Home / ಕವನ / ಕವಿತೆ / ಸಾವಲ್ಲದ ಸಾವು!

ಸಾವಲ್ಲದ ಸಾವು!


ಇದ್ದರೂ ಸತ್ತಂತ ಇರುವವರೆ ಬಹುಜನರು,
ಇದ್ದವರಿಗೆಲ್ಲ ಸಾವಾಗಿ ಇರುವರು ಕೆಲರು,
ಮೊದ್ದುತನದಲಿ ಸಾವಿಗಂಜಿ, ಬದುಕನೆ ಸಾವು-
ಮಾಡಿಕೊಂಡವರು ಹಲರು!

ಇದ್ದಾಗ ನಿನ್ನಂತೆ ಇದ್ದವರು ಯಾರಿಹರು?
ಬಿದ್ದವರ ಬಾಳಲ್ಲಿ ಜೀವಕಳೆಯನ್ನೂದಿ
ಸಿದ್ದಿ ತುಂಬಿದರಾರು, ನಿನ್ನವೊಲು ಗಾಂಧೀಜಿ
ಸಾವಿರದ ಶೂರರಾರು?


ನೀನು ಮಾನವನೇನು? ಮರುಳಿದು
ಮಾನವನು ನೀನೆಂಬುದು ;
ಮಾನವತಯಾದರ್ಶವೇ ಮೈ-
ಗೊಳುತ ಬಂದಿಲ್ಲಿರ್ದ್ದುದು

ಕುದಿವ ಮಾನವಲೋಕವನು ಕಂ-
ಡದನು ತಣಿಸಲು ಪ್ರಕೃತಿಯು,
ಹದದಿ ನಿನ್ನನು ರೂಪಿಸುತ ಕಳು-
ಹಿದುದು ನಮ್ಮಯ ಸುಕೃತಿಯು!

ಪಂಚಭೂತಶರೀರಿಯೇ ನೀ
ಪಂಚಭಾವಶರೀರ!
ಕರುಣೆ ಮೈತ್ರಿಯು ಹರುಷ ನಿರ್ಭಯ
ಶಾಂತಿಗಳ ಸಾಕಾರ!


ಹೂವಿನರಳುವ ಗುಣವೆ ನಿನ್ನ ನಗೆಯಾಯ್ತೊ,
ಜೇನ ಸವಿ ನಿನಗೆ ಮೆಲುಮಾತನೊದವಿಸಿತೊ!
ಆಗಸದ ಕೇಂದ್ರವೇ ಎದೆಯು ನಿನಗಾಯ್ತೊ,
ಸಾಗರದ ಆಳ ಗಾಂಭೀರ್ಯ ಹವಣಿಸಿತೋ!


ನಿನ್ನ ಕಣ್ಗೆ ರವಿಯ ಪ್ರಭೆಯು ಹಿಂಗದ ಬೆಳಕೂಡಿತೊ!
ನಿನ್ನ ಭಾವಗಳಲಿ ಅಮರಗಣವು ಅಮೃತ ನೀಡಿತೊ!
ನೀನು ನುಡಿದುದೆಲ್ಲ ಋಷಿಯ ದಿವ್ಯಕಾವ್ಯವಾಯಿತೊ,
ನೀನು ನಡೆದುದೆಲ್ಲ ಜನಕೆ ಬಾಳ ತಿರುಳ ತಿಳುಹಿತೊ!


ನೂರಾರು ವರ್ಷಗಳ ಪಾರತಂತ್ರದಿ ಸಿಲುಕಿ-
ಭಾರತೀಯರು ಬಾಯಿ ಬಾಯಿ ಬಿಡುತಿರುವಾಗ
ಪಾರುಗಾಣಿಸಲೆಂದು ಹೋರಾಡಿದರು ಹಲರು !
ದೊರೆಯಲಿಲ್ಲಾರಿಗಾ ಕೀರ್ತಿ;

ನಿಜವು ನೀ ನಿಜ ಯಶೋಮೂರ್ತಿ !
ದಾರಿಯರಿತವ ನೀನು ತೋರಿ ಅವರಿಗೆ ಯುಕ್ತಿ
ಹೂಡಿದೆಯೊ ಗೆಲುವ ಶಕ್ತಿ…
ಮಾಡಿದೆಯೊ ಬಂಧಮುಕ್ತಿ!


ನಿನ್ನ ಮಾತೇ ಮಾತು ತುಂಬಿದೆ
ದಿಕ್ಕು-ದಿಕ್ಕುಗಳಲ್ಲಿ….
ನಿನ್ನ ರೂಪವೆ ನೆಲಸಿ ನಿಂತಿದೆ
ಜಗದ ಜನಮನದಲ್ಲಿ !

ನಿನ್ನ ಉನ್ನತ ಭಾವ ಹರಡಿದೆ
ಗಾಳಿಯಲೆಯಲೆಯಲ್ಲಿ….
ನಿನ್ನ ಕೀರ್ತಿಯ ಕಳಸ ಸಾರಿದೆ
ಬಾನತುತ್ತುದಿಯಲ್ಲಿ !

ಎಲ್ಲೆಡೆಯು ಗಾಂಧೀಜಿಯಾಗಿರೆ
ನಿನಗೆ ಕೊನೆಯಿನ್ನೆಲ್ಲಿ ?
ನಿನ್ನ ನೊಯ್ಯುವ ಬಲವು ಎಲ್ಲಿದೆ
ಮೃತ್ಯುವಿನ ಮೈಯಲ್ಲಿ ?


ಶಕ್ತಿಯಿಲ್ಲದ ಮೃತ್ಯು ಯುಕ್ತಿಯೇನನೊ ಹೂಡಿ,
ತನ್ನ ಬಲೆಯೊಳು ಬಿಗಿದು ನಿನ್ನ ಕಟ್ಟಿಹೆನೆಂದು
ಹುಸಿಬಿಂಕದಲ್ಲಿಹುದು,
ಹುರುಪಿನಲ್ಲಿಹುದು….
ಹುಸಿಬಿಂಕದಲ್ಲಿಹುದು, ಹುರುಪಿನಲ್ಲಿಹುದು-
ವ್ಯಕ್ತಿಗಿರುವುದು ಸಾವು, ಶಕ್ತಿಗೆಲ್ಲಿಹುದು ?
ಗಾಂಧೀಜಿಯನು ಕೊಂದೆನೆಂದು ಸಾರುವ ಸಾವು,
ಲೌಕಿಕರ ಹೃದಯದಲಿ ಕೆರಳಿಸಿದ ನೋವು!


ವ್ಯಕ್ತಿಯೇನೊ ಸಾಯಬಹುದು
ಶಕ್ತಿಗೆಲ್ಲಿ ಸಾವು ?
ಗರುಡನನ್ನು ಕೆಣಕಿ ಮಾಡ-
ಬಲ್ಲದೇನು ಹಾವು ?

ಗಾಂಧಿಯವರ ಮರೆಮಾಡಿದ
ಸಾವಲ್ಲದ ಸಾವು….
ಮೃತ್ಯುವಿಗಿತ್ತಿಹುದು ಟೊಳ್ಳು
ಅಮರತ್ವದ ಠಾವು!


ಇದ್ದರೂ ಸತ್ತಂತೆ ಇರುವವರೆ ಬಹುಜನರು,
ಇದ್ದವರಿಗೆಲ್ಲ ಸಾವಾಗಿ ಇರುವರು ಕೆಲರು,
ಮೊದ್ದುತನದಲಿ ಸಾವಿಗಂಜಿ, ಬದುಕನೆ ಸಾವ
ಮಾಡಿಕೊಂಡವರು ಹಲರು.

ಇದ್ದಾಗ ನಿನ್ನಂತೆ ಇದ್ದವರು ಯಾರಿಹರು?
ಬಿದ್ದವರ ಬಾಳಲ್ಲಿ ಜೀವಕಳೆಯನ್ನೂದಿ
ತಿದ್ದಿ ನಡೆಸಿದರಾರು ನಿನ್ನವೊಲು ಬಾಪೂಜಿ,
ಸಾವಿರದ ಶೂರರಾರು?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...