Home / ಕವನ / ಕವಿತೆ / ಈದ್ ಮುಬಾರಕ್

ಈದ್ ಮುಬಾರಕ್

ನೆತ್ತರ ಹೆಪ್ಪುಗಟ್ಟಿಸುವ ಅಮವಾಸ್ಯೆ ಕತ್ತಲು ಕಳೆದು
ಸಣ್ಣ ಗೆರೆಯಂತೆ ಮೂಡಿದ ಈದ್ ಕಾ ಚಾಂದ್
ಮೋಡಗಳಿಲ್ಲದ ಶುಭ್ರ ಅಗಸದಲ್ಲಿ ಕಾಣುತ್ತಿದ್ದಾನೆ ನೋಡು
ರಂಜಾನ್ ಹಬ್ಬದ ಸಣ್ಣ ಗೆರೆಯಂತಹ
ಚಂದ್ರನ ನೋಡಿದ ಮಗಳು ಓಡೋಡಿ ಬಂದು
“ಅಮ್ಮಿ ಈದ್ ಮುಬಾರಕ್” ಹಬ್ಬದ ಚಂದ್ರನ ಕಂಡೆನಮ್ಮಾ
ನಾಳೆ ಬಿರ್ಯಾನಿ, ಶುರಖುರಮಾ ಮಾಡುವೆಯಲ್ಲ?
ಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ
ಝಂ ಝಮ್‌ನಿಂದ ಪವಿತ್ರ ಸ್ನಾನ ಮಾಡುವೆ.
ಮೆಕ್ಕಾದಿಂದ ಬಂದ ಝಂ ಝಮ್ ತೀರ್ಥ ಇಟ್ಟಿರುವೆಯಲ್ಲ
ಎಂದು ಉಲಿದವಳೇ ಎಲ್ಲರಿಗೂ ಮುಬಾರಕ್ ಹೇಳಲು
ಜಿಂಕೆಯಂತೆ ಜಿಗಿಯುತ್ತಾ ಹಾರಿ ಹೋದಳು ಮಗಳು
ಮಗಳ ಸಂಭ್ರಮದ ಕುಣಿದಾಟ ನೋಡಿದ
ಅಮ್ಮಿಯ ಮನದಲ್ಲಿ ಸಂಭ್ರಮ ಮೂಡಿ
ಮರುಕ್ಷಣವೇ ಮಾಯವಾಗಿ ನಿಟ್ಟುಸಿರು ಹೊರಬಿತ್ತು.
ಮಗಳೇ ನಿನ್ನ ಬಾಲ್ಯದ ತುಂಬಾ ಅಮವಾಸ್ಯೆ ಕತ್ತಲು,
ಬೆಳಕಿನ ಬೀಜ ಎಲ್ಲಿಂದ ತರಲಿ ಹೇಳು?
ನಿನ್ನ ಬಾಲ್ಯದ ಹೂ ನಳನಳಿಸಿ ಅರಳುವಾಗಲೇ
ಬೀಡಿ, ಎಲೆ, ಹೊಗೆಸೊಪ್ಪಿನ ಘಾಟು ತಪ್ಪಿಸಲಾಗಲಿಲ್ಲ
ಅಕ್ಷರ ಕಲಿತು ಮನಸು ಅರಳುವ ಸಮಯ
ತುತ್ತಿನ ಚೀಲ ತುಂಬಲು ಎಸಳು ಬೆರಳುಗಳಿಂದ
ಬೀಡಿ ತಂಬಾಕು ತುಂಬಿ ಮಡಚುತ್ತಾ
ಮೊರ ಹಿಡಿದು ಕುಳಿತೆಯಲ್ಲ ನನ್ನೊಂದಿಗೆ
ಬಾಳ ನೊಗಕ್ಕೆ ಹೆಗಲು ನೀಡಿದೆಯಲ್ಲ!

ನನ್ನ ಬಡತನದ ಶಾಪ ನಿನಗೂ ತಟ್ಟಿತೆ ಮಗು
“ಅಬ್ಬಾ”ನ ಅಂತ್ಯವಾಗಿ ಇಂದಿಗೆ ಆರು ವರ್ಷ
ಮುಳ್ಳು ಹಾದಿಯಲ್ಲಿ ಬಾಳ ಪಯಣ ಸಾಗಿತ್ತು.
ಅನಿವಾರ್ಯದ ಬದುಕು ಜಟಕಾ ಬಂಡಿ ನೂಕುತ್ತಾ
ಕರಿಮುಗಿಲ ಮರೆಸುವ ಬುರ್ಖಾಕ್ಕೆ ತೇಪೆ ಹಾಕಿರುವೆ
ಜಿಂಕೆಯಂತೆ ಪುಟಿಯುತ್ತಿದ್ದ ಮಗಳನ್ನು ನೋಡಿ
ಮಗದೊಮ್ಮೆ ಕಿಟಕಿಯಾಚೆಗಿನ ಶೂನ್ಯವನ್ನು ದಿಟ್ಟಿಸಿ
ನಿಟ್ಟುಸಿರಿಟ್ಟ ಅಮ್ಮಿಯ ದೀರ್ಘ ಉಸಿರಿನ ಸದ್ದು
ಮರುಕ್ಷಣವೇ ಕರ್ತವ್ಯ ಜಾಗೃತವಾಯ್ತು
ಪಟಪಟನೆ ಬೀಡಿ ಕಟ್ಟುಗಳ ಹಾಕಿ
ಬೀಡಿ ಕಂಪನಿ ಮಾಲೀಕರಿಗೆ ಮುಟ್ಟಿಸಬೇಕಲ್ಲವೇ?
ಅವನಿಟ್ಟ ಬಿಡಿಕಾಸು ತಂದು ಸಂತೆಗೆ ಹೋದರೆ
ಎಲ್ಲವೂ ದುಬಾರಿ ಒಂದಕ್ಕಾದರೆ ಒಂದಕ್ಕಿಲ್ಲ
ಮಗಳಿಗೆ ಮೆಹಂದಿ ಹೊಸಬಟ್ಟೆ ಎಲ್ಲಿಂದ ತರಲಿ?
ಬಡವರ ರಂಜಾನ್ ಹೀಗೆಯೇ ನೋಡು.
ಯಾವ ಬಾಯಿಯಲ್ಲಿ ಉಲಿಯಲಿ
“ಈದ್ ಮುಬಾರಕ್” ಎಂದು.
*****
ಶುರಖುರಮಾ-ಸೇವಿಗೆ ಪಾಯಸ
ಝಮ್‌-ಮೆಕ್ಕಾದ ಪವಿತ್ರನೀರು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...