Home / ಕವನ / ಕವಿತೆ / ಅಭ್ಯುದಯ

ಅಭ್ಯುದಯ

ಇಳೆಯನೆಲ್ಲ ತುಂಬಿನಿಂತು
ನಾಟ್ಯವಾಡುತಿರುವ ರೂಹೆ !
ಅಲ್ಲಿ-ಇಲ್ಲಿ ಎಲ್ಲೆಡೆಯಲಿ
ಇದ್ದ ನಿನ್ನ ನಿಲುಕದೂಹೆ !
ಮನವ ಸೆಳೆದುಕೊಳ್ಳುವ ಶಕ್ತಿ !
ನಿನ್ನ ಮಿರುಗಮಿಂಚಿದೇನು ?
ಬಣ್ಣ ಬಣ್ಣಗಳನ್ನು ತೋರ್‍ವ
ನಿನ್ನ ಸಹಜ ಸೃಷ್ಟಿಯೇನು ?
ಬಂದ ಮಾವಿನಡಿಗೆ ನಿಂತು
ನಿನ್ನ ಚೆಲುವ ನೋಡಬಹುದು
ನಿನ್ನ ಲತೆಗಳೊಡನೆ ಕೂಡಿ
ಕೇಳ್ದ ವರವ ಪಡೆಯಬಹುದು
ಅಲ್ಲಿ ಇಲ್ಲಿ ನೋಡಿದಲ್ಲಿ
ಎಸೆಯುತಿಹುದು ನಿನ್ನ ಬಳ್ಳಿ !

ನಿಜ ಮನೋಜವಿಹ ವಿಶಾಲ
ದೃಷ್ಟಿಯೊಂದು ಕೊನರುತಿಹುದು.
ಬುದ್ಧಿಗಿರುವ ಕಣ್ಣಿನಲ್ಲಿ
ಮತ್ತೆ ಮತ್ತೆ ಹೊಳೆಯುತಿಹುದು.
ಬಿದ್ದು ನಿದ್ರೆಗೈವ ದಿನ್ನೆ
ಯಮನ ಕೋಣವಾಗಬಹುದು.
ಬಳಿಗೆ ಸುಳಿವ ಮರ್‍ತ್ಯಕನ್ಯೆ
ಸ್ವರ್‍ಲಲನೆಯೆ ಆಗಬಹುದು.
ಸನಿಯಕಿರುವ ಗೆಳೆಯನೆದೆಯು
ಅಲ್ಲವೇನು ಸ್ಪರ್‍ಶಮಣಿಯು ?
ತಿಳಿದು ನೋಡೆ,- ಭುವನವಿದು
ಅಲ್ಲವೇನು ಮುದ್ದು ಕಣಿಯು !
ಅಲ್ಲಿ- ಇಲ್ಲಿ- ನೋಡಿದಲ್ಲಿ
ಎಸೆಯುತಿಹುದು ನಿನ್ನ ಬಳ್ಳಿ !

ಆದರಿಂಧ ದೃಷ್ಟಿ ಕಳೆದು
ಹುಟ್ಟುಗುರುಡ ಕಂಗಳೇಕೆ ?
ದಿವ್ಯಧಾಮವನ್ನು ಕಂಡ
ಮನವ, ಮಾಯೆ ಸೆಳೆಯಬೇಕೆ ?
ಮತ್ತೆ ನಿಶೆಯು ಕವಿದು ಹಿರಿಯ
ನೋಟವಿಲ್ಲದಾಗುತಿಹುದು
ನೋಡಿದತ್ತ ಕಾಳ್ಗತ್ತಲೆ
ಮೇರೆವರಿದು ಘೂರ್‍ಣಿಸುವದು
ಮತ್ತೆ ಕಾಮ-ಮೋಹ ಬೆರಸಿ
ಸೃಜಿಸಿದ ಪುತ್ತಳಿಯು,-ಹೆಣ್ಣು.
ಪ್ರಕೃತಿಯತುಲ ಸೌಂದರ್‍ಯ-
ಕಿರುವ ಸ್ಫುರಣ, ಬರಿಯ ಮಣ್ಣು
ಅಲ್ಲಿ-ಇಲ್ಲಿ ನೋಡಿದಲ್ಲಿ
ಕಾಳರೂಪವೆಸೆವುದಿಲ್ಲಿ !

ಮಾನವಾಭ್ಯುದಯದ ದೇವಿ !
ನಿನ್ನ ಪ್ರೀತಿಗೆಂದು ಲಲ್ಲೆ-
ಯಿಂದ ಬುವಿಯ ಹಿರಿಯಣುಗರು
ತಮ್ಮ ಬಾಳ ತೊರೆಯಲಿಲ್ಲೆ
ಆತ್ಮಯಜ್ಞವನ್ನೆ ಹೂಡಿ
ನಿನ್ನ ಹಸಿವ ಹಿಂಗಿಸಿದರು.
‘ಏಕೆ ತೆರೆಯನೆತ್ತಲೊಲ್ಲೆ?’
ಎಂದು ನಿನ್ನ ಹಂಗಿಸಿದರು
‘ಮುಂದೆ ಬರುವ ವಂಶಕಿರಲಿ
ಶಾಂತಿ ಕಾಂತಿಯಮಿತವಾಗಿ,
ತಾಯೆ ! ರಜನಿ ಮುಗಿಯಲೆ ’ಂದು
ಪ್ರಾರ್ಥಿಸಿದರು ಪ್ರಾಣ ನೀಗಿ.
ಆದರೇನು? ನೋಡಿದಲ್ಲಿ
ಕಾಳರೂಪವೆಸೆವುದಿಲ್ಲಿ !

ವ್ಯರ್‍ಥವವರ ತ್ಯಾಗ ಮತ್ತೆ
ನೀ ಕೇಳಲು ಬಲಿಯನಿಂದು !
ವ್ಯಕ್ತಿಯೊಳನುರಕ್ತಳೆನುವೆ.
ಇಡಿ ಕುಲಕೀ ಭಾಗ್ಯವೆಂದು !
ಆಡಿದಾಟವನ್ನೆ ಆಡಿ
ಬರೆದುದನ್ನೆ ಬರೆಯುತಿರುವೆ.
ಒಂದೆ ಲಿಪಿಯ ನೀ ಪುನರಪಿ
ಬರೆಯುತಳಿಸಿ ಬರೆಯುತಿರುವೆ !
ಗೆದ್ದುದನ್ನೆ ಮತ್ತೆ ಗೆಲಲು
ಮುನ್ನಡೆಯುವರೇನು ? ತಾಯೆ !
ಇಹೆಯಾ ಮಾಯೆಯಂಕಿತದಲಿ ?
ನಿನ್ನೂಳಿಗದವಳು ಮಾಯೆ !
ಆದರೇನು ? ಬೆಳಕು, ನಿಶೆಯು,-
ಇದುವೆ ನಿನ್ನ ಗಮನದಿಶೆಯು !
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...