Home / ಕವನ / ಕವಿತೆ / ಮಾಯದ ನೋವು

ಮಾಯದ ನೋವು

(ಶೋಕಗೀತ)


ಶಕ್ತಿದೈವತದ ಬಲಗೈಯ ಕರವಾಲವೇ,
ಯುಕ್ತಿಯಲಿ ಹಗೆಯ ಬಂಧಿಸುವಿಂದ್ರಜಾಲವೇ,
ದಿಕ್ಕು-ದಿಕ್ಕುಗಳ ರಕ್ಷಿಸಿದೇಕ ದಿಗ್ಗಜವೆ,
ಭರತರಾಷ್ಟ್ರದ ಧೈರ್ಯಪುರುಷ ಕೀರ್ತಿಧ್ವಜವೆ!
ಭಾಯಿ, ವಲ್ಲಭಭಾಯಿ ಭಾರತಿಯ ಕಣ್ಮಣಿ-
ನಿನ್ನನೂ ಕಬಳಿಸಿದಳೇ ಮೃತ್ಯುರಾಣಿ ?


ಓ, ಮೃತ್ಯು ದೇವತೆಯೆ ನಿರ್ದಯೇ, ನಿನ್ನನೂ
ದೇವಿಯರ ಶ್ರೇಣಿಯಲ್ಲಿ ಸೇರಿಸಿದನಾವನು ?
ನಿನಗೆ ಕಣ್ಣಿವೆಯೇನು ? ನಿನಗೆ ಕರುಳಿದೆಯೇನು ?
ಕನಸೊಳಾದರು ಲೋಕಹಿತವ ಬಗೆದಿಹೆಯೇನು ?
ಲೋಕಹಿತಕಿರದವಳು ನೀನೆಂತು ದೇವತೆಯು ?
ಲೌಕಿಕರ ದುಃಖದಲಿ ನೂಕುವುದೆ ಸತ್ಕೃತಿಯು ?


ಓ! ಮೃತ್ಯುರಾಣೇಽಽ! ಬಾ, ನೋಡು ಬಾರಿಲ್ಲಿ,
ನೀನಿಂದು ಗೆಯ್ದ ತಾಂಡವದ ಪರಿಣಾಮವನು !
ಎಂಥ ಜೀವದ ಹೂವ ತುಳಿ-ತುಳಿದು ಬಳಲಿಸಿದೆ?
ಆ ಹೂವ ಬಯಸುವರ ಎದೆಯೆದೆಯನಳಲಿಸಿದೆ!
ನಾಡಿನಲಿ ಹರಿಯುತಿದೆ ಕಂಬನಿಯ ಹೊನಲು
ಚಳಿಗಾಳಿಯೂ ಚೆಲ್ಲುತಿದೆ ಬಿಸಿಯ ಸುಯಿಲು!


ಉಕ್ಕಿನೆದೆಯವನೆಂದು ಹೆಸರಾಂತ ಧೀರಾ !
ಉಕ್ಕಿನೆದೆಯನ್ನು ಕಾಯಲಿಕೆಂದು ಮೈಯನೂ
ಉಕ್ಕಿನದೆ ಪಡೆದುಕೊಂಡಿರ್ದ್ದೆಯೆಂದಿರ್ದ್ದೆವೈ !
ನಿನ್ನ ಉಕ್ಕಿನ ಜೀವ ಭಾರತದ ರಕ್ಷಣೆಗೆ
ಬನ್ನವಿಲ್ಲದ ಕವಚವೆಂದು ಬಗೆದಿರ್ದ್ದೆವೈ !
ಬಂಧು, ವಲ್ಲಭರಾಜ, ನಿನ್ನ ಮರಣವಿದು-
ನಮ್ಮ ನಂಬುಗೆಗೆಂಥ ಹಾರೆಯಿಕ್ಕಿದುದು !


ನಿರ್ಜೀವದಲ್ಲಿ ಜೀವವನೂದಿದವ ನೀನು,
ಬೆಂಡುಗಳಲೂ ಬಲದ ಸಾರವರೆದವನು ;
ಬಯಲಲ್ಲಿ ಧೈರ್ಯಮೇರುವ ಮೆರಸಿದವ ನೀನು
ಭಯವನ್ನು ಶೌರ್ಯದಲಿ ಮಾರ್ಪಡಿಸಿದವನು!
ಓ, ಅಣ್ಣ ವಲ್ಲಭಾ, ನೀನು ಸಾಹಸಮಲ್ಲ,
ನಿನಗೆ ಸಾವೇ ? ಸುಳ್ಳು ಸುಳ್ಳು! ಹುಸಿಮಾತೆಲ್ಲ!


ಅಯ್ಯೋ, ಏನಿದು ಭ್ರಮೆಯು! ದುಃಖದುನ್ಮಾದ!
ಭಾರತದಿ ತುಂಬಿರುವ ಈ ಆರ್ತನಾದ….
ಕಿವಿಗೆ ಕೇಳುತಲಿಹುದು, ಮನಕೆ ಕಾಣುತಲಿಹುದು,
ಸುಳ್ಳು ಎಂತಾಗುವುದು ವಲ್ಲಭನ ಮರಣವದು !
ನಿಜವೆ, ಅಂತಾದೊಡಾ ಧೀರನಾ ಸಾವು ?
ಅಯ್ಯೊ, ನಾಡಿನ ಜನಕೆ ಮಾಯದಾ ನೋವು!


ಅಕ್ಕಟಾ!
ಭಾರತದ ಕಾಪಿಂಗೆ ಕೋಟೆಯಿನ್ನಾರು ?
ಹಗೆಯ ಗುಂಡಿಗೆಯೊಡೆವ ಗುಡುಗು ಇನ್ನಾರು ?
ಕಂಗೆಟ್ಟ ಜನಕುಲಕೆ ಕಣ್ಣು ಇನ್ನಾರು ?
ಸಿಡಿಲುನುಡಿಯಿಂದ ಭಯವನು ಜಡಿವರಾರು ?
ಯಾರಿಹರು ? ಯಾರಿಹರು ? ಯಾರು, ಇನ್ನಾರು ?
ಈ ಕೇಳ್ಕೆಗುತ್ತರವ ಕೊಡುವರಾರಿಹರು ?


ಶಕ್ತಿದೈವತದ ಬಲಗೈಯ ಕರವಾಲವೆ ?
ಯುಕ್ತಿಯಲಿ ಹಗೆಯ ಬಂಧಿಸುವಿಂದ್ರಜಾಲವೆ?
ದಿಕ್ಕು-ದಿಕ್ಕುಗಳ ರಕ್ಷಿಸಿದೇಕ ದಿಗ್ಗಜವೆ!
ಭರತರಾಷ್ಟ್ರದ ಧೈರ್ಯಪುರುಷ ಕೀರ್ತಿಧ್ವಜವೆ?
ಭಾಯಿ, ವಲ್ಲಭಭಾಯಿ, ಭಾರತದ ಕಣ್ಮಣಿ,
ನಿನ್ನನೂ ಕಬಳಿಸಿದಳೇ ಮೃತ್ಯರಾಣಿ ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...