Home / ಕವನ / ಕವಿತೆ / ಶ್ರೀ ವಿದ್ಯಾರಣ್ಯರ ಅಡಿದಾವರೆಯಲ್ಲಿ

ಶ್ರೀ ವಿದ್ಯಾರಣ್ಯರ ಅಡಿದಾವರೆಯಲ್ಲಿ

ಶ್ರೀ ಕರ್ಣಾಟಕರಾಜ್ಯ ವಾಸ್ತುಪತಿಯಂ, ನಾಸ್ತಿಕ್ಯ ರುಗ್ವೈದ್ಯನಂ,
ವೇದಾಂತಾದಿ ಗತಾಧ್ವನಂ, ನಿಗಮಧರ್ಮೋದ್ಧಾರಣಾಚಾರ್ಯನಂ,
ಮ್ಲೇಚ್ಛಾಚ್ಛಾನ್ನ ಪವಿತ್ರ ಭಾರತ ವಿಯನ್ಮಾಧ್ಯಂದಿನಾದಿತ್ಯನಂ,
ವಿದ್ಯಾರಣ್ಯ ವರೇಣ್ಯನಂ ಚತುರ ಚಾತುರ್ವೈದ್ಯನಂ ವಂದಿಪೆ ||೧||

ಯಾಜುಷ ಶಾಖೆಯ ಪ್ರಚುರ ವಿಪ್ರರ ವಂಶದಿ ಜನ್ಮಮಂತೆ, ಬೌ
ಧಾಯನ ಸೂತ್ರಮಂತೆ, ಸಿರಿ ಮಾಯಣನಾತ್ಮಜನಂತೆ, ಮೇಣ್‌ ಭರ
ದ್ವಾಜನ ಗೋತ್ರಮಂತೆ, ನಿಜಸೋದರ ಸಾಯಣನಂತೆ, ಕನ್ನಡಂ
ತಾಯ್ನುಡಿಯಂತೆ, ನೀನಖಿಲ ಕಲ್ಪಿಯ ಕಾನನಮಂತೆ, ಮಾಧವಾ ||೨||

ಶಕಸಮ ದಿಕ್ಶರದ್ವಿವಿಧು ಧಾತುವ ಮಾಧವ ಶುಕ್ಲಪಕ್ಷ ಸ
ಪ್ತಮಿ ರವಿವಾಸರಂ ಕದರಿ ಕನ್ನಡ ರಾಜ್ಯದ ಲಕ್ಷ್ಮಿ ತುಂಗಭ
ದ್ರಾತಟಕಾಚಿ ಬಂದಳೆ? ಗಡಾಕೆಯನಂದಿಗೆ ಹಿಂದುರಾಟ್‌ ಸುರ
ತ್ರಾಣನ ಗಂಡುಕೆಯ್ವಿಡಿಸುತಾದೆಯ ಕನ್ನಡ ನುಳ್ಪುರೋಹಿತಂ? ||೩||

ಕಿರುತಮ್ಮಂ ಬೆರಸೀ ಚತುಃಶ್ರುತಿಗೆ ವೇದಾರ್ಥಪ್ರಕಾಶಂ ನೆರ
ಳ್ಮರೆಯಿಂ ನೇಸರ ನೋಡುವಂತೆ ಮೆರಸಲ್‌ ಮೇಣೇಂ ಪ್ರಸಾದಂ ಚಿರಂ?
ಚತುರಾಸ್ಯಂ ಚತುರಾಸ್ಯದಿಂದೊರೆದುದನ್ನಾಸ್ಯದ್ವಯಂ ಸಾಧಿಸಲ್‌
ವಿಧಿಯೋ ವೇದವೊ ನಿಮ್ಮೂಳಂತು ನೆರೆವಂದೇಂ ಧನ್ಯಮೀ ಭಾರತಂ! ||೪||

ನಿಲಿಸಿ ಪರಾಶರಸ್ಮೃತಿಗೆ ನೀಂ ಕಲಿಕಾಲದಿ ಕೆತ್ತ ಕತ್ತಲಂ
ತೊಲಗಿಪ ಕೆಯ್ವೆಳಂಕ ಮಿರುಟೀಕೆಯ, ಮಾಣಿಸಿದೆಮ್ಮ ಮುಗ್ಗುರಂ
ಅಭಿನವ ಕಾಲಿದಾಸನೆನೆ ಶಂಕರದಿಗ್ವಿಜಯಂ ನೆಗಳ್ಚಿ, ಮೇಣ್‌
ನಿರವಿಸಿ ಧಾತುಜಾತದರಿವಂ ನುಡಿಯಾಗರವಂ ಬಿದಿರ್ಚಿದೈ! ||೫||

