Home / ಕವನ / ಕವಿತೆ / ತುರ್‍ಕಿಯ ಪರವಾಗಿ ದೇವರೊಡನೆ ಪ್ರಾರ್ಥನೆ

ತುರ್‍ಕಿಯ ಪರವಾಗಿ ದೇವರೊಡನೆ ಪ್ರಾರ್ಥನೆ

ಭೂಪಾಳಿ-ಝಂಪೆ

ನೋಡು ನೋಡೆಲೊ ದೇವ!
ಗತಿವಿಹೀನರ ಕಾವ,
ನೋಡು ನಿನ್ನಯ ರಾಜ್ಯದೊಳರಾಜಕತೆಯ!
ನೋಡು ಪಡುವಣ ದಿಕ್ಕ,
ನೋಡು ಇತಲಿಯ ಸೊಕ್ಕ,
ನೋಡು ದೀನ ತುರುಷ್ಕ ತ್ರಿಪಲಿಯರ ಕತೆಯ! ||೧||

ಬಡ ತ್ರಿಪಲಿಯನ್ನಿತಲಿ
ಪಿಡಿದಿರುವುದೆನ್ನುತಲಿ
ಮೊರೆಯಿಡುವ ಕ್ರಂದನಕೆ ಕಿವಿಯ ಮುಚ್ಚಿಹೆಯಾ?
ತೋಳಿನಬ್ಬರವನ್ನು
ಜಗಕೆ ತೋರುವೆನೆನ್ನು
ತಿತಲಿ ಬೊಬ್ಬಿರಿವುದನು ತಾತ ಮೆಚ್ಚುವೆಯಾ? || ೨ ||

ನೆಲವ ನುಂಗುವ ಹಸಿವೆ
ತಡೆಯದರಚುತ ಕಸಿವೆ
ನೆನುತಿತಲಿ ತುಡುಕಿಹುದು ತ್ರಿಪಲಿಯನು ದೊರೆಯೆ!
ಹೆಬ್ಬುಲಿಯ ಕಂಗೆದುರು
ಸಿಕ್ಕಿದೆಳೆವುಲ್ಲೆಗರು
ವಂದದಿಂ ತಲ್ಲಣಿಪ ತ್ರಿಪಲಿಯನು ಪೊರೆಯೈ! || ೩ ||

ಮೊನ್ನೆವರಮೀ ಇತಲಿ
ಪರವಶತೆಯಿಂದಲಿಲಿ
ಯಂತೆ ಕಂಬನಿಯಗುಳ ನೆಕ್ಕಿದುದ ಮರೆಯೆ,
ಇಂದು ಗರ್‍ಜಿಸುತಿಹುದೆ?
ಕಷ್ಟವಿನ್ನೊಂದಿಹುದೆ?
ಮಾನವರೊ? ದಾನವರೊ? ನಾನವರನರಿಯೆ! || ೪ ||

ಯಾವ ಇತಲಿಯ ವೀರ
ಮಾಝೀನಿ (Mazzini) ರಣಧೀರ
ಪರತಂತ್ರದಿಂದಲುದ್ಧರಿಸಿದನಿತಲಿಯಂ,
ಸಕಲರಿಗೆ ಸ್ವಾತಂತ್ರ್ಯ
ವೆಂದವನ ಗುರುಮಂತ್ರ
ವಿದನಿತಲಿ ಮರೆತಿಹುದೆ ಸೊಕ್ಕಡಂ ತಲೆಯಂ! || ೫ ||

ಪೂರ್‍ವದಿ ವಿಲಾಯಿತಿಯ
ಹೃದಯವಾವಳ ಗತಿಯ
ಭಾರದಿಂ ಜಗ್ಗಿದುದೊ ಆ ತುರುಕರವನೀ
ಅಬಲೆಯಾಗಿಹಳೀಗ,
ಇತಲಿಯವಳನು ಬೇಗ
ಸುಲಿಯುತಿದೆ- ಕದಕದಿಸು ತುರುಕರೆದೆ ಧಮನಿ! || ೬ ||

ಆಧುನಿಕ ರಾಜ್ಯಕಲೆ
ಯನ್ನರಿಯದವರ ಸಲೆ
ಬೆಂಬಲಿಸಿ ನೀನಿಂದು ನಡೆಸವರ ಪಡೆಯಾ!
ಅನುಕರಿಸಗತಿಕರನು,
ತೊರೆಯದಿರಪಥಿಕರನು,
ಸುಕ್ಕಿಸದಿರರ್‍ಧ ಚಂದ್ರ ಧ್ವಜವನೊಡೆಯಾ! || ೭ ||

ನವನಾಗರಿಕಳಲ್ಲ
ದೀ ತುರುಕಿಯಿರಸಲ್ಲ
ದೆಂದವಳ ರುಜೆಗೆ ನಾಗರವಿಷಮನೀಯೆ,
ಯಮವೈದ್ಯ ರೂಪಿಂದ
ನಟಸುವಿತಲಿಯ ಚಂದ-
ತ್ರಿಪಲಿಯನ್ನಪಹರಿಸಲಿದುವಲ್ತೆ ಮಾಯೆ? || ೮ ||

ಮುಸಲಮಾನರ ಧರ್‍ಮ
ಪಾಳೆಸಗುವೊಳ ಮರ್‍ಮ
ದಿಂದಿತಲಿ ಬಂದಿಹುದೆ ಕೊಳುಗುಳಕೆ ಮುಂದು?
ಪೈಗಂಬರನು (ಮಹಮ್ಮದ್) ನೀನೆ,
ಮರಿಯಾತ್ಮಜನು (ಯೇಸು) ನೀನೆ
ಎಂಬ ಸತ್ಯವನೀ ಜಗತ್ತರಿವುದೆಂದು? || ೯ ||

ಶತ್ರುವನು ಕೂರೆಂದು
ಯೇಸು ರೂಪದೊಳಂದು
ನೀನೊರೆದುದಕನರ್‍ಥವಾದಪುದೆ ಇಂದು?
ಅನಘರನು ಕಡಿಯೆಂದು,
ಗೆಳೆಯರನು ಬಡಿಯೆಂದು
ನಿನ್ನ ವಾಕ್ಯಕೆ, ಹರಿಯೆ, ತಟ್ಟುವುದೆ ಕುಂದು? || ೧೦ ||

ಧರ್‍ಮಕೆಡೆ ಬರಿದಾಯ್ತೆ?
ನೀತಿ ತೇಲುವುದಾಯ್ತೆ?
ನಿನ್ನ ತಿರೆಯೊಳಧರ್‍ಮಕಾದಪುದೆ ಗೆಲುಹು?
ಧರ್‍ಮವುಳ್ಳೆಡೆ ನೀನು
ಎಂಬರದು ಸಟೆಯೇನು?
ಧರ್‍ಮವನು ಕಾದು ಬಲಹೀನರನು ಸಲಹು! || ೧೧ ||

ಈ ಸಮರವನು ಮುಗಿಸು,
ಸೊಕ್ಕಿದವರನು ತಗಿಸು,
ಸ್ನೇಹಮಳೆಗರೆದು ಶಾಂತಿಯ ಬೆಳೆಯಿಸಿನಿಯಾ!
ನಿರಪರಾಧಿಯ ರಕ್ತ
ದಿಂದ ನೆಲ ಜಲ ಸಿಕ್ತ
ವಾಗದೊಲು ಕಾಪಾಡು ದೇವಕೀತನಯಾ! || ೧೨ ||
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...