Home / ಲೇಖನ / ಇತರೆ / ಬಂಡಾಯ

ಬಂಡಾಯ

ಪ್ರಿಯ ಸಖಿ,
ಯಾವ ತಂಟೆ ತಕರಾರುಗಳಿಲ್ಲದೇ ಎಲ್ಲವನ್ನೂ ಒಪ್ಪಿಕೊಂಡು ಸದ್ದಿಲ್ಲದೇ ಜೀವನವನ್ನು ಸಾಗಿಸುವವರು ಹಲವಾರು ಮಂದಿ. ಆದರೆ ತಮ್ಮ ಸಿದ್ಧಾಂತಗಳಿಗಾಗಿ, ವ್ಯವಸ್ಥೆಯೆದುರು ಸದಾ ಬಂಡೆದ್ದು ಹೋರಾಟವನ್ನೇ ಬದುಕಾಗಿಸಿಕೊಂಡವರು ಕೆಲಮಂದಿ. ಆದರೆ ಕವಿ ಗೋಪಾಲಕೃಷ್ಣ ಅಡಿಗರು ‘ಬಂಡಾಯ’ ಎಂಬ ತಮ್ಮ ಕವನದಲ್ಲಿ ಹೀಗೆ ಹೇಳುತ್ತಾರೆ.

ದಂಗೆಯೇಳುತ್ತಲೇ ಇರಬೇಕಾಗುತ್ತದೆ
ಇಲ್ಲಿ ಪ್ರತಿಯೊಬ್ಬನೂ ತನ್ನ ತನ್ನ
ಚಿನ್ನದ್ದೋ, ರನ್ನದ್ದೋ, ಕಬ್ಬಿಣದ್ದೋ, ಮರದ್ದೋ
ಅಥವಾ ಬರಿ ಮಣ್ಣಿನದೋ ಸಿಂಹಾಸನವ
ಹುಡುಕಿ ತೆಗೆದು ಗುರುತಿಸಿ ಅಲ್ಲಿ
ಆಸನಾರೂಢನಾಗುವವರೆಗೆ

ವ್ಯಕ್ತಿಯೊಬ್ಬ ತನ್ನ ದಾರಿಯನ್ನ ಕಂಡುಕೊಂಡ ನಂತರ ಗುರಿಸೇರುವ ತನಕ, ಹಾದಿಯಲ್ಲಿ ಎದುರಾಗುವ ಎಲ್ಲ ಅಡ್ಡಿ ಆತಂಕಗಳನ್ನು ಎದುರಿಸಿ ನಿಲ್ಲಬೇಕು. ಎಷ್ಟೋ ಬಾರಿ ವ್ಯವಸ್ಥೆಯೆದುರು ದಂಗೆಯೇಳಬೇಕು. ಎಲ್ಲಿಯವರೆಗೂ ಈ ಹೋರಾಟ ಎನ್ನುವುದನ್ನು ಹೇಳುತ್ತಾ ಕವಿ.

ತನ್ನೊಳಗೆ ತನ್ನ ನಿಜದ ಸೆಲೆ ಪುಟಿವನಕ
ತನ್ನ ವ್ಯಕ್ತಿತ್ವಕೆ ಚಹರೆಯ ಪಟ್ಟಿ ಸಿದ್ಧವಾಗುವವರೆಗೆ
ತನ್ನ ಪರಿಮಿತಿಯೊಳಗೆ ಶಾಖೋಪಶಾಖೆಗಳು
ಹುಟ್ಟಿ ಹಬ್ಬುವವರೆಗೆ

ಎನ್ನುತ್ತಾರೆ. ಈ ರೀತಿಯ ಹೋರಾಟದಿಂದಲೇ ವ್ಯಕ್ತಿಯೊಬ್ಬ ಗಟ್ಟಿಯಾಗುತ್ತಾ ಹೋಗುತ್ತಾನೆ. ತನ್ನ ಪರಿಮಿತಿಯನ್ನು ಕಂಡುಕೊಳ್ಳುತ್ತಲೇ ಅದನ್ನು ಮೀರಲು
ಯತ್ನಿಸುತ್ತಾನೆ. ಹೊರಗಿನ ವ್ಯವಸ್ಥೆಗೆದುರಾಗಿ ಹೀಗೆ ಬಂಡಾಯವೇಳುವುದು ಸುಲಭವಾದರೆ ಮನದೊಳಗಿನ ವೈರಿಗಳ ವಿರುದ್ಧ ದಂಗೆಯೇಳುವುದು ತುಂಬಾ ಕಷ್ಟ! ಹೀಗೆ ಮನದೊಂದಿಗೆ ಹೋರಾಡಿ ಗೆದ್ದವನು ವಿಶಿಷ್ಟ ವ್ಯಕ್ತಿತ್ವದವನಾಗುತ್ತಾನೆ. ಸಮಾಜಕ್ಕೇ ಮಾನವತೆಯ ಸಂಕೇತವಾಗುತ್ತಾನೆ ಎನ್ನುತ್ತಾರೆ ಕವಿ.
ಕವನವಮ್ನ ಮುಂದುವರೆಸುತ್ತಾ,

ಬಂಡಾಯದ ಘೋಷ ಮೊಳಗುತ್ತಲೇ ಇರಬೇಕು.
ಗೊಂಚಲು ಗೊಂಚಲಾಗಿ ಸಿಹಿಸಿಹಿ ಹಣ್ಣು
ಪಕ್ವವಾಗುವವರೆಗೆ; ತಿರುಳ ಸಿಹಿ ಅನ್ಯರಿಗೆ
ಬಿತ್ತು ಭವಿಷ್ಯಕ್ಕೆ; ಮಾನವತ್ವದ ಬುನಾದಿಗಿನ್ನೊಂದು ಕಲ್ಲು
…………………………..

ಎನ್ನುತ್ತಾರೆ. ಮನದ ವಿಕಾರಗಳನ್ನೆಲ್ಲಾ ಗೆಲ್ಲುವುದು ಸುಲಭ ಸಾಧ್ಯವಲ್ಲವಾದರೂ ಆ ವಿಕಾರಗಳ ವಿರುದ್ಧ ದಂಗೆಯೇಳುತ್ತಲೇ ಇರಬೇಕು. ಯಾರಿಗೆ ಗೊತ್ತು ನಾಳೆಗೆ ಗೆಲುವೂ ಸಿಕ್ಕಬಹುದಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...