ಸರ್ವಧರ್ಮಸಮಾನದೃಷ್ಟಿಯೆ ಸರ್ವದರ್ಶನಸಂಗ್ರಹಂ
ಕಾಣಿಸಿತೆ? ವ್ಯವಹಾರ ಕಾಲಾಚಾರವಿವು ತರಿಸಂದುವೆ?
ಐತರೇಯಕೆ ತೈತ್ತಿರೀಯಕೆ ಬಾಸಣಿಸಿ ಜತೆ ಭಾಷ್ಯಮಂ,
ಜೈಮಿನೀಯಕೆ ಬಾದರಾಯಣಕಿತ್ತೆ ತಿಳಿಗನ್ನಡಿಗಳಂ ||೬||

ಕೊಂಕಣದಂಕೆಯಲ್ಲಿ ತುಡುವೊಕ್ಕ ತುರುಂಕರ ನೂಂಕಿ, ಸಪ್ತಕೋ
ಟೀಶನ ದೇಗುಲಂ ನಿಲೆ ನಿಮಿರ್ಚಿಸಿ, ಗೋವೆಯ ಗೋವನಾಗಿ, ಮಾ
ರಾಯನ ಸಮ್ಮತಂ ಬೆರಸು ಪೋಗಿ ಜಯಂತಿಯನಾಳಿ, ಮುಂತೆ ಶೃಂ
ಗೇರಿಯ ಸೇರಿ, ನೀನಪರ ಶಂಕರನಂತೆಡೆಗೊಂಡೆ ಮಾಧವಾ ||೭||

ತುರುಕರ ದಿಂಡು ಗುಂಡಿಗೆಯ ಹಿಂಡಿದ ನಿನ್ನಯ ಬಾಹು ದಂಡಮಂ
ಪೊಗಳ್ವೆನೆ ? ಹಿಂದುಮುಂದರಿವ ಹೈಂದವ ಧರ್ಮಕೆ ಶಬ್ದ ಶಿಲ್ಪದಿಂ
ನಿಗಮದ ಗಂಗೆಗಾಗಮದ ಕಟ್ಟೆಯ ಕಟ್ಟಿದ ಬುದ್ದಿ ಶಕ್ತಿಯಂ
ಪೊಗಳ್ವೆನೆ ? ಚೋದ್ಯಮೇಂ — ಬಿಗುರ ಬೀರಿದ ಬೀರಮೊ? ಬಲ್ಲ ಬಿಜ್ಜೆಯೊ? ||೮||

ಬ್ರಹ್ಮಕ್ಷತ್ರಮೆ ಸಲ್ವುದೀ ಕಲಿಯುಗಕ್ಕೆಂದೇನದಂ ತಾಳ್ದಿದೈ?-
ಬ್ರಹ್ಮಜ್ಞಾನದೆ ಕಾಯೆ ತಾಯೆಳೆಯ ಧರ್ಮಗ್ಲಾನಿಯಿಂ ಹಾನಿಯಿಂ,
ಕ್ಷತ್ರತ್ರಾಣದೆ ಕಾದೆ ಮ್ಲೇಚ್ಛದಳವಂ ಮಾರ್ಕೊಂಡವರ್ಕೊಂಡುದಂ!-
ಬ್ರಹ್ಮಕ್ಷತ್ರ ಕುರಾರರಾಮನವತಾರಂ ನಿನ್ನೊಳೇಂ ಬೆತ್ತನೆ? ||೯||

ಜ್ಞಾನಮೆ ಮಾನವೀ ತನುಮನಾಂತುದೆ? ಭಕ್ತಿಯೆ ಭಿಕ್ಷವಾದುದೆ?
ವಾಣಿಯ ಜಾಣೆ ಆಣೆರಕಗೊಂಡುದೆ? ಗೆಲ್ಲಿನ ಬಲ್ಲೆ ಮೂಡಿತೆ ?
ಕನ್ನಡ ನಾಡೆ ತನ್ನ ಮನಮೊಟ್ಟಿಸಿ ಸೃಷ್ಟಿಸೆ ಸೃಷ್ಟಗಿತ್ತುದೆ?
ಧರ್ಮಮೆ ಕರ್ಮಮಾಗಿ ನೆರವೇರಿತೆ ನಿನ್ನಲಿ? ಪೇಳ ಮಾಧವಾ ||೧೦||

