Home / ಕವನ / ಕವಿತೆ / ಸಾವಲ್ಲದ ಸಾವು!

ಸಾವಲ್ಲದ ಸಾವು!


ಇದ್ದರೂ ಸತ್ತಂತ ಇರುವವರೆ ಬಹುಜನರು,
ಇದ್ದವರಿಗೆಲ್ಲ ಸಾವಾಗಿ ಇರುವರು ಕೆಲರು,
ಮೊದ್ದುತನದಲಿ ಸಾವಿಗಂಜಿ, ಬದುಕನೆ ಸಾವು-
ಮಾಡಿಕೊಂಡವರು ಹಲರು!

ಇದ್ದಾಗ ನಿನ್ನಂತೆ ಇದ್ದವರು ಯಾರಿಹರು?
ಬಿದ್ದವರ ಬಾಳಲ್ಲಿ ಜೀವಕಳೆಯನ್ನೂದಿ
ಸಿದ್ದಿ ತುಂಬಿದರಾರು, ನಿನ್ನವೊಲು ಗಾಂಧೀಜಿ
ಸಾವಿರದ ಶೂರರಾರು?


ನೀನು ಮಾನವನೇನು? ಮರುಳಿದು
ಮಾನವನು ನೀನೆಂಬುದು ;
ಮಾನವತಯಾದರ್ಶವೇ ಮೈ-
ಗೊಳುತ ಬಂದಿಲ್ಲಿರ್ದ್ದುದು

ಕುದಿವ ಮಾನವಲೋಕವನು ಕಂ-
ಡದನು ತಣಿಸಲು ಪ್ರಕೃತಿಯು,
ಹದದಿ ನಿನ್ನನು ರೂಪಿಸುತ ಕಳು-
ಹಿದುದು ನಮ್ಮಯ ಸುಕೃತಿಯು!

ಪಂಚಭೂತಶರೀರಿಯೇ ನೀ
ಪಂಚಭಾವಶರೀರ!
ಕರುಣೆ ಮೈತ್ರಿಯು ಹರುಷ ನಿರ್ಭಯ
ಶಾಂತಿಗಳ ಸಾಕಾರ!


ಹೂವಿನರಳುವ ಗುಣವೆ ನಿನ್ನ ನಗೆಯಾಯ್ತೊ,
ಜೇನ ಸವಿ ನಿನಗೆ ಮೆಲುಮಾತನೊದವಿಸಿತೊ!
ಆಗಸದ ಕೇಂದ್ರವೇ ಎದೆಯು ನಿನಗಾಯ್ತೊ,
ಸಾಗರದ ಆಳ ಗಾಂಭೀರ್ಯ ಹವಣಿಸಿತೋ!


ನಿನ್ನ ಕಣ್ಗೆ ರವಿಯ ಪ್ರಭೆಯು ಹಿಂಗದ ಬೆಳಕೂಡಿತೊ!
ನಿನ್ನ ಭಾವಗಳಲಿ ಅಮರಗಣವು ಅಮೃತ ನೀಡಿತೊ!
ನೀನು ನುಡಿದುದೆಲ್ಲ ಋಷಿಯ ದಿವ್ಯಕಾವ್ಯವಾಯಿತೊ,
ನೀನು ನಡೆದುದೆಲ್ಲ ಜನಕೆ ಬಾಳ ತಿರುಳ ತಿಳುಹಿತೊ!


ನೂರಾರು ವರ್ಷಗಳ ಪಾರತಂತ್ರದಿ ಸಿಲುಕಿ-
ಭಾರತೀಯರು ಬಾಯಿ ಬಾಯಿ ಬಿಡುತಿರುವಾಗ
ಪಾರುಗಾಣಿಸಲೆಂದು ಹೋರಾಡಿದರು ಹಲರು !
ದೊರೆಯಲಿಲ್ಲಾರಿಗಾ ಕೀರ್ತಿ;

ನಿಜವು ನೀ ನಿಜ ಯಶೋಮೂರ್ತಿ !
ದಾರಿಯರಿತವ ನೀನು ತೋರಿ ಅವರಿಗೆ ಯುಕ್ತಿ
ಹೂಡಿದೆಯೊ ಗೆಲುವ ಶಕ್ತಿ…
ಮಾಡಿದೆಯೊ ಬಂಧಮುಕ್ತಿ!


