Home / ಕವನ / ಕವಿತೆ / ಕನ್ನಡಿಗರ ತಾಯಿ

ಕನ್ನಡಿಗರ ತಾಯಿ

ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೆ!
ಹರಸು ತಾಯೆ, ಸುತರ ಕಾಯೆ, ನಮ್ಮ ಜನ್ಮದಾತೆಯೆ!
ನಮ್ಮ ತಪ್ಪನೆನಿತೊ ತಾಳ್ವೆ,
ಅಕ್ಕರೆಯಿಂದೆಮ್ಮನಾಳ್ವೆ;
ನೀನೆ ಕಣಾ ನಮ್ಮ ಬಾಳ್ವೆ,
ನಿನ್ನ ಮರೆಯಲನೆಮ್ಮೆವು-
ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವೆಮ್ಮವು. ೭

ಹಣ್ಣನೀವ ಕಾಯನೀವ ಪರಿಪರಿಯ ಮರಂಗಳೊ,
ಪತ್ರಮೀವ ಪುಷ್ಪಮೀವ ಲತೆಯ ತರತರಂಗಳೊ,
ತೆನೆಯ ಕೆನೆಯ ಗಾಳಿಯೊ,
ಖಗಮೃಗೋರಗಾಳಿಯೊ,
ನದಿನಗರನಗಾಳಿಯೊ!
ಇಲ್ಲಿಲ್ಲದುದುಳಿದುದೆ?
ಜೇನು ಸುರಿವ ಹಾಲು ಹರಿವ ದಿವಂ ಭೂಮಿಗಿಳಿದುದೆ? ೧೪

ಬುಗರಿಯೀಯೆ ಶಬರಿ ಕಾಯೆ ರಾಮನಿಲ್ಲಿ ಬಂದನೆ?
ಕನ್ನಡ ದಳ ಕೂಡಿಸಿ ಖಳ ದಶಾಸ್ಯನಂ ಕೊಂದನೆ?
೧ಪಾಂಡವರಜ್ಞಾತಮಿದ್ದ,
ವಲಲಂ ಕೀಚಕನ ಗೆದ್ದ,
೨ಕುರುಕುಲ ಮುಂಗದನಮೆದ್ದ
ನಾಡು ನೋಡಿದಲ್ಲವೇ?
ನಂದನಂದನನಿಲ್ಲಿಂದ ಸಂದಿಗಯ್ದನಲ್ಲವೇ? ೨೧

ಶಕವಿಜೇತನಮರ ೩ಶಾತವಾಹನಾಖ್ಯನೀ ಶಕಂ
ನಿನ್ನೊಳಂದು ತೊಡಗಿ ಸಂದುದರ್ಧ ಭರತದೇಶಕಂ!
ಚಳುಕ್ಯ ರಾಷ್ಟ್ರಕೂಟರೆಲ್ಲಿ,
ಗಂಗರಾ ಕದಂಬರೆಲ್ಲಿ,
ಹೊಯ್ಸಳ ಕಳಚುರ್ಯರೆಲ್ಲಿ,
ವಿಜಯನಗರ ಭೂಪರು
ಆಳ್ದರಿಲ್ಲಿಯಲ್ಲದೆಲ್ಲಿ ತಾಯೆ ಮೇಣಲೂಪರು? ೨೮

ಜೈನರಾದ ಪೂಜ್ಯಪಾದ ಹೊಂಡಕುಂದ ವರ್ಯರ,
ಮದ್ವಯತಿಯೆ ಬಸವಪತಿಯೆ ಮುಖ್ಯ ಮತಾಚಾರ್ಯರ,
೪ಶರ್ವ ಪಂಪ ರನ್ನರ,
ಲಕ್ಷ್ಮೀಪತಿ ಜನ್ನರ,
ಷಡಕರಿ ಮುದಣ್ಣರ,
ಪುರಂದರ ವರೇಣ್ಯರ,
ತಾಯೆ, ನಿನ್ನ ಬಸಿರೆ ಹೊನ್ನ ಗನಿ ವಿದ್ಯಾರಣ್ಯರ! ೩೫

ಹಳೆಯ ಬೀಡ ೫ಬೇಲನಾಡ ಮಾಡಮೆನಿತೊ ಸುಂದರಂ!
೬ಬಿಳಿಯ ಕೊಳದ ಕಾರಕಳದ ೭ನಿಡುಕರೆನಿತೊ ಬಂಧುರಂ!
ಇಲ್ಲಿಲ್ಲದ ಶಿಲ್ಪಮಿಲ್ಲ;
ನಿನ್ನ ಕಲ್ಲೆ ನುಡಿವುದಲ್ಲ!
ಹಿಂಗತೆಯಿನಿವಾಲ ಸೊಲ್ಲ
ನೆಮ್ಮ ತೃಷೆಗೆ ದಕ್ಕಿಸು-
ಹೊಸತು ಕಿನ್ನರಿಯಲಿ ನಿನ್ನ ಹಳೆಯ ಹಾಡನುಕ್ಕಿಸು! ೪೨

