Home / ಕವನ / ಕವಿತೆ / ರಾಮಿಯ ಗಂಡು

ರಾಮಿಯ ಗಂಡು

ಸರಸಿಯ ದಡದೊಳು ಹೊಂಗೆಯ ನೆಳಲೊಳು
ಗರುಕೆ ಮೆತ್ತೆಯ ಮೇಲೆ ಉರುಳಿ,
ಹರುಷದ ಮುದ್ದೆಯೆ ತಾನೆಂಬ ತೆರದೊಳ-
ಗಿರುವನು ರಾಮಿಯ ಗಂಡು.

ಹೊಲ್ಲಳು ರಾಮಿ; ಇಂದವಳಿಗೆ ಮನೆಯಿಲ್ಲ-
ಇಲ್ಲ ಬಾಂಧವ್ಯದ ಅಂಟು.
ಎಲ್ಲವು ಆ ಕಂದನೊಬ್ಬನೆ ಬಾಳಿನೊ-
ಳುಲ್ಲಸ ಹೂಡುವ ನಂಟು.

ಹಸುರೊಳಗಾಡುವ ಕಂದನ ನೋಡುತ
ಬಸಿರನ್ನು ನೆನೆವಳು ರಾಮಿ-
ಕಸಕಿಂತ ಹೀನನು ತನು ಮನ ಮಾನವ
ಕಸಿದುಕೊಂಡಾ ಹಳೆ ಕತೆಯ.

ನೋಟಕ್ಕೆ ರೂಪಿಲ್ಲ, ಕೂಟಕ್ಕೆ ಸಮನಲ್ಲ,
ಬೇಟಕ್ಕು ನಯವಿಲ್ಲ ಕನಕ.
ಮಾಟಗಾರಿಕೆಯೇನೊ? ಬಲ್ಲಳೆ? ಆವುದೊ
ಹೂಟದಿ ಗೆದ್ದನು ತನ್ನ.

“ರಾಮಿ, ನನ್ನೊಲುಮೆಯೆ, ನನ್ನೆದೆ ಹಣತೆಯೆ,
ಕಾಮಿಸಿ ಬಂದಿಹೆ ನಿನ್ನ,
ಪ್ರೇಮದ ಚಿಲುಮೆಯ ಚಿಮ್ಮಿಸುತೀ ಮರು-
ಭೂಮಿಯ ದಾಹವ ತಣಿಸು.

“ಮನೆ ಇದೆ- ಆದೊಡೆ – ದೀಪ ಹಚ್ಚುವರಿಲ್ಲ,
ದನ ಕರು ಹೊಲ ಗದ್ದೆ ವ್ಯರ್‍ಥ.
ಮನೆಸಿರಿಯಾಗು ಬಾ, ಬದುಕಿಗೆ ಬೆಳಕಾಗು,
ಮನದನ್ನೆ, ಬಾಳಿನ ಕಣ್ಣೆ.”

ಕನಕ ಸಾಮಾನ್ಯನೆ? ಒಲಿಸಲಿದೇ ಮೊದಲೆ?
ಪ್ರಣಯಿಗಳೊಳು ಕಡುಜಾಣ.
ಇನಿದಾಯ್ತು, ರಾಮಿಯ ಕಿವಿಗತವ ಹೊಯ್ದಿ.
ತನುನಯದಾ ಸವಿಸೊಲ್ಲು.

ಬಿಟ್ಟಳು ತೌರೂರ, ನೆಚ್ಚಿದ ತಂದೆಯ,
ದಿಟ್ಟ ಕನಕಣ್ಣನ ಮೆಚ್ಚಿ,
ಕಟ್ಟುಂಟೆ ಪ್ರಾಯದೊಳುಕ್ಕುವ ಮೋಹಕೆ?
ದುಷ್ಟನ ಹುಚ್ಚಿ ನೆಚ್ಚಿದಳು.

ದಿನ ದಿನ ಊರೂರನಲೆಯುತ ಕಳೆದರು.
ಕನಕನ ಮನೆಮಠವೆಲ್ಲಾ
ಕನಸಿನ ಗಂಟಾಯ್ತು, ರಾಮಿಯ ಕನಸೊಡೆ-
ದನುತಾಪದುರಿ ತಾಗಿತೆದೆಗೆ.

ಕಾಮಿ ಬಿಟ್ಟೋಡಿದನಬಲೆಯ ಸತ್ರದಿ
ಕಾಮದ ಬಿಸಿಯಾರಿಹೋಗೆ,
ಭೀಮಭವಾರ್‍ಣವದೊಳಗೀಜಲಿಬ್ಬರೆ:
ರಾಮಿ- ಮತ್ತಾಕೆಯ ಪಾಪ!

ಹತ್ತಿರ ಕರೆದಳು ಮೋಹದ ಮುದ್ದನ,
ಮುತ್ತಲು ಕಂಬನಿ ಕಣ್ಣ.
ಕತ್ತನಾಲಿಂಗಿಸಿ ಮುಡಿಯ ನೇವರಿಸುತ್ತ-
ಲೊತ್ತಿದಳಧರವ ತಲೆಗೆ.

“ಒಲುಮೆಯ ಕುರುಡಿಗೆ ಬಲಿಯಾದೆವಿಬ್ಬರು,
ಬಳುವಳಿಗೀ ಬಾಳೆ ನಿನಗೆ?
ಕುಲವಿತ್ತೆ, ರೂಪಿತ್ತೆ, ಶೀಲವೆ ಕನಕಗೆ?
ಹುಲುಮನುಜಗೆ ನಾನೆಂತೊಲಿದೆ?

“ಪ್ರಣಯ ಪ್ರಪಾತಕ್ಕೆ ಧುಮುಕೆಂದು ನಚ್ಚೊಂದು
ಕೆಣಕಿತೊ ಮನವ? ನಾನರಿಯೆ.
ಕನಕನ ನೆಮ್ಮುವ ನರಕವೆ ಬಾಗಿಲೊ,
ಗಿಣಿ, ನಿನ್ನ ನಪ್ಪುವ ದಿವಕೆ?

“ಒಲುಮೆಯ ಹುಚ್ಚೊಳು ನೀ ಬಹ ನೆಚ್ಹಿತ್ತೊ?
ಒಲಿದೆನೊ ನಿನಗಾಗಿ, ಚಿನ್ನ?”
ಬಲು ಮೋಹದಿಂದಣುಗನ ಮುತ್ತಿಟ್ಟಳು ರಾಮಿ-
ಇಳೆಯೊಳು ತನ್ನೊಂದೆ ನಚ್ಚ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...