Home / ಕವನ / ಕವಿತೆ / ಉಷಃಕಾಲದಲ್ಲಿ

ಉಷಃಕಾಲದಲ್ಲಿ

ಉಷೆಯ ಕಾಲ ಸೋಂಕಿನಿಂದ
ಬಾನು ತಳಿತಿದೆ;
ನಿಶೆಯ ಮಡಿಲನುಳಿದು ಜಗವು
ಜೀವಗೊಳುತಿದೆ;
ಕತ್ತಲಂಜುತೋಡುತಿಹುದು,
ಬೆಳಕು ತಿರೆಯ ತುಂಬುತಿಹುದು;
ನಾಡು ಮೇಡು ಕಾಡೊಳೆಲ್ಲು
ಸೊಗವು ಮೂಡಿ ಬರುತಿದೆ.

ತರುಗಳಿನಗೆ ಮಂಜುಹನಿಗ-
ಳರ್‍ಘ್ಯ ಹಿಡಿದಿವೆ;
ಅಲರ ಸುರಿದು ಸ್ವಾಗತವನು
ಬಾಗಿ ಬಯಸಿವೆ;
ಪಿಕದ ತೂರ್‍ಯ ಮೊಳಗುತಿಹುದು,
ಪದ್ಮಗಂಧ ಪಸರಿಸಿಹುದು,
ಖಗಗಳುಲಿವ ವಿವಿಧ ಸ್ವನದ
ಮೇಳ ತೋಪ ತುಂಬಿದೆ.

ಗರಿಯ ತಿದ್ದೆ ಬೆಡಗಿ ಶುಕಿಯು
ಕೊರಲ ಕೊಂಕಿದೆ;
ಇನಿಯಳೊಡನೆ ಪಾರಿವಾಳ
ಬೇಟ ಹೂಡಿದೆ ;
ಮೀಂಗಳೆದ್ದು ನೆಗೆಯುತಿಹುವು,
ತೆರೆಗಳೆದ್ದು ಕುಣಿಯುತಿಹುವು,
ವಿಶ್ವಶಿವದ ಪಥದೊಳಡಿಯ-
ನಿಟ್ಟು ಸೃಷ್ಟಿ ನಗುತಿದೆ.

ಮನುಜ?- ಮನುಜನೇನುಗೈವ-
ನಿಂಥ ಸಮಯದಿ?
ಜಗವು ಜೀವಗೊಳುತಲಿಂತು
ನಲಿವ ಉದಯದಿ?
ಬೆಳಕು ಬಾಳ ಬಿಚ್ಚುತಿರಲು,
ಜೀವ ಕರ್‍ಮಕೇಳುತಿರಲು,
ಆತ್ಮವಂತ, ಕರಣಪಟುವು-
ಏನ ಗೈವನುದಯದಿ?

ಹಕ್ಕಿ ಹೂಗಳಂತೆ ತಾನೂ
ಎದ್ದು ನಲಿವನೊ?
ಮಿಕ್ಕ ಸೃಷ್ಟಿಯಂತೆ ತಾನೂ
ನಲವಿಗೇಳ್ವನೊ?
ವಿಶ್ವಶಿವದ ಮರ್‍ಮವರಿತು,
ಆತ್ಮಕರ್‍ಮ ಧರ್‍ಮವರಿತು,
ಬಾಳ ಬಟ್ಟೆ ಕಂಡು, ದೃಢದಿ
ಹಾದಿ ನಡೆಯಲೇಳ್ವನೊ ?

ಇರುಳಿನತಿಗೆ ಬಳಲಿ ಬೆಳಗ
ಮಲಗಿ ಕಳೆವನೊ?
ಮಾಗದಳಲಿಗೆದ್ದು ಕಣ್ಣ-
ನೀರ ಮಿಡಿವನೊ ?
ಶಿವವ ಜರೆವ ಸ್ವಾರ್‍ಥಗಳನು
ಪಾಪಕೊಯ್ವ, ಮೋದಗಳನು
ಅರಸಿ, ಕರ್‍ಮತುಮುಲದೊಳಗೆ
ಸಿಲುಕಿ, ಅಂಜಿ, ಸುಯ್ವನೊ?

ದೀನ ಮನುಜನೇನು ಬಲ್ಲ
ಕರ್‍ಮ ಧರ್‍ಮವ?
ಕರಣದಾಳು ಬಲ್ಲನೇನು
ಶಿವದ ಮರ್‍ಮವ?
ಸೊಗದ ಹೊನ್ನಿನುದಯದಲ್ಲಿ
ಸೃಷ್ಟಿ ನಲಿವ ವೇಳೆಯಲ್ಲಿ
ಮನುಜಗೊಬ್ಬಗಲ್ತೆ ಶರಣು-
ಹೊಂದಿ ನುತಿಪ ಕಜ್ಜವು!

ವಿಶ್ವದೊಡೆಯ ದುರಿತಗಳನು
ದೂರ ಮಾಡಿಸೈ.
ಆವುದೆಮ್ಮ ಶಿವವೊ, ತಂದೆ,
ಅದನು ಕರುಣಿಸೈ.
ಜ್ಞಾನದೀಪ ಹೊತ್ತಿಸೈ,
ಬಾಳ ಬಟ್ಟೆ ಕಾಣಿಸ್ಯೆ,
ಆತ್ಮಶಿವಕೆ – ನಿನ್ನ ಇಚ್ಛೆ-
ಗೆನ್ನ ಬಾಳ ಹೊಂದಿಸೈ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...