Home / ಕವನ / ಕವಿತೆ / ಕವಿತೆ

ಕವಿತೆ

ಕವಿತೆ ಮತಿಜಲ ನಲಿನ,
ವ್ಯಸನ ವನಧಿಯ ಪುಲಿನ,
ಕವಿತೆ ಗಾನದ ಸುಗ್ಗಿ, ಸೊಬಗ ತೆನೆಸೂಡಿ,
ಕವಿತೆ ನವರಸ ರಂಗ
ವದು ತ್ರಿವೇಣಿಯ ಸಂಗ
ಮಿದೊ ನೆನಸು ಕನಸು ಮನಸಿನ ತ್ರಿತಯಮೊಡಗೂಡಿ ೬

ಧ್ಯಾನ ಗನಿಗಳ ರನ್ನ,
ಪ್ರಣಯ ಭಿಕ್ಷುವಿನನ್ನ,
ಕವಿತೆ ಜೀವನಸಮರ ಯೋಧರ ತುತೂರಿ,
ಕರುಣೆಯ ನಯನ ಬಿಂದು
ವೇಕಾಂತತೆಯ ಬಂಧು-
ಬಹುರೂಪದಿಂ ಸುಖಿಸುವುದು ಮನಮನವ ಸೇರಿ. ೧೨

ಇಂದುವುರುಗುವುದೇಕೆ?
ತಾರೆ ಮಿರುಗುವುದೇಕೆ?
ಕುಕಿಲು ಕರಗುವುದೇಕೆ ವಿರಹ ವಿಸ್ಮೃತಿಗೆ ?
ಅವರವರಿಗದೆ ಧರ್‍ಮ
ವಿದು ವಿಧಾತನ ಮರ್‍ಮ –
ಕವಿಯ ಹೃದಯವೆ ನರ್‍ಮಕುಂಜ ಕವಿತಾಸತಿಗೆ. ೧೮

ಪ್ರಾಸದಕ್ಷರ ಕೆಲವು
ತೊಡವುಗಳ ಕಿಲಕಿಲವು,
ಶೈಲಿಯಂಗದ ಚೆಲುವು, ಛಂದಸಂಚಲವು
ಅರ್‍ಥಲಾಲಿತ್ಯವೆನು
ವ ಸತೀತ್ವವಿರದೊಡನು
ಗೊಳಿಸುವಳೆ ಕವಿತಾರಮಣಿ ರಸಿಕನಿಗೆ ನಲವು? ೨೪

ವಿಪುಲ ಮಾನುಷ ಜೀವ
ನದ ಯಥಾರ್‍ಥ ಸಮಾವ
ಲೋಕನಂ ಕವಿತೆ ಎನೆ ಪಡುದೀವಿಯವರು,೧
ಕವಿತೆ ಬಡಗಣ ತಾರೆ
ಯಂತೆ ದಾರಿಯ ತೋರೆ,
ಎನಿತು ಧನ್ಯರೊ ಸಂಸ್ಕೃತಿಯ ನಾವನೇರ್‍ದವರು! ೩೦

ಸಂಪಗೆಗೆ ಕಂಪಿಹುದೆ?
ಇಂಗೋಲಿಗಿಂಪುಹುದೆ?
ಮಳೆವಿಲ್ಗೆ ಸೊಂಪಿಹುದೆ? ಕದಿರಿಹುದೆ ರವಿಗೆ?
ತಿಂಗಳಿಗೆ ತಂಪಿಹುದೆ?
ಸಾಗರಕ ಪೆಂಪಿಹುದೆ?
ಇಲ್ಲದಡೆ ಪೇಳು ಪೊಸ ಸೃಷ್ಟಿರಚಿಸುವ ಕವಿಗೆ ೩೬

ಕಂಬದಿಂ ಕವಿವಂದು,
ದಶತಿರನ ತಿವಿವಂದು,
ಫಲುಗುಣಗೆ ಕೊಳುಗುಳದಿ ಗೀತೆಯೊರೆವಂದು,
ಅರಳಿಯಡಿ ತಪಿಪಂದು,
ಸಿಲುಬೆಯಿಂ ಕ್ಷಮಿಪಂದು…
ರವಿಯೊ ಮೇಣ್‌ ಕವಿಯೊ ಕಾಣಿಸುವನಂದುಮನಿಂದು? ೪೨

ಮನದನ್ನನಿನೆಯಳಿಗೆ,
ಮನದನ್ನೆ ಇನೆಯನಿಗೆ,
ತಂದೆತಾಯನಗಲ್ದವರ ತಾಯಿತಂದೆ,
ತಂಗಿಯಳಿದರ ತಂಗಿ,
ಬಂಧುಗಳನು ಮರುಂಗಿ
ಶೂನ್ಯಮಾದೆದೆಯ ಪಡಿವಾವಿ ಕವಿತೆಯದೊಂದೆ! ೪೮

ಜಗದುದಯ ನಡುವಗಲು
ಸಂಜೆ ರಜನಿಯ ಮಿಗಿಲು
ನೆನಸು ಕನಸುಗಳನರಿಯಲು ಮನಸನೀಯೆ,
ಗುರುವಿನಾಶ್ರಮದಂತೆ
ಕವಿತೆ ವಿದ್ಯೆಯ ಸಂತೆ-
ಭುವನ ಕವಿತೆಗೆ ಕವಿಯ ಕವಿತೆಯೊಪ್ಪುವ ಛಾಯೆ. ೫೪

ಕವಿಗಿಂತ ಪಗೆಯಿಲ್ಲ
ಪರವಶತೆ ಒಗೆಗೆಲ್ಲ-
ಕವಿಯೆ ಸ್ಪಾತಂತ್ರ್ಯ ಮಧು ಕುಡಿವ ಮಧುಕರನು,
ಆದಿಕವಿ ಹರಿಯಿಂದ
ಕಲಿತು ಪರಿಪರಿಯಿಂದ
ಪರಹಿತವ ಬೆದರದೆಸಗುವನವನೆ ಕವಿವರನು ೬೦

ಅಬಲೆಯರ ತೋಳ್ಗಳನು
ಪರವಶರ ಬಾಳ್ಗಳನು
ಹುರಿದುಂಬಿಪುದು ನಾಡಿನಾಡಿಯಲಿ ಹರಿದು,
ಉದ್ಧರಿಸಿ ಪತಿತರನು,
ತಡೆದು ದುಶ್ಚಂತರನು,
ಧರ್‍ಮಪಥಕೊಯ್ಯುವುದು ಕವಿತೆಗಿದು ದಿಟ ಬಿರಿದು! ೬೬

ದಿನಭುವನನನು ಪದೆದು
ಹಾಸುಹೊಕ್ಕಂತೆ ಪದು
ಪಿಂದಲೊಂದಿಸುತೊಂದೆ ಮಗ್ಗದಲಿ ನೇತ
ಕವಿತೆ ಶಬಲಾಂಶುಕವ
ನುಡುತ ಕವಿಗತಿಸುಖವ
ನೀಡು ದೇವಕಿಕಂದ ಕವಿಚಂದ್ರ ದಿನನಾಧ! ೭೨
*****
1 Poetry is the criticism of Life’ (Matthew Arnold)

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...