Home / ಕವನ / ಕವಿತೆ / ಹೇಮಾವತಿಯ ತೀರದಲ್ಲಿ

ಹೇಮಾವತಿಯ ತೀರದಲ್ಲಿ

ಹಗಲ ಕಣ್ಣನು ಮಂಕು ಕವಿಯಿತು,
ಮುಗಿಲ ಬಾಣದ ಬಿರುಸು ಹೆಚ್ಚಿತು,
ನೆಗೆದು ನೊರೆಯನು ಕೀಳುತೋಡಿತು
ಮಲೆಯನಾಡಿನ ಹೇಮೆಯು.

ಕರೆಯ ಮಂಟಪದೊಳಗೆ ಕುಳಿತು,
ಬೆರಗುಮಾಡುವ ಪ್ರಕೃತಿಯಂದಿನ
ಇರವ ನೋಡುತ ಮೂಕರಾದೆವು
ನಾನು ರಾಮ ಇಬ್ಬರೂ.

ಮುಗಿಲಿನಾರ್‍ಭಟ, ಗಾಳಿಯುಲುಹು,
ಹಗಲ ಕಂಬನಿಯಂತೆ ಸೋನೆಯು,
ನೆಗೆದು ಮೊರೆಯುವ ಹೇಮೆಯಬ್ಬರ-
ಏನು ಭೀಕರ ಪ್ರಕೃತಿಯು!

ಬಾನ ನೀಲವನಲೆಯೊಳಿಟ್ಟು,
ತಾನದೊಂದಿಗೆ ಹಾಡಿ ತೂಗಿದ
ಮಾನವತಿ ಮೃದುಗಮನೆ ಹೇಮೆಯೆ
ಕನಲಿ ಮೊರೆವೀ ಹೇಮೆಯು!

ಹಗಲಿನಂದಿನ ರೂಪು ತಂದಿತು
ಬಗೆಗೆ ಸಾವಿನ ಚಿಂತೆಗಳನು,
ನಗೆಯನಣಕಿಸಿ ಸೊಗವ ಜರೆಯುತ
ಬವಣೆಗೊಳ್ಳುವ ಭಾವವ.

ಏನು ಸೋಜಿಗ ಇಂಥ ದಿನದೊಳು
ಸ್ನಾನಮಾಡಲು ಪುಣ್ಯ ಕೆಳಸಿ
ಸಾನುರಾಗದಿ ಬಂದ ಬಾಲೆಯ-
ರಸುವ ನುಂಗಲು ಹೇಮೆಯು!

ಇರಲಿ ರೂಪವು, ಇರಲಿ ಬೆಡಗು,
ಸುರರ ಕನ್ಯೆಯ ಜರೆವ ಕೊರಲು,
ಇರಲಿ ಸ್ವರ್ಗದ ಮೌಗ್ಧ್ಯ-ಕನ್ನೆಯು
ಹೊನಲ ಮುನಿಸನು ತಡೆವಳೆ?

“ಇರುಳನೆಲ್ಲಾ ಹಾಡಿ ದಣಿದು
ಕೊರಲು ಕಟ್ಟಿದೆ, ಮೊಗವು ಸೊರಗಿದೆ.
ಬರಿಯ ಛಲವೇಕಿಂದು ಮೀವರೆ,
ಸೋನೆ ಹಗಲೊಳು, ಹೊಳೆಯೊಳು?”

ಕೆಳದಿಯರ ಜೊತೆ ಕೂಡಿ ಸರಸದಿ
ಹೊಳೆಯೊಳಲೆಯುತ ನಲಿವ ಕೌತುಕ-
ಕೆಳಸಿ, ತುಡಿಯುವ ಬಾಲೆ ಕೇಳ್ವಳೆ
ತಾಯಿ ನುಡಿದಾ ಹಿತವನು?

“ಬಾರೆ ಕಮಲೆ, ಬಾರೆ ಗೌರಿ,
ಬಾರೆ ಶಾರದೆ, ಪುಣ್ಯದಿನದೊಳು
ಕಾರ ಮುಗಿಲಿನ ಮೊಳಗಿಗಂಜುತ
ಹೊಳೆಗೆ ಹೋಗದೆ ನಿಲ್ವರೆ?”

ಏನು ಸಡಗರ! ಏನು ನಗೆಯು!
ಏನು ಉಲ್ಲಸವವರಿಗಂದು!
ಹೊನಲೊಳಡಗಿದ ಜವನ ಮೊಗದೊಳು
ನಗೆಯ ಹರಡುವ ಸರಸವು!

ಅವರ ಮೋದಕೆ, ಆದೊಡಯ್ಯೋ,
ಬುವಿಯೊಳಂದೇ ಚರಮದಿನವು.
ಅವರ ಜೀವದ ಹಣತೆ ಕ್ಷಣದೊಳು
ನಂದಿಹೋಯಿತು ಹೊನಲೊಳು.

ಹೊಳೆಯ ಮಂಟಪದೊಳಗೆ ಕುಳಿತು
ಹಳೆಯ ನೆನಪನು ಮನಕೆ ತಂದೆನು:
ಹಳುವ ತುಂಬಿದ ಗೋಳ ಹೊಳಲನು,
ಹರಿದ ಕಂಬನಿಕಾಲ್ವೆಯ;

ಆರ ಗಾನದ ಲಹರಿ ಹೃದಯಕೆ
ತೂರಿ ತೋರಿದ ಆತ್ಮದರಕೆಯ-
ನಾರ ಪ್ರೇಮವೆ ಪೂರ್‍ಣಮಾಡಿತೊ,
ಅಂಥ ತಂಗಿಯ ಸಾವನು.

ತಿಳಿವು ಮರಳಿತು, ಮನದ ದುಗುಡವ-
ನಳೆದು ಮರುಕವನೆರೆವ ತೆರದೊಳು
ತಲೆಯ ತಡಹುತ ರಾಮುವಿದ್ದನು-
ನುಡಿದೇನೀಪರಿ ಕೆಳೆಯಗೆ:

“ಏನು ದಿನವಿದು, ಕೆಳೆಯ, ಹೇಮೆಗೆ
ಏನಿದಬ್ಬರ!- ಇಂಥ ಹಗಲೊಳು
ಹೊನಳೊಳಳಿದಳು ತಂಗಿ ಜಾನಕಿ;
ತೋರಬಲ್ಲೆಯ ಮಸಣವ?”

ಎನ್ನ ಮಾತಿಗೆ, ರಾಮು ಸುಯ್ಯುತ,
“ಚಿನ್ನ, ನೆರೆಯೊಳು ಕಾಣದೆ”ಂದನು-
ಎನ್ನ ಕಂಬನಿಕೋಡಿ ಬೆರೆಯಿತು
ಮೊರೆವ ಹೇಮೆಯ ತೆರೆಯೊಳು.

ಸಾವು ಸೋಕುವುದೆಲ್ಲರನು, ದಿಟ-
ಸಾವಿಗಂಜುತ ಗೋಳ ಕರೆವುದು
ಸಾವು ಒಯ್ಯುವ ಜೀವಕಲ್ಲವು-
ಹಿಂದೆ ಉಳಿಸುವ ಅರಕೆಗೆ!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...