಸಿರುವ.

ಪೂರ್ವ-ಪಶ್ಚಿಮದ ಕಡಲುಗಳು-ಉ-
ಬ್ಬೇರಿ ಕುಣಿಯುತಿವೆ ಲಹರಿಗಳು-ದನಿ
ಬೀರುತಿಹವು ದಿಗ್‌ಭೇರಿಗಳು….!

ಕೃತ-ತ್ರೇತಾ-ದ್ವಾಪರದ ಯುಗಂಗಳು
ಕಾಣಿಕೆ ತಂದಿಹವೋ!
ನವಯುಗಪುರುಷನ ಭವ್ಯಭವಿಷ್ಯವ-
ನುದ್ಘೋಷಿಸುತಿಹವೋ !

ಇಂದಿನುದಯರವಿ ತಂದಿಹನೈ ತ-
ನ್ನೊಂದಿಗೆ ನವಯುಗವ-
ಇಂದಿನ ಪಾವನ ಪವನ ಹರಡುತಿಹ
ಸ್ವಾತಂತ್ರ್ಯದ ಸೊಗವ!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...