Home / ಕವನ / ಕವಿತೆ / ಸರಿಗೆಯಲಿ ಸಿಲುಕುತಿದೆ

ಸರಿಗೆಯಲಿ ಸಿಲುಕುತಿದೆ

ಸರಿಗೆಯಲಿ ಸಿಲುಕುತಿದೆ
ಹೃದಯಸ್ವರಂ,
ಹೃದಯದಲಿ ಕಲುಕುತಿದೆ
ವಿರಹಜ್ವರಂ;
ಎತ್ತ ನಡೆದವನೆಂದು
ಮತ್ತೆನಗೆ ಬಹನೆಂದು
ಮನಸಿನೋಪಂ,
ಬಾಗಿಲೊಳೆ ನಿಲುಕುತಿದೆ
ನಯನ ದೀಪಂ.

ಮರಳುವೊಸಗೆಯ ಬೀರಿ
ಗುಡುಗು ಮೊಳಗೆ,
ಮನೆಯ ದಾರಿಯ ತೋರಿ
ಮಿಂಚು ತೊಳಗೆ,
ಬಂದರೆಲ್ಲಿದರೆಲ್ಲ,
ನೀನನಿತೆ ಬಂದಿಲ್ಲ
ವೇಕೆ ನಲ್ಲ?
ಮುಗಿಲ ಸಜ್ಜೆಯ ಭೇರಿ
ಕೇಳಿಸಿಲ್ಲ?

ಬಸಿರೊಳೆಮ್ಮಯ ಕೂಸು
ಬಂದಂದಿನಿಂ,
ನವಿಲ ಮದುವೆಯ ಲೇಸು
ಸಂದಂದಿನಿಂ,
ತೆರಳಿನ್ನು ಮರಳಿಲ್ಲ;
ನಿನ್ನೊಸಗೆ ನನಗಿಲ್ಲ
ದೊಲೆವೆನಿಲ್ಲಿ,
ಗೂಡುಬೆಳಕೊಲು ಬೀಸು
ವಿರುಳಿನಲ್ಲಿ.

ಹಾಲನೂಡಿಸೆ ಹುಬ್ಬೆ
ಹಸುಳೆ ತೆನೆಗೆ,
ಬತ್ತಿದೆದೆಯಕಟ್ಟಬ್ಬೆ
ಗಿಹುದೆ ನನಗೆ?
ನುಡಿಗೆ ನುಡಿ ಮೂಡಿಲ್ಲ,
ಮಗುವಿನಡಿ ಕೂಡಿಲ್ಲ
ದನಿತರೊಳಗೆ
ಸೆಳೆದಳದನಿಳೆ ತಬ್ಬೆ
ತನ್ನ ಬಳಿಗೆ.
* * * *

ಎದೆಯ ಬಯಕೆಯ ಗನಿಯೊ
ಳೊಗೆದ ರನ್ನ
ಎವೆಯನೊಲ್ಲದ ಹನಿಯೊ
ಲುದುರಿತೆನ್ನ!
ಇಲ್ಲಿ ನೀನಿರೆ, ನಲ್ಲ,
ಅಂತಾಗುತಿರಲಿಲ್ಲ-
ಇನನಿಲ್ಲದೆ
ಕಮಲಮದು ಕಮಲಿನಿಯೊ
ಳಿರಬಲ್ಲುದೆ?

ಬರದಿ ನೀರಗೆವಲ್ಲಿ
ನಿಧಿಯನೆಟಕಿ
ಪಡೆದಣುಗನೊಗೆದಲ್ಲಿ
ವಿಧಿಯ ಕಟಕಿ
ಗಿಡುಗನೆನೆ ಮರಿಗಿಳಿಯ
ತುಡುಗೆ ನೀನಿರೆ ಬಳಿಯ
ಲಿಂದು, ನಲ್ಲ,
ಚಿಲಿಮಿಲಿವ ಗೂಡಲ್ಲಿ
ಮೌನವಲ್ಲ!

ಬಳ್ಳಿಗೆಲ್ಲವ ಸಲ್ಲಿ
ಸುವಳೆ ಧರಣಿ?
ಬೆಳಕವಳಿಗಕಟೆಲ್ಲಿ
ತರದೆ ತರಣಿ?
ಧರಣಿಯಕ್ಕರೆ ಸವಿಸೆ,
ತರಣಿ ಮೋರೆಯನವಿಸೆ,
ಬಳ್ಳಿ ತಾರೆ,
ತಂದೆ ತಾಯವರಲ್ಲಿ
ಯಾರ ದೂರೆ?

ಕುರುಡನರಗನಸಂತೆ
ಬಗೆದು ಬೇಯೆ,
ಗರಿಮುರಿದ ಖಗದಂತೆ
ನೆಗೆದು ನೋಯೆ,
ನನ್ನ ಬಾಳಕಟಿನಿಸೆ?
ಹಣ್ಣು ಹುಳುವಿನ ತಿನಿಸೆ?
ಎದೆಯ ತಿರುಳು
ಕೊರೆಯೆ ಸೋರುವ ಚಿಂತೆ
ಹಗಲು ಇರುಳು!
* * * *

ಸರಿದೊಮ್ಮೆ ಬರಸಲ್ಲ
ದಲರಿನಳಿವೊ?
ಸರಿದಂತೆ ಬರಬಲ್ಲ
ಉಡುವಿನಿಳಿವೊ?
ಮರುತರಂಗಿಪ ತೆರೆಯೊ?
ಹುಳು ಪತಂಗಿಪ ಸೆರೆಯೊ?
ಮರಳಿ ಚನ್ನ
ಬಹನೆ, ಬಾರನೆ, ನಲ್ಲ,
ಬಸಿರೊಳೆನ್ನ?

ಎಳೆಯೊಳಿಂಗಿದ ಗೀತಿ
ಮಾರುಲಿಸದೆ,
ಸೊಡರೊಳಾರಿದ ಜ್ಯೋತಿ
ಮಾರುರಿಸದೆ,
ಮರುಕಣಿಸಲೆಂತೆರೆಯ?
ಮರಳಿ ಮುದ್ದಿನ ಮರಿಯ
ನಳವೆ ದೊರೆಯೆ?
ಮುತ್ತು ಮೊಳೆವುದೆ ಸ್ವಾತಿ
ಗಿರಿಯೊಳೆರೆಯೆ?

ಕೋರಿಕೆಯೊಳಡಿಮೆಟ್ಟಿ
ಮುಂದೆ ಪಾರೆ,
ಶಂಕೆ ಹಾವಸೆಗಟ್ಟಿ
ಮನಸು ಜಾರೆ,
ಮೇದ ಮೇವನೆ ಮೇವ
ಕಟ್ಟು ಕಂಬದ ಗೋವ
ತೆರದೊಳೆನ್ನ
ನೆನದ ನೆನವೊಳೆ ದಿಟ್ಟಿ
ಗೊಳುವೆ ನಿನ್ನ.

ಬಲೆಯ ನೀರಲಿ ಸುತ್ತ
ಬರುವ ತನ್ನ
ನೆಳಲನಿನೆಯಂ ಗೆತ್ತ
ಮೀನೊಲೆನ್ನ
ಮನದಿ ಸುಳಿಯುವ ನಿನ್ನ
ನೆನವೆ ನೀನೆನುತೆನ್ನ
ದಿನವ ಕಳೆವೆ-
ಕರೆ ಎತ್ತ ತೆರೆಯತ್ತ
ಮರಳದೊಳವೆ?
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...