Home / ಕವನ / ಕವಿತೆ / ನನ್ನ ನಾಯಿ

ನನ್ನ ನಾಯಿ

ಹೆರರ ನೋವಿಗೆ ಅಯ್ಯೊ ಎಂದು
ಮರುಗಿ ಸುಯ್ಯಲನಿಡಲು ಒಲವೆ?
ಹಿರಿಯ ಸುಖದಿರವೆನ್ನ ದೆನ್ನುವ
ಅರಿವು ಒಲಿದವಗಿರುವುದೆ?

ಜನುಮದೊಂದಿಗೆ ಜೊತೆಯ ಕೂಡಿ
ಕೊನೆಯವರೆಗೂ ಬೆನ್ನ ಬಿಡದ
ಜನುಮದುನ್ನತಿ ಕುಲದ ಹೆಮ್ಮೆಯ.
ಕಟ್ಟ ಕಳೆವುದೆ ಕರುಣೆಯು?

ಕೊಳದ ಕರೆ ಬಳಿ ಅಂದು ಮರುಗಿದೆ
ಸುಳಿದ ನೋವಿನ ಅಳುವ ಕೇಳಿ,
ಬೆಳೆದ ಇರುಳೊಳು ದನಿಯನರಸಿ
ಮನದೊಳಳುಕುತ ನಡೆದೆನು.

ಮುಗಿಲ ಬೆಳ್ಳಿಯ ಪೊರೆಯ ಹೊದೆದು
ಸೊಗಸುಕನಸನು ಕಾಣುವಂದದಿ
ನಗುವ ಚಂದ್ರನ ಬೆಳಕಿನೊಳಗೆ
ಕಂಡೆ ತಬ್ಬಲಿ ಮರಿಯನು.

ತಾಯಿ ಸತ್ತರು ಮೊಲೆಯ ಬಿಡದಾ
ನಾಯ ಮರಿಯ ಗೋಳ ಕಂಡೂ
ಮೈಯ ಮುಟ್ಟಲು ತಡೆದುದಂದು
ಜಾತಿ ಹೆಚ್ಚಿನ ಹೆಮ್ಮೆಯು.

ಕೊರೆವ ಚಳಿಯೊಳು ದಿಕ್ಕುಗಾಣದ
ಮರಿಯ ತೊರೆಯಲು ಮನವು ಬಹುದೇ?
ಕೊರಲೊಳಿಟ್ಟೆನು ಬಳ್ಳಿಕುಣಿಕೆಯ
ಮನೆಗೆ ನಡೆಸಿದೆ ಮೆಲ್ಲನೆ.

ಅಂದು ಮಕ್ಕಳ ಹರುಷ ಮೀರಿತು
ಮುಂದೆ ಕುಣಿದರು ಕೈಯ ತಟ್ಟಿ
ಕಂದನಂದದಿ ಅಂದು ಮೊದಲು
ಮರಿಯ ಸಾಕಿದೆವೆಲ್ಲರು.

ಹಾಲು ಅನ್ನವನುಣಿಸಿ ನಲಿದೆವು
ಮೇಲುತಿಂಡಿಗಳೆಲ್ಲವಿತ್ತೆವು
ಮೈಲಿಗೆಯ ಭಯದಿಂದ ಮೈಯನು
ಮುಟ್ಟಗೊಡಿಸೆವು ಆದರೂ.

ಮರಿಯು ನಮ್ಮ ಬಿಂಕವರಿತು
ಹೊರಗೆ ನಿಲುವುದು ಹೊಸಿಲ ದಾಟದು!
ಹಿರಿಯತನದ ಹೆಮ್ಮೆಗಡಲು
ಹರಿಯತೆಮ್ಮಯ ಮಧ್ಯದಿ.

ಆರು ತಿಂಗಳ ಕಳೆದೆವಿಂತು,
ಊರೆ ಮೆಚ್ಚಿದ ಮರಿಯನೊಂದು
ಇರುಳೊಳೊಯ್ದನು ಕಳ್ಳನದನು
ಮನೆಯ ಮಕ್ಕಳ ಮುದ್ದನು.

ಎದ್ದು ಹುಡುಗರು ನಾಯ ಕಾಣದೆ
ಬಿದ್ದು ಬೀಳುತಲೋಡಿಬಂದು
‘ಕದ್ದರೇನೋ? ಮರಿಯ ಕಾಣೆವು’
ಎಂದು ಕಂಬನಿಗರೆದರು.

ಕೇರಿ ಕೇರಿಗೆ ಜನರನಟ್ಟಿದೆ
ಊರ ಊರನು ತಿರುಗಿ ಕೇಳಿದೆ
ಆರ ಕಂಡರು ‘ಮರಿಯ ಕಾಣಿರ’
ಎಂದು ಹುಚ್ಚನ ತೆರದೊಳು.

