Home / ಕವನ / ಅನುವಾದ / ಆದಮನ ಶಾಪ

ಆದಮನ ಶಾಪ

ಬೇಸಿಗೆ ಕೊನೆಯ ಒಂದು ಸಂಜೆ ಹೊತ್ತು :
ನಿನ್ನಾಪ್ತ ಗೆಳತಿ, ಆ ಚೆಲುವೆ ಕೋಮಲೆ, ನಾನು ನೀನು ಕೂತು
ಮಾತಾಡಿದೆವು ಕವಿತೆಯನ್ನು ಕುರಿತು
ನಾನೆಂದೆ : “ಕವಿತ ಸಾಲೊಂದನ್ನು ಸಾಧಿಸಲು
ಗಂಟೆಗಟ್ಟಲೆ ನಾವು ಹೆಣಗಬೇಕು;
ಆದರೂ ಆ ಸಾಲು ಅಲ್ಲೆ, ಆ ಗಳಿಗೆಯೇ
ಚಿಮ್ಮಿ ಬಂದದ್ದೆಂದು ಅನ್ನಿಸದೆ ಇದ್ದಲ್ಲಿ
ಹೊಲಿದು ಬಿಟ್ಟಿದ್ದೆಲ್ಲ ಪೂರ ವ್ಯರ್‍ಥ.
ಬೆನ್ನು ಬಗ್ಗಿಸಿ ಮಂಡಿಯೂರಿ ಕೊಳೆಯಡಿಗೆ ಮನೆ ನೆಲವನ್ನುಜ್ಜುವುದೊ,
ಕಡು ಭಿಕಾರಿಯ ಹಾಗೆ ಬಿಸಿಲು ಚಳಿ ಎನ್ನದೆ ಕಲ್ಲನ್ನೊಡೆಯುವುದೊ
ಇದಕ್ಕಿಂತ ಉತ್ತಮ
ಮಧುರ ನಾದಗಳ ಹದವಾಗಿ ಹೆಣೆಯುವ ಕೆಲಸ
ಎಲ್ಲಕ್ಕೂ ಕಷ್ಟ ಅಷ್ಟೆಲ್ಲ ಮಾಡಿಯೂ ಕೂಡ
ಶಾಲೆ ಮತ ಬ್ಯಾಂಕುಗಳ ಗೊಂದಲದ ಮಂದಿಗೆ
ನಾವು ಕವಿಗಳು ಶುದ್ಧ ಕೆಲಸಗೇಡಿಗಳು”

ನಿನ್ನ ಪ್ರಿಯಗೆಳತಿ ಆ ಚೆಲುವೆ – ಎಂಥ ಪ್ರಶಾಂತೆ,
ಏನು ಸವಿ ಅವಳದನಿ, ಎಷ್ಟು ಮಿದು, ಅದಕಾಗಿ
ಏನೆಲ್ಲ ಹೃದಯವ್ಯಥೆ ಸಹಿಸಲೂ ಸಿದ್ದರು ಎಂಥೆಂಥ ಜನರೂ –
ಹೇಳಿದಳು : “ಕಲಿಸದಿದ್ದರು ಕೂಡ ಯಾವ ಸ್ಕೂಲೂ ಎಲ್ಲೂ,
ಹೆಣ್ಣು ಜೀವಕ್ಕೆಲ್ಲ ಗೊತ್ತಿರುವ ಗುಟ್ಟು ಇದು, ಚೆಲುವೆಯಾಗಿರಲು
ಶ್ರಮಿಸಬೇಕು ಸದಾ”. ನಾನಂದೆ : “ಹೌದು, ನಿಜ
ಆದಮನ ಪತನವಾದಂದಿನಿಂದ
ಕಷ್ಟಪಡದೇ ಗಳಿಸಬಲ್ಲ ಸುಂದರವಸ್ತು ಏನೊಂದೂ ಇಲ್ಲ.
ಪ್ರೇಮವೆಂದರೆ ತೀರ ಸೂಕ್ಷ್ಮ ಸೌಜನ್ಯಗಳ
ಪರಿಪಾಕವೆಂದೆ ಗ್ರಹಿಸಿದ್ದ ಪ್ರೇಮಿಗಳು ಇದ್ದರೆಷ್ಟೋ.
ನಿಟ್ಟುಸಿರ ಚೆಲ್ಲುತ್ತ, ಜ್ಞಾನ ತುಂಬಿದ ದೃಷ್ಟಿ ಹರಿಸಿ ಉದ್ಗರಿಸುತ್ತ.
ಪ್ರಾಚೀನ ಸುಂದರ ಕೃತಿಗಳಿಂದಾಯ್ದ ಸಂಗತಿಯ ಉದ್ದರಿಸುತ್ತ
ತೋಡಿಕೊಳ್ಳುತ್ತಿದ್ದರವರ ಅನುರಾಗ,
ವ್ಯರ್‍ಥವೆನಿಸುತ್ತದೆ ಅಂಥ ಉದ್ಯಮ ಈಗ.”