ಆರ್ಯರಿಲ್ಲಿ ಬಾರದಲ್ಲಿ ಬಾಸೆ ಎಲ್ಲಿ ಸಕ್ಕದಂ?
ನಿನ್ನ ನುಡಿಯಿನಚ್ಚುಪಡಿಯನಾಂತರೆನಿತೊ ತಕ್ಕುದಂ!
ಎನಿತೊ ಹಳೆಯ ಕಾಲದಿಂದ
ಬರ್ದಿಲಮೀ ಬಾಸೆಯಿಂದ
ಕಾಲನ ಮೂದಲಿಸಿ ನಿಂದ
ನಿನಗೆ ಮರವೆ ಹೊದೆವುದೆ?
ನಿನ್ನ ನುಡಿಗೆ ನಿನ್ನ ನಡೆಗೆ ಮುದುಪುಮೆಂದುಮೊದವುದೆ? ೪೯

ತನ್ನ ಮರೆಯ ಕಂಪನರಿಯದದನೆ ಹೊರಗೆ ಹುಡುಕುವ
ಮೃಗದ ಸೇಡು ನಮ್ಮ ಪಾಡು ಪರರ ನುಡಿಗೆ ಮಿಡುಕುವ!
ಕನ್ನಡ ಕಸ್ತೂರಿಯನ್ನ
ಹೊಸತುಸಿರಿಂ ತೀಡದನ್ನ
ಸುರಭಿ ಎಲ್ಲಿ? ನೀನದನ್ನ
ನವಶಕ್ತಿಯಿನೆಬ್ಬಿಸು-
ಹೊಸ ಸುಗಂದದೊಸಗೆಯಿಂದ ಜಗದಿ ಹೆಸರ ಹಬ್ಬಿಸು! ೫೬

ನಿನ್ನ ಪಡೆಯ ಕತೆಯ ಕಡೆಯ ನುಡಿಯೆ ತಾಳಿಕೋಟೆಯು?
ಕಡಲಿನೊರತೆಗೊಳವೆ ಕೊರತೆ? ಬತ್ತದು ನಿನ್ನೂಟೆಯು!
ಸೋಲ ಗೆಲ್ಲವಾರಿಗಿಲ್ಲ?
ಸೋತು ನೀನೆ ಗೆದ್ದೆಯಲ್ಲ?
ನಿನ್ನನಳಿವು ತಟ್ಟಲೊಲ್ಲ!-
ತಾಳಿಕೋಟೆ ಸಾಸಿರಂ
ಬಾಹುಬಲದಿ ಮುನೋಬಲದಿ ತಾಯೆ ಗೆಲುನೆ ಭಾಸುರಂ! ೬೩

ಕುಗ್ಗದಂತೆ ಹಿಗ್ಗಿಪಂತೆ ನಿನ್ನ ಹೆಸರ ಟೆಕ್ಕೆಯಂ,
ನೀಗದಂತೆ ಸಾಗಿಪಂತೆ ನಿನ್ನ ನುಡಿಯ ಢಕ್ಕೆಯಂ,
ನಮ್ಮೆದೆಯಂ ತಾಯೆ ಬಲಿಸು,
ಎಲ್ಲರ ಬಾಯಲ್ಲಿ ನೆಲಸು,
ನಮ್ಮ ಮನಮನೊಂದೆ ಕಲಸು!
ಇದನೊಂದನೆ ಕೋರುವೆ-
ನಿನ್ನ ಮೂರ್ತಿ ಜಗತ್ಕೀರ್ತಿ ಎಂದಿಗೆಮಗೆ ತೋರುವೆ? ೭೦
*****
೧ ಧಾರವಾಡ ಜಿಲ್ಲೆಯ ‘ಹಾನಗಲ್ಲು’ ವಿರಾಟನ ರಾಜಧಾನಿ ಎಂದು ಪ್ರಖ್ಯಾತವಿದೆ.
೨ ಗೋಗ್ರಹಣದ ಯುದ್ಧ
೩ ಶಾಲಿವಾಹನ
೪ ಶರ್ವನೆಂದು ನೃಪತುಂಗನ ಹೆಸರು.
೫ ಬೇಲೂರು
೬ ಶ್ರವಣಬೆಳ್ಗೊಳ
೭ ನಿಡುನಿಂದಿರುವ ಗೊಮ್ಮಟ ಮೂರ್ತಿಗಳು

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...