ಮೂರುದಿನಗಳು ಹುಡುಕಿ ಕೊನೆಗೆ
ಊರ ಮುಂದಿನ ಮನೆಯ ಹೊರಗೆ
ಏರುಬಿಸಿಲೊಳು ಕುರುಬನೆಡೆಯೊಳು
ಕಂಡೆ ಮಲಗಿದ ಕುನ್ನಿಯ.

ಹರುಷ ಮೀರಿತು ಬಾಲವಾಡಿಸಿ
ಗುರುತ ಹಿಡಿಯುತ ನೆಗೆಯೆ ನಾಯಿ
ಕುರುಬಗೌಡನ ಗದರಿ ಕೇಳಿದೆ
‘ಕದ್ದೆ ಯೇತಕೊ ಮರಿಯನು?’

ನಡುಗಿ ಕೈಗಳ ಮುಗಿದು ನಿಂತು
ನುಡಿದನೀ ಪರಿ ಕುರುಬಗೌಡನು
‘ಒಡೆಯ, ಮರಿಯನು ಕದಿಯಲಿಲ್ಲವು
ಹಿಂದೆ ಬಂದಿತು ಕರೆಯದೆ.

‘ಅಂದು ಊರೊಳಗಿರುಳು ತಂಗಿ
ಮುಂದೆ ಪಯಣವ ಬೆಳೆಸಲೆಂದು
ಮಂದಿ ಮಲಗಿದ ಹೊತ್ತಿನಲ್ಲಿ
ನಿಮ್ಮ ಜಗಲಿಗೆ ಬಂದೆನು.

‘ಮರಿಯು ಬಗುಳುತ ಅಡ್ಡಗಟ್ಟಲು
ತೆರೆದು ಬುತ್ತಿಯ ರೊಟ್ಟಿಯಿಟ್ಟೆನು
ಹರುಷದಿಂದಲಿ ತಲೆಯ ತಟ್ಟಿ
ಮೈಯ ತಡಹಿದೆ ನಾಯಿಯ.

‘ಚಳಿಗೆ ನಡುಗಲು ಮರುಕದಿಂದ
ಕೆಳಗೆ ಕಂಬಳಿಹಾಸಿ ಜೊತೆಯೊಳು
ಚೆಲುವು ಮರಿಗೂ ತಾಣವಿತ್ತೆನು
ಒಲುಮೆ ಬೆಸೆಯಿತು ಇಬ್ಬರ.

‘ಮೂಡ ಬೆಳಗಲು ಹೊರಟೆನಂದು
ಓಡಿ ಹಿಂದೆಯೆ ಬರಲು ಮರಿಯು
ಕೂಡಲಪ್ಪುತ ಮುತ್ತನಿಟ್ಟು
ಕರೆದು ತಂದೆನು ಊರಿಗೆ.

‘ಬಂಧುಬಳಗಗಳಿಲ್ಲವೆನಗೆ
ಕಂದನೀ ಮರಿ-ಕಳೆಯಲಾರೆ’
ಎಂದ. ಗೌಡನ ಕಣ್ಣು ಹನಿತುದು
ಮರಿಯ ಹಗ್ಗವ ಹಿಡಿಯಲು.

ಹಗ್ಗವೆಳೆದೆನು; ಕುನ್ನಿ ಬಾರದು
ಸಗ್ಗದೆನ್ನಯ ಸವಿಯ ನುಡಿಗೆ.
ಹಗ್ಗ ಸಡಿಲಿಸಿ ಬಿಟ್ಟೆನದನು
ಕುರುಬ ತಬ್ಬಿದ ಸೊಣಗನ!

ವರುಷ ನೂರರ ಕರುಣೆ ಬಿಗಿವುದೆ
ಕುರುಬನಿರುಳೊಳು ಬಿಗಿದ ಕಟ್ಟ!
ಮರಿಯ ನಡತೆಗೆ ಕೋಪಗೊಳ್ವುದೆ?
ಕರುಣೆ ಒಲುಮೆಗೆ ಸಾಟಿಯೆ?

ಒಲಿದರಿರವಿನ ಬಗೆಗಳೆರಡೆ?
ಒಲುಮೆಗಡ್ಡಲೆ ಕುಲದ ಹೆಮ್ಮೆ?
ಒಲುಮೆಬೆಸುಗೆಯ ಸುಖದ ಸವಿಯನು
ತಿಳಿಯದೇ ಬಡಜಂತುವು!

ಕಣ್ಣ ನೀರೊಳು ತೊಳೆದೆನಂದು
ಜನ್ಮ ದುನ್ನತಿ ಹೆಮ್ಮೆ ಕೊಳೆಯ-
ನನ್ನ ಒಲುಮೆಗೆ ಅಡ್ಡ ಬಂದ
ಕರುಣೆ ಹಾಯದ ಬಿಂಕವ.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...