ಸತ್ಯದ ಭೂಮಿ, ಧರ್ಮದಮೃತಾಂಬುಧಿ ಶುಷ್ಕ ತುರುಷ್ಕ ಕಾನನಾ
ಭೀಲ ದವಾನಲಂ, ನಿಖಿಲ ಕನ್ನಡ ನಾಡಿನ ಸೂತಿಕಾನಿಲಂ,
ಶುದ್ಧ ಚಿದಂಬರಂ, ಬೆರೆಯೆ ಪಂಚತೆಗಂದಿಗತೀತ ಪಂಚಭೂ
ತಂ ನಿನತಾತ್ಮಮೊಂದಿ ಪರಮಾತ್ಮನನಾದುದಭಿನ್ನಮದ್ವಯಂ ||೧೧||

ಕಂತಿದೆ ನೀ ದಿನಾಂತದಿನನಂತೆನೆ, ನಿನ್ನಯ ಪಿಂತೆ ಕಾಂತಿಯಂ
ಕಾಣದ ಭಾರತಂ ಬರಬರುತ್ತ ನಿಶೀಥಕೆ ಮಾಸಿ ಬಂದುದೈ;
ರಾಮನ ಸಂಕದಿಂ ಕುಳಿರ ಶೃಂಗವರಂ ನಮಗಿಂದಿಗಿಲ್ಲಿ ನಿ
ನ್ನನ್ನವನೊರ್ವನುಳ್ಳಡೆಮಗಪ್ಪುದೆ ಈ ಬಡಪಾಡು ಮಾಧವಾ? ||೧೨||

ಪರಮಾಚಾರ್ಯನೆ, ನಿನ್ನ ಪುಣ್ಯತಿಧಿಯೊಳ್ನಾನೊಂದಿದಂ ಬೇಡುವೆಂ-
ಭವದಾವಾಸದ ಬ್ರಹ್ಮಧಾಮದಲಿ ಮುನ್ನೀಂ ಪುಟ್ಟಿದೀ ಭಾರತಂ
ಮರೆಯಲ್ಬೇಡೆಮಗಾಗಿ ಬೇಡೊಡೆಯನನ್ನಮ್ಲಾನ ಭಾಗ್ಯೋದಯಂ
ಬರಿಸಲ್ನೀನೆರೆವಂದು ನೀಡದವನಿನ್ನಾರ್ಗಂ ಗಡಾ ನೀಡುವಂ? ||೧೩||

ಶ್ರೀ ಕರ್ಣಾಟಕಮೇವರಂ, ನೆನವು ನಿನ್ನಾಚಾರ್ಯ ಮುನ್ನಾವರಂ,
ಹಿಂದೂದ್ಧರ್ಮಮಿದೇವರಂ, ಯಶಸು ನಿನ್ಮಾಚಾರ್ಯ ಮುನ್ನಾವರಂ,
ನಮ್ಮೀ ಭಾರತಮೇವರಂ, ಹೆಸರು ನಿನ್ನಾಚಾರ್ಯ ಮುನ್ನಾವರಂ-
ಸೂರ್ಯಾಚಂದ್ರಮರೇವರಂ, ನಿಲುವುವಿನ್ನಾಚಾರ್ಯ ಮುನ್ನಾವರಂ! ||೧೪||

ವಿಪುಲ ಜ್ಞಾನಮನಾಂತು ಸಲ್ಲಿಸಿದ ಮೇಧಾಶಕ್ತಿಗಂ, ಮ್ಲೇಚ್ಛರಂ
ಸದೆವೊಯ್ದದ್ಭುತ ಶೌರ್ಯಶಕ್ತಿಗೆ, ತಥಾ ಕರ್ಣಾಟ ವಾಸ್ತೂತ್ಸವಂ
ಗೆಯಿದಾತ್ಮೋಪಮ ಕರ್ತೃಶಕ್ತಿಗೆ, ಧುರಂ ತಾಳ್ದಾ ಬೃಹನ್ನೀತಿ ಶ
ಕ್ತಿಗೆ, ನಿನ್ನಕ್ಕೆಮ ಸರ್ವಶಕ್ತಿಗೆ ಸದಾ ಭದ್ರಂ ಶುಭಂ ಮಂಗಳಂ ||೧೫||
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...