Home / ಕವನ / ಕವಿತೆ / ನವಯುಗಾರಂಭ

ನವಯುಗಾರಂಭ

(ಭಾರತ ಸ್ವಾತಂತ್ರ ದಿನದಂದಿನ ಉಲ್ಲಸಿತಭಾವನೆಯ ಉತ್ಸಾಹ ಪ್ರಗಾಥ)


ಇಂದಿನುದಯ ರವಿ ತಂದಿಹನೈ, ತ-
ನ್ನೊಂದಿಗೆ ನವಯುಗವ,
ಇಂದಿನ ಮಧುರಸಮೀರ ಹರಡುತಿಹ
ಸ್ವಾತಂತ್ರ್ಯದ ಸೊಗವ!

ಇಂದಿನ ಉಸಿರಾಟಕೆ ತಡೆಯಿಲ್ಲವು
ಕಳಚಿ ಕೊರಳ ನೊಗವ-
ಹೊಂದಿಹವೈ ಮನ-ಮನವು ರೆಕ್ಕೆಗಳ,
ಮೀರಿಸಿಹವು ಖಗವ!

ಪ್ರಳಯದಿಳೆಯ ತಮ ಮರೆಯಾಯ್ತೋ-ಕಡ-
ಲೊಳಗಿನ ನೌಕೆಯು ಕರೆಗಾಯ್ತೋ-ಮನು-
ಕುಲದ ಬಾಳ ಗೋಳದು ಹೋಯ್ತೊ….!

ಉಳಿದಿವೆ ಶಕ್ತಿಯ ಬೀಜಗಳೆಲ್ಲವು ;
ಕಂಡೆವು ನವಯುಗವ….
ಬೆಳೆಯ ಕೊಂಡು ನಾವಿನ್ನು ಬಲಿಯ ಬೇ-
ಕಾಗಿದೆ ಹೊಸಜಗವ !

ಇಂದಿನುದಯರವಿ ತಂದಿಹನೈ, ತ-
ನ್ನೊಂದಿಗೆ ನವೆಯುಗವ-
ಮಂದಿ ಕಾಣುತಿದೆ ಭಾರತಮಾತೆಯ
ಚೆಂದದ ನಗೆಮೊಗವ !


ಇಂದು ಹುಟ್ಟಿದಣುಗನಿಗೆ ಇಲ್ಲವೈ,
ಪರದಾಸ್ಯದ ಹೊಲೆಯು !
ಬೆಂದುಹೋಯ್ತು ದೆಸೆದೆಸೆಗಳಲ್ಲಿಯೂ
ಹಗೆಯು ಹೆಣೆದ ಬಲೆಯು !

ಹಿಂದೆ ತಿಂದ ಕೂಳೇನ ಕೊಟ್ಟಿ ತೋ-
ಬರಿಯೆ ಹಂದೆತನವ;
ಇಂದು ಉಂಡ ಊಟವಿದು ತುಂಬುತಿದೆ
ಮನದಿ ಮನುಜಗುಣವ.

ತುಂಡುಗೊಂಡ ಎದೆ ಬೆಸೆದಿಹುವೋ-ಜನ-
ಮಂಡಲದಸುಗಳ ಹೊಸೆದಿಹವೋ-ರಣ-
ಚಂಡಿಯ ಕಂಗಳ ಕೊಸೆದಿಹವೊ….!

ಯಾವ ಭಾವ ಕಂಡಿರುವ ಕನಸು ಮೈ-
ಗೊಳುತಲಿಂದು ಬಂತೋ…
ಯಾವ ಯೋಗ ಸಾಧನವು ನಮಗೆ ಸಂ-
ಸಿದ್ಧಿಯನ್ನು ತಂತೋ !

ಇಂದಿನುದಯರವಿ ತಂದಿಹನೈ ತ-
ನ್ನೊಂದಿಗೆ ನವಯುಗವ-
ಕುಂದದಿರುವ ಪ್ರಭೆಯಿಂದ ಬೆಳಗುವನು
ಭಾಗ್ಯೋದಯನಗವ.


ದೇವನು ಮೀನಿನ ಮಾನಕಿಳಿದು ಆ
ಪ್ರಳಯ ಕಳೆದನಂದು ;
ಮಾನವ ದೇವನ ಸ್ಥಾನಕೇರಿ ಈ
ಪ್ರಳಯವಳಿದನಿಂದು !

ದೇವನೊಬ್ಬನೇ ತಂದ ಯುಗಗಳವು
ವೈಷಮ್ಯದ ಒಡಲು,
ಮಾನವನೇ ಮೂಡಿಸಿದೀ ನವಯುಗ
ಸಮತೆಯ ಸವಿಗಡಲು !

ಭಾರತಶಕ್ತಿಯು ದುಡಿ-ದುಡಿದು,-ಕರೆ-
ತಂದಿದೆ ಕಾಲದ ಕೈಹಿಡಿದು-ಇದೆ
ಲೋಕದ ಕಂಗಳ ತೆರೆಸುವುದು….!

ದಾನವತೆಯ ಮೂಲವನೇ ಮುರಿಯುವೆ-
ನೆನ್ನುವುದೀಯುಗವು ;
ಮಾನವರೆದೆಯೊಳೆ ದೇವನಿರುವುದನು
ಕಾಂಬುದಿನ್ನು ಜಗವು !

ಇಂದಿನುದಯರವಿ ತಂದಿಹನೈ ತ-
ನ್ನೊಂದಿಗೆ ನವಯುಗವ-
ಇಂದಿನ ಗಾಳಿಯು ಗೀತಿಸುತಿರುವುದು
ಸ್ವಾತಂತ್ರ್ಯದ ಸೊಗವ !


ತಾರಾಲೋಕದ ಮೇಗಣಿಂದ ಋಷಿ-
ವೃಂದವು ಹರಸುತಿದೆ;
ಭಾರತಕುಲಪಿತೃಗಣವು ಸ್ವರ್ಗದಿಂ
ಹೂಮಳೆಯೆರಚುತಿದೆ.

ಬೆಳ್ಳಿಯ ಬೆಟ್ಟದ ಮೇಲೆ ತ್ರಿಶೂಲಿಯು
ತಾಂಡವ ತೊಡಗಿರುವ-
ಯಕ್ಷ-ರಕ್ಷ ಗಂಧರ್ವ ಕಿನ್ನರರ
ಮೇಳ ಕೂಡಿಸಿರುವ.

ಪೂರ್ವ-ಪಶ್ಚಿಮದ ಕಡಲುಗಳು-ಉ-
ಬ್ಬೇರಿ ಕುಣಿಯುತಿವೆ ಲಹರಿಗಳು-ದನಿ
ಬೀರುತಿಹವು ದಿಗ್‌ಭೇರಿಗಳು….!

ಕೃತ-ತ್ರೇತಾ-ದ್ವಾಪರದ ಯುಗಂಗಳು
ಕಾಣಿಕೆ ತಂದಿಹವೋ!
ನವಯುಗಪುರುಷನ ಭವ್ಯಭವಿಷ್ಯವ-
ನುದ್ಘೋಷಿಸುತಿಹವೋ !

ಇಂದಿನುದಯರವಿ ತಂದಿಹನೈ ತ-
ನ್ನೊಂದಿಗೆ ನವಯುಗವ-
ಇಂದಿನ ಪಾವನ ಪವನ ಹರಡುತಿಹ
ಸ್ವಾತಂತ್ರ್ಯದ ಸೊಗವ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...