ನಿನ್ನ ಮಾತೇ ಮಾತು ತುಂಬಿದೆ
ದಿಕ್ಕು-ದಿಕ್ಕುಗಳಲ್ಲಿ….
ನಿನ್ನ ರೂಪವೆ ನೆಲಸಿ ನಿಂತಿದೆ
ಜಗದ ಜನಮನದಲ್ಲಿ !

ನಿನ್ನ ಉನ್ನತ ಭಾವ ಹರಡಿದೆ
ಗಾಳಿಯಲೆಯಲೆಯಲ್ಲಿ….
ನಿನ್ನ ಕೀರ್ತಿಯ ಕಳಸ ಸಾರಿದೆ
ಬಾನತುತ್ತುದಿಯಲ್ಲಿ !

ಎಲ್ಲೆಡೆಯು ಗಾಂಧೀಜಿಯಾಗಿರೆ
ನಿನಗೆ ಕೊನೆಯಿನ್ನೆಲ್ಲಿ ?
ನಿನ್ನ ನೊಯ್ಯುವ ಬಲವು ಎಲ್ಲಿದೆ
ಮೃತ್ಯುವಿನ ಮೈಯಲ್ಲಿ ?


ಶಕ್ತಿಯಿಲ್ಲದ ಮೃತ್ಯು ಯುಕ್ತಿಯೇನನೊ ಹೂಡಿ,
ತನ್ನ ಬಲೆಯೊಳು ಬಿಗಿದು ನಿನ್ನ ಕಟ್ಟಿಹೆನೆಂದು
ಹುಸಿಬಿಂಕದಲ್ಲಿಹುದು,
ಹುರುಪಿನಲ್ಲಿಹುದು….
ಹುಸಿಬಿಂಕದಲ್ಲಿಹುದು, ಹುರುಪಿನಲ್ಲಿಹುದು-
ವ್ಯಕ್ತಿಗಿರುವುದು ಸಾವು, ಶಕ್ತಿಗೆಲ್ಲಿಹುದು ?
ಗಾಂಧೀಜಿಯನು ಕೊಂದೆನೆಂದು ಸಾರುವ ಸಾವು,
ಲೌಕಿಕರ ಹೃದಯದಲಿ ಕೆರಳಿಸಿದ ನೋವು!


ವ್ಯಕ್ತಿಯೇನೊ ಸಾಯಬಹುದು
ಶಕ್ತಿಗೆಲ್ಲಿ ಸಾವು ?
ಗರುಡನನ್ನು ಕೆಣಕಿ ಮಾಡ-
ಬಲ್ಲದೇನು ಹಾವು ?

ಗಾಂಧಿಯವರ ಮರೆಮಾಡಿದ
ಸಾವಲ್ಲದ ಸಾವು….
ಮೃತ್ಯುವಿಗಿತ್ತಿಹುದು ಟೊಳ್ಳು
ಅಮರತ್ವದ ಠಾವು!


ಇದ್ದರೂ ಸತ್ತಂತೆ ಇರುವವರೆ ಬಹುಜನರು,
ಇದ್ದವರಿಗೆಲ್ಲ ಸಾವಾಗಿ ಇರುವರು ಕೆಲರು,
ಮೊದ್ದುತನದಲಿ ಸಾವಿಗಂಜಿ, ಬದುಕನೆ ಸಾವ
ಮಾಡಿಕೊಂಡವರು ಹಲರು.

ಇದ್ದಾಗ ನಿನ್ನಂತೆ ಇದ್ದವರು ಯಾರಿಹರು?
ಬಿದ್ದವರ ಬಾಳಲ್ಲಿ ಜೀವಕಳೆಯನ್ನೂದಿ
ತಿದ್ದಿ ನಡೆಸಿದರಾರು ನಿನ್ನವೊಲು ಬಾಪೂಜಿ,
ಸಾವಿರದ ಶೂರರಾರು?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...