Home / ಕವನ / ಕವಿತೆ / ರಾಮಿಯ ಗಂಡು

ರಾಮಿಯ ಗಂಡು

ಸರಸಿಯ ದಡದೊಳು ಹೊಂಗೆಯ ನೆಳಲೊಳು
ಗರುಕೆ ಮೆತ್ತೆಯ ಮೇಲೆ ಉರುಳಿ,
ಹರುಷದ ಮುದ್ದೆಯೆ ತಾನೆಂಬ ತೆರದೊಳ-
ಗಿರುವನು ರಾಮಿಯ ಗಂಡು.

ಹೊಲ್ಲಳು ರಾಮಿ; ಇಂದವಳಿಗೆ ಮನೆಯಿಲ್ಲ-
ಇಲ್ಲ ಬಾಂಧವ್ಯದ ಅಂಟು.
ಎಲ್ಲವು ಆ ಕಂದನೊಬ್ಬನೆ ಬಾಳಿನೊ-
ಳುಲ್ಲಸ ಹೂಡುವ ನಂಟು.

ಹಸುರೊಳಗಾಡುವ ಕಂದನ ನೋಡುತ
ಬಸಿರನ್ನು ನೆನೆವಳು ರಾಮಿ-
ಕಸಕಿಂತ ಹೀನನು ತನು ಮನ ಮಾನವ
ಕಸಿದುಕೊಂಡಾ ಹಳೆ ಕತೆಯ.

ನೋಟಕ್ಕೆ ರೂಪಿಲ್ಲ, ಕೂಟಕ್ಕೆ ಸಮನಲ್ಲ,
ಬೇಟಕ್ಕು ನಯವಿಲ್ಲ ಕನಕ.
ಮಾಟಗಾರಿಕೆಯೇನೊ? ಬಲ್ಲಳೆ? ಆವುದೊ
ಹೂಟದಿ ಗೆದ್ದನು ತನ್ನ.

“ರಾಮಿ, ನನ್ನೊಲುಮೆಯೆ, ನನ್ನೆದೆ ಹಣತೆಯೆ,
ಕಾಮಿಸಿ ಬಂದಿಹೆ ನಿನ್ನ,
ಪ್ರೇಮದ ಚಿಲುಮೆಯ ಚಿಮ್ಮಿಸುತೀ ಮರು-
ಭೂಮಿಯ ದಾಹವ ತಣಿಸು.

“ಮನೆ ಇದೆ- ಆದೊಡೆ – ದೀಪ ಹಚ್ಚುವರಿಲ್ಲ,
ದನ ಕರು ಹೊಲ ಗದ್ದೆ ವ್ಯರ್‍ಥ.
ಮನೆಸಿರಿಯಾಗು ಬಾ, ಬದುಕಿಗೆ ಬೆಳಕಾಗು,
ಮನದನ್ನೆ, ಬಾಳಿನ ಕಣ್ಣೆ.”

ಕನಕ ಸಾಮಾನ್ಯನೆ? ಒಲಿಸಲಿದೇ ಮೊದಲೆ?
ಪ್ರಣಯಿಗಳೊಳು ಕಡುಜಾಣ.
ಇನಿದಾಯ್ತು, ರಾಮಿಯ ಕಿವಿಗತವ ಹೊಯ್ದಿ.
ತನುನಯದಾ ಸವಿಸೊಲ್ಲು.

ಬಿಟ್ಟಳು ತೌರೂರ, ನೆಚ್ಚಿದ ತಂದೆಯ,
ದಿಟ್ಟ ಕನಕಣ್ಣನ ಮೆಚ್ಚಿ,
ಕಟ್ಟುಂಟೆ ಪ್ರಾಯದೊಳುಕ್ಕುವ ಮೋಹಕೆ?
ದುಷ್ಟನ ಹುಚ್ಚಿ ನೆಚ್ಚಿದಳು.

ದಿನ ದಿನ ಊರೂರನಲೆಯುತ ಕಳೆದರು.
ಕನಕನ ಮನೆಮಠವೆಲ್ಲಾ
ಕನಸಿನ ಗಂಟಾಯ್ತು, ರಾಮಿಯ ಕನಸೊಡೆ-
ದನುತಾಪದುರಿ ತಾಗಿತೆದೆಗೆ.

ಕಾಮಿ ಬಿಟ್ಟೋಡಿದನಬಲೆಯ ಸತ್ರದಿ
ಕಾಮದ ಬಿಸಿಯಾರಿಹೋಗೆ,
ಭೀಮಭವಾರ್‍ಣವದೊಳಗೀಜಲಿಬ್ಬರೆ:
ರಾಮಿ- ಮತ್ತಾಕೆಯ ಪಾಪ!

ಹತ್ತಿರ ಕರೆದಳು ಮೋಹದ ಮುದ್ದನ,
ಮುತ್ತಲು ಕಂಬನಿ ಕಣ್ಣ.
ಕತ್ತನಾಲಿಂಗಿಸಿ ಮುಡಿಯ ನೇವರಿಸುತ್ತ-
ಲೊತ್ತಿದಳಧರವ ತಲೆಗೆ.

“ಒಲುಮೆಯ ಕುರುಡಿಗೆ ಬಲಿಯಾದೆವಿಬ್ಬರು,
ಬಳುವಳಿಗೀ ಬಾಳೆ ನಿನಗೆ?
ಕುಲವಿತ್ತೆ, ರೂಪಿತ್ತೆ, ಶೀಲವೆ ಕನಕಗೆ?
ಹುಲುಮನುಜಗೆ ನಾನೆಂತೊಲಿದೆ?

“ಪ್ರಣಯ ಪ್ರಪಾತಕ್ಕೆ ಧುಮುಕೆಂದು ನಚ್ಚೊಂದು
ಕೆಣಕಿತೊ ಮನವ? ನಾನರಿಯೆ.
ಕನಕನ ನೆಮ್ಮುವ ನರಕವೆ ಬಾಗಿಲೊ,
ಗಿಣಿ, ನಿನ್ನ ನಪ್ಪುವ ದಿವಕೆ?

“ಒಲುಮೆಯ ಹುಚ್ಚೊಳು ನೀ ಬಹ ನೆಚ್ಹಿತ್ತೊ?
ಒಲಿದೆನೊ ನಿನಗಾಗಿ, ಚಿನ್ನ?”
ಬಲು ಮೋಹದಿಂದಣುಗನ ಮುತ್ತಿಟ್ಟಳು ರಾಮಿ-
ಇಳೆಯೊಳು ತನ್ನೊಂದೆ ನಚ್ಚ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...