Home / ಕವನ / ಕವಿತೆ / ಉಷಃಕಾಲದಲ್ಲಿ

ಉಷಃಕಾಲದಲ್ಲಿ

ಉಷೆಯ ಕಾಲ ಸೋಂಕಿನಿಂದ
ಬಾನು ತಳಿತಿದೆ;
ನಿಶೆಯ ಮಡಿಲನುಳಿದು ಜಗವು
ಜೀವಗೊಳುತಿದೆ;
ಕತ್ತಲಂಜುತೋಡುತಿಹುದು,
ಬೆಳಕು ತಿರೆಯ ತುಂಬುತಿಹುದು;
ನಾಡು ಮೇಡು ಕಾಡೊಳೆಲ್ಲು
ಸೊಗವು ಮೂಡಿ ಬರುತಿದೆ.

ತರುಗಳಿನಗೆ ಮಂಜುಹನಿಗ-
ಳರ್‍ಘ್ಯ ಹಿಡಿದಿವೆ;
ಅಲರ ಸುರಿದು ಸ್ವಾಗತವನು
ಬಾಗಿ ಬಯಸಿವೆ;
ಪಿಕದ ತೂರ್‍ಯ ಮೊಳಗುತಿಹುದು,
ಪದ್ಮಗಂಧ ಪಸರಿಸಿಹುದು,
ಖಗಗಳುಲಿವ ವಿವಿಧ ಸ್ವನದ
ಮೇಳ ತೋಪ ತುಂಬಿದೆ.

ಗರಿಯ ತಿದ್ದೆ ಬೆಡಗಿ ಶುಕಿಯು
ಕೊರಲ ಕೊಂಕಿದೆ;
ಇನಿಯಳೊಡನೆ ಪಾರಿವಾಳ
ಬೇಟ ಹೂಡಿದೆ ;
ಮೀಂಗಳೆದ್ದು ನೆಗೆಯುತಿಹುವು,
ತೆರೆಗಳೆದ್ದು ಕುಣಿಯುತಿಹುವು,
ವಿಶ್ವಶಿವದ ಪಥದೊಳಡಿಯ-
ನಿಟ್ಟು ಸೃಷ್ಟಿ ನಗುತಿದೆ.

ಮನುಜ?- ಮನುಜನೇನುಗೈವ-
ನಿಂಥ ಸಮಯದಿ?
ಜಗವು ಜೀವಗೊಳುತಲಿಂತು
ನಲಿವ ಉದಯದಿ?
ಬೆಳಕು ಬಾಳ ಬಿಚ್ಚುತಿರಲು,
ಜೀವ ಕರ್‍ಮಕೇಳುತಿರಲು,
ಆತ್ಮವಂತ, ಕರಣಪಟುವು-
ಏನ ಗೈವನುದಯದಿ?

ಹಕ್ಕಿ ಹೂಗಳಂತೆ ತಾನೂ
ಎದ್ದು ನಲಿವನೊ?
ಮಿಕ್ಕ ಸೃಷ್ಟಿಯಂತೆ ತಾನೂ
ನಲವಿಗೇಳ್ವನೊ?
ವಿಶ್ವಶಿವದ ಮರ್‍ಮವರಿತು,
ಆತ್ಮಕರ್‍ಮ ಧರ್‍ಮವರಿತು,
ಬಾಳ ಬಟ್ಟೆ ಕಂಡು, ದೃಢದಿ
ಹಾದಿ ನಡೆಯಲೇಳ್ವನೊ ?

ಇರುಳಿನತಿಗೆ ಬಳಲಿ ಬೆಳಗ
ಮಲಗಿ ಕಳೆವನೊ?
ಮಾಗದಳಲಿಗೆದ್ದು ಕಣ್ಣ-
ನೀರ ಮಿಡಿವನೊ ?
ಶಿವವ ಜರೆವ ಸ್ವಾರ್‍ಥಗಳನು
ಪಾಪಕೊಯ್ವ, ಮೋದಗಳನು
ಅರಸಿ, ಕರ್‍ಮತುಮುಲದೊಳಗೆ
ಸಿಲುಕಿ, ಅಂಜಿ, ಸುಯ್ವನೊ?

ದೀನ ಮನುಜನೇನು ಬಲ್ಲ
ಕರ್‍ಮ ಧರ್‍ಮವ?
ಕರಣದಾಳು ಬಲ್ಲನೇನು
ಶಿವದ ಮರ್‍ಮವ?
ಸೊಗದ ಹೊನ್ನಿನುದಯದಲ್ಲಿ
ಸೃಷ್ಟಿ ನಲಿವ ವೇಳೆಯಲ್ಲಿ
ಮನುಜಗೊಬ್ಬಗಲ್ತೆ ಶರಣು-
ಹೊಂದಿ ನುತಿಪ ಕಜ್ಜವು!

ವಿಶ್ವದೊಡೆಯ ದುರಿತಗಳನು
ದೂರ ಮಾಡಿಸೈ.
ಆವುದೆಮ್ಮ ಶಿವವೊ, ತಂದೆ,
ಅದನು ಕರುಣಿಸೈ.
ಜ್ಞಾನದೀಪ ಹೊತ್ತಿಸೈ,
ಬಾಳ ಬಟ್ಟೆ ಕಾಣಿಸ್ಯೆ,
ಆತ್ಮಶಿವಕೆ – ನಿನ್ನ ಇಚ್ಛೆ-
ಗೆನ್ನ ಬಾಳ ಹೊಂದಿಸೈ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...