Home / ಕವನ / ಕವಿತೆ / ಚಿಕುಹೂ

ಚಿಕುಹೂ

ಚಿಕುಹೂ ಚಿಕುಹೂ ಚಿಕುಹೂ-
ಸನ್ನೆಯವೊಲು ಮುಹುರ್ಮುುಹು
ಆರೆಚ್ಚರಕೀ ತುತ್ತುರಿ
ಬಾನೊಳು ಮೊಳಗುತ್ತಿದೆ?
ಎನ್ನ ಕಿವಿಯೊಳೀ ಸವಿ ದನಿ
ಸಿಂಪಿಸುತಿದೆ ಸೊದೆಸೀರ್ಪನಿ
ವಿಸ್ಮೃತಿಗೈದಿರುವಾತ್ಮವ-
ನುಜ್ಜೀವಿಪ ತೆರದೆ.

ದಿವಮರೆತಪ್ಸರೆ ಎಚ್ಚರೆ
ಅಗಲುವಳೆಂದಿಳೆ ಬೆಚ್ಚಿರೆ
ಹರಿಕಾರರನಮರಾವತಿ
ದೊರೆಯಟ್ಟಿಹನೆನಲು
ಈ ದನಿ ಬರೆ ಲಾಲಿಸುತದೆ
ಪಯಣಕೆ ಸಡಗರಗೊಳುತಿದೆ
ಮನ್ಮಾನಸ ಸರೋವರದ
ಕರಣಗಳಂಚಿನೊಳು.

ಚಿಕುವೂ ಚಿಕುವೂ ಚಿಕುವೂ-
ಕಂಪೆರಚಿದೆ ಈ ದನಿಹೂ
ರಸ ಸೂಸಿದೆ ಸ್ವಾಹಾ
ಎಂದುಜ್ವಲಿಸಲು ನೆನಹು
ನೋಡುತಲಿದ್ದರು ಕಾಣದು
ಆಲಿಸುತಿದ್ದರು ಕೇಳದು
ಸರ್ವೇಂದ್ರಿಯವಿದಕಾಗಿರೆ
ಪ್ರತ್ಯಕ್ಷವೆ ಮರಹು.

“ಬಂದಿರ ತಂದಿರ ಕೊಡುವಿರ
ಕೊಟ್ಟಿರ ಕೊಳುವಿರ ನಡೆವಿರ”-
ನಿಸ್ಸ್ನೇಹದ ಸಭ್ಯತೆಯೊಳು
ಈ ನಡೆವಳಿಯೆಲ್ಲಾ
ನಡೆಯುತ್ತಿವೆ ಹೊರಬಗೆಯೊಳು,
ಮನೆಯಾಚೆಯ ಗದ್ದಲದೊಲು;
ಯೋಗಕ್ಷೇಮದ ವೇದನೆ
ಇಂದೆನಗಿನಿತಿಲ್ಲ.

ಭವಿ ನಾ ತಾಪಸಿ ನಾನು
ಕವಿ ನಾ ಕಿಂಕರ ನಾನು
ನಾ ನಾ ಇದಕಿತಿಯೇನಿದೆ
ಮಿತಿಯೇನಿದೆ, ದನಿಯೇ,
ಥಟ್ಟನೆರಗಿ ಗರುಡನ ತೆರ
ಅಹಮೆಂಬೀ ನಿಧಿನಾಗರ-
ನೊಯ್ದಿಹೆನೀ ಮುದವಿದ್ಯುತ್-
ಸ್ಪರ್ಶವ ಮನ ಪಡೆಯೆ.

ಚಿಕುವೂ ಕುವ್ವೂ- ಏನ್ ಸವಿ!
ಒಂದೇ ಸರದೊಂದೇ ಛವಿ
ಅಜರಾಮರವಿದು ಅಚ್ಚರಿ
ಪುರಾಣ ನೂತನವು
ಕೋಟಿ ಕೋಟಿ ಕೋಗಿಲೆ ಮೈ
ತರಗೆಲೆಯಂತುದುರಿವೆ ಸೈ
ಇದನು ಹಿಡಿದು ಬಿಡುವಾಟದಿ
ಋತುಋತು ಯುಗಯುಗವೂ.

ಈಯೆಡೆ ಆಯಡೆ ಬೇರಡೆ
ಬಿಡುವಿರುವೆಡೆ ಬಿಡುವಿರದೆಡೆ
ಒಲಿವೆಡೆ ನಲಿವೆಡೆ ಅಳುವೆಡೆ
ದೇಶವಿದೇಶದೊಳು
ಜನ್ಮದಿ ಜನ್ಮದಿ ನಾನಿದ
ಬಗೆಬಗೆಯೊಳು ಕೇಳಿದ ಹದ
ಇಂದೆಂತೆಯೊ ತೆರೆ ತರೆಯುತ
ತೋರಿದೆ ಹೃದಯದೊಳು-

“ಓ ಕೆಳೆಯಾ, ಮನೆ ನೆನೆಯಾ
ಬಿಡುಬಿಡು ಭವದೀ ಕೊನೆಯಾ
ದಿವ್ಯತೆಗೆಯೆ ಕಾಮಂಗೊಂ
ಡೆದೆ ಎರಕೆಯನೆರೆಯಾ”
ಎಂಬರ್ತಿಯ ಆರ್ತಸ್ವರ-
ವಿದು ಬಗೆಗೊಳೆ, ನಾ ಕಾತರ-
ಗೊಂಡೋಗುಟ್ಟುವೆ ನೆನೆನೆನೆ-
ದಾ ದೂರದ ಕರೆಯಾ.

ಚಿಕುವೂ ಕುವು ಕುವು ಟಿಇವೂ-
ಕಾರ ತಂಪು ಮಿಂಚ ಹೊಳಹು
ದಾಳಿಂಬೆಯ ರುಚಿ ಅಗಲಿದ
ಕಾದಲರೆದೆ ಕಾವು,
ಮಗು ತಾಯಿಗೆ, ಕವಿ ಚೆಲುವಿಗೆ,
ನನ್ನಿಗ ನನ್ನಿಗೆ, ಪರಮಗೆ
ಭಕ್ತರು ಹಂಬಲಿಸುವ ಬಗೆ
ಈ ಕೋಗಿಲೆಯುಲಿವು.

ದನಿಹಣ್ಣಿಂದಮೃತದ ರಸ
ತೊಟ್ಟಿಡಲಿಂತೆದೆ ತಾಮಸ-
ವುಳಿದುಜ್ವಲಿಸಿರೆ ಈ ಮಹ-
ದನುಭವಕೇನೆಂಬೆ?
ಈ ಶಾಶ್ವತ ರುತಿಗೊಂದಿದ
ಅಂದಂದಿನ ಸ್ಮೃತಿಯೋಲಿದ
ಪಿಡಿವಾನಂದದೊಳಾನಂ-
ತ್ಯವ ಮುಟ್ಟಿಹೆನೆಂಬೆ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...