ಪ್ರೇಮವೆಂದದ್ದೆ ತಡ, ಮೌನ ನೆಲೆಸಿತು ಸುತ್ತ
ಹಗಲ ಬೆಳಕಿನ ಕಡೆಯ ಕಿಡಿಗಳೂ ಆರುತ್ತ
ಪಚ್ಚಿನೀಲಿಗಳು ಕಂಪಿಸುವ ನಭದೆದೆಯಲ್ಲಿ ಕಂಡ ಚಿತ್ರ :
ಅಲೆಯೆದ್ದು ಬಿದ್ದು ಸಾಗುತ್ತಿರುವ ಕಾಲಜಲ
ದಿನ ವತ್ಸರಗಳಾಗಿ ಒಡೆಯುತ್ತ, ಕಡೆಯುತ್ತ,
ಚಿಕ್ಕೆಗಳ ನಡುವೆ ತಳದಲ್ಲೆಲ್ಲೊ ತೊಳೆಯುತ್ತ
ಸವೆದಿದ್ದ ಚಿಪ್ಪಿನಂತಿದ್ದ ಚಂದ್ರ.
ನಿನ್ನ ಕಿವಿಯೊಳಗಷ್ಟೆ ಉಸಿರಬಹುದಾದೊಂದು ವಿಚಾರ ಬಂತು
ನೀ ಚೆಲುವೆಯಾಗಿದ್ದೆ,
ಹಿಂದಿನವರು ಪ್ರೇಮದ ಉಚ್ಚ ನೆಲೆಯಲ್ಲಿ
ನಿನ್ನನ್ನೊಲಿಸಲು ನಾನು ಹೆಣಗಿದ್ದೆ, ಆಗೆಲ್ಲ
ಸುಖವಾಗಿಯೇ ಇತ್ತು. ಆದರೆ ಈಗ
ಅನಿಸುವುದು ನಮ್ಮ ಎದೆ ಬಳಲಿದಂತೆ
ಸಮೆದು ತೆಳುವಾದ ಆ ಚಂದ್ರನಂತೆ.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಏಟ್ಸನ ಆವರೆಗಿನ ಕವನಗಳಲ್ಲೆಲ್ಲ ಮುಖ್ಯವಾದದ್ದು ಎಲಿಯಟ್ ಇದನ್ನು ಮೆಚ್ಚಿ ಮಾತಾಡಿದ್ದಾನೆ.

ದೇವರು ತನ್ನ ಅಪ್ಪಣೆಗೆ ವಿರುದ್ಧವಾಗಿ ನಡೆದ ಆದಮನನ್ನು ಈಡನ್ ತೋಟದಿಂದ ಹೊರಕಳಿಸಿದ. ಮುಂದೆ ಶ್ರಮದ ದುಡಿಮೆಯಿಂದ ಜೀವಿಸುವಂತೆ ಶಾಪವಿತ್ತ.

ಕವನದಲ್ಲಿ ಕವಿಯ ಜೊತೆ ಮಾತಿಗೆ ಕುಳಿತಿರುವವರು ಮಾಡಗಾನ್ ಮತ್ತು ಅವಳ ತಂಗಿ ಕ್ಯಾಥಲೀನ